ದಿಢೀರ್ ಬೆಳವಣಿಗೆ ಹಿನ್ನಲೆ ಸಿಎಂ ಬಿಎಸ್ ಯಡಿಯೂರಪ್ಪ ದೆಹಲಿಗೆ ಪ್ರಯಾಣ ಬೆಳೆಸಿದ್ದಾರೆ. ಬೆಳಗ್ಗೆ 8.30ಕ್ಕೆ ಅವರು ದೇಶದ ರಾಜಧಾನಿಗೆ ಪ್ರಯಾಣ ಬೆಳೆಸುತ್ತಿದ್ದಾರೆ. ಈ ವೇಳೆ ಕೇಂದ್ರ ಸಚಿವರು ಹಾಗೂ ಬಿಜೆಪಿ ಹೈ ಕಮಾಂಡ್ ನಾಯಕರನ್ನು ಭೇಟಿ ಮಾಡಿ ಚರ್ಚೆ ನಡೆಸಲಿದ್ದಾರೆ. ಈಗಾಗಲೇ ಸಚಿವಾಕಾಂಕ್ಷಿಗಳು ಸಂಪುಟ ವಿಸ್ತರಣೆಗೆ ಕಾದಿದ್ದು, ಸಂಕ್ರಾಂತಿಗೂ ಮೊದಲೇ ಅವರಿಗೆ ಸಿಹಿ ಸುದ್ದಿ ಸಿಗುವ ಸಾಧ್ಯತೆ ಇದೆ. ಮೂಲಗಳ ಪ್ರಕಾರ ಸಂಕ್ರಾಂತಿ ಬಳಿಕ ಸಂಪುಟ ವಿಸ್ತರಣೆ ಪ್ರಕ್ರಿಯೆಗೆ ಹಸಿರು ನಿಶಾನೆ ಸಿಗುವ ಸಾಧ್ಯತೆ ಇರುವ ಹಿನ್ನಲೆ ಸಿಎಂ ಈ ದಿಢೀರ್ ಪ್ರಯಾಣ ನಡೆಸಿದ್ದಾರೆ ಎನ್ನಲಾಗಿದೆ. ಅಲ್ಲದೇ ಇದೇ ವೇಳೆ ಗಂಗೇನಹಳ್ಳಿ ಡಿ ನೋಟಿಫಿಕೇಷನ್ ಪ್ರಕರಣದಲ್ಲಿ ಲೋಕಯುಕ್ತ ತನಿಖೆಗೆ ಹೈ ಕೋರ್ಟ್ ಸೂಚನೆ ನೀಡಿರುವುದು. ಜೊತೆಗೆ ಸಿಎಂ ಅವರಿಗೆ 25 ಸಾವಿರ ದಂಡ ವಿಧಿಸಿರುವ ಬಗ್ಗೆ ಕೂಡ ಹೈ ಕಮಾಂಡ್ಗೆ ಬಿಎಸ್ ಯಡಿಯೂರಪ್ಪ ವಿವರಣೆ ನೀಡುವ ಸಾಧ್ಯತೆ ಇದೆ.
ಜ.16 ಕ್ಕೆ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾಗಿರುವ ಅಮಿತ್ ಶಾ ರಾಜ್ಯಕ್ಕೆ ಆಗಮಿಸುತ್ತಿದ್ದಾರೆ. ಅವರ ಆಗಮನಕ್ಕೂ ಮುನ್ನವೇ ದೆಹಲಿಗೆ ತೆರಳಲಿದ್ದು, ಸಂಪುಟ ವಿಸ್ತರಣೆ ಬಗ್ಗೆ ಚರ್ಚಿಸಿ, ನಿರ್ಧಾರ ಕೈಗೊಳ್ಳಲಾಗುವುದು ಎಂದು ಬೆಳಗಾವಿಯಲ್ಲಿ ನಡೆದ ಬಿಜೆಪಿ ಕಾರ್ಯಕಾರಿಣಿಯಲ್ಲಿ ರಾಜ್ಯ ಉಸ್ತುವಾರಿ ನಾಯಕರು ಸುಳಿವು ನೀಡಿದ್ದರು.
ಪಕ್ಷದಲ್ಲಿ ಈಗಾಗಲೇ ಆಕಾಂಕ್ಷೆ ಪಟ್ಟಿ ಕೂಡ ದೊಡ್ಡದಾಗಿದೆ. ಮೂಲ ಬಿಜೆಪಿ ನಾಯಕರಾದ ಉಮೇಶ್ ಕತ್ತಿ, ಅರವಿಂದ್ ಲಿಂಬಾವಳಿ, ಸಿಪಿ ಯೋಗೇಶ್ವರ್ಗೆ ಸಚಿವ ಸಾಧ್ಯತೆ ಸಿಗುವ ಸ್ಥಾನ ದಟ್ಟವಾಗಿದೆ. ಇನ್ನು ಬಿಜೆಪಿ ಸರ್ಕಾರ ರಚಿಸುವಲ್ಲಿ ಸಹಾಯ ಮಾಡಿದ ಎಂಟಿಬಿ ನಾಗರಾಜ್, ಆರ್ ಶಂಕರ್ ಸೇರಿದಂತೆ ಮುನಿರತ್ನಗೆ ಸಚಿವ ಸ್ಥಾನ ಕೊಡಿಸಲು ಬಿಎಸ್ ಯಡಿಯೂರಪ್ಪ ಕಸರತ್ತು ನಡೆಸಿದ್ದು, ಯಾರ್ಯಾರಿಗೆ ಮಂತ್ರಿ ಸ್ಥಾನ ಸಿಗಲಿದೆ ಎಂಬುದು ಕಾದು ನೋಡಬೇಕಿದೆ