ಹೊಸದಿಲ್ಲಿ: ಮೇಕೆದಾಟು ಸಮಾನಾಂತರ ಅಣೆಕಟ್ಟು ಕಟ್ಟುವ ಕರ್ನಾಟಕ ಸರ್ಕಾರದ ಮನವಿಯನ್ನು ಕೂಡಲೇ ಪುರಸ್ಕರಿಸುವಂತೆ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಅವರು ಕೇಂದ್ರದ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರಿಗೆ ಮನವಿ ಮಾಡಿದರು.
ಕೇಂದ್ರದ ಸಚಿವರಾದ ಪ್ರಲ್ಹಾದ್ ಜೋಶಿ ಸುರೇಶ್ ಅಂಗಡಿ ಅವರೊಂದಿಗೆ ದೆಹಲಿಯ ಜಲಶಕ್ತಿ ಸಚಿವಾಲಯದ ಕಚೇರಿಯಲ್ಲಿ ನಡೆದ ಈ ಭೇಟಿಯ ಸಮಯದಲ್ಲಿ ಬೆಂಗಳೂರು ಮಹಾನಗರಕ್ಕೆ ಕುಡಿಯುವ ನೀರು ಒದಗಿಸಲು ಅನುಕೂಲವಾಗುವಂತೆ 4.75 TMC ನೀರನ್ನು ಸದ್ಬಳಕೆ ಮಾಡಿಕೊಳ್ಳುವ ದೃಷ್ಟಿಯಿಂದ ಮೇಕೆದಾಟು ಸಮಾನಾಂತರ ಅಣೆಕಟ್ಟು ನಿರ್ಮಾಣಕ್ಕೆ ಅಗತ್ಯ ಸಹಕಾರ ನೀಡುವಂತೆ ಸಚಿವ ರಮೇಶ್ ಜಾರಕಿಹೊಳಿ ಅವರು ಕೇಂದ್ರ ಸಚಿವರಿಗೆ ಮನವಿ ಮಾಡಿದರು.
ಕೃಷ್ಣಾ ಜಲವಿವಾದಗಳಿಗೆ ಸಂಬಂಧಿಸಿದಂತೆ ಕೃಷ್ಣಾ ಮೇಲ್ದಂಡೆ ಯೋಜನೆ 3ನೇ ಹಂತದ ಅನುಷ್ಠಾನಕ್ಕೆ ಅವಶ್ಯವಿರುವ ಅಧಿಸೂಚನೆಯನ್ನು ಕೂಡಲೇ ಹೊರಡಿಸುವಂತೆ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಒತ್ತಾಯಿಸಿದರು.
ಭದ್ರಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆಯಾಗಿ ಘೋಷಿಸುವಂತೆಯೂ ಜಲಸಂಪನ್ಮೂಲ ಸಚಿವರು ಇದೇ ಸಂದರ್ಭದಲ್ಲಿ ಒತ್ತಾಯಿಸಿದರು.
ಇದಕ್ಕೆ ಪೂರಕವಾಗಿ ಸ್ಪಂದಿಸಿದ ಕೇಂದ್ರ ಜಕಶಕ್ತಿ ಸಚಿವರು ಕರ್ನಾಟಕ ಸರ್ಕಾರದ ಮನವಿಗಳ ಕುರಿತು ಶೀಘ್ರವಾಗಿ ಚರ್ಚಿಸಿ ನಿರ್ಧರಿಸುವ ಭರವಸೆ ನೀಡಿದರು.