ಬೆಂಗಳೂರು,ಜ.16- ವೈದ್ಯರು ಸೂಚನೆ ಕೊಟ್ಟಾಗ ನಾನು ಕೂಡ ಕೋವಿಶೀಲ್ಡ್ ಲಸಿಕೆಯನ್ನು ಪಡೆಯಲು ಸಿದ್ದನಿದ್ದೇನೆ. ರಾಜ್ಯದ ಜನತೆ ಯಾವುದೇ ಕಾರಣಕ್ಕೂ ಆತಂಕಕ್ಕೆ ಒಳಗಾಗದೆ ಮುಕ್ತ ಮನಸ್ಸಿನಿಂದ ಲಸಿಕೆ ಪಡೆಯುವ ಮೂಲಕ ಕೊರೊನಾ ಸೋಂಕಿನಿಂದ ಮುಕ್ತರಾಗಬೇಕೆಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮನವಿ ಮಾಡಿದ್ದಾರೆ. ನಗರದ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಕೋವಿಡ್ ಲಸಿಕೆಗೆ ಚಾಲನೆ ನೀಡಿದ ಬಳಿಕ ಮಾತನಾಡಿದ ಅವರು, ವಿಜ್ಞಾನಿಗಳ ಸತತ ಪರಿಶ್ರಮದಿಂದಾಗಿ ಕೋವಿಡ್ಗೆ ಲಸಿಕೆಯನ್ನು ಕಂಡು ಹಿಡಿಯಲಾಗಿದೆ. ಜನತೆ ಇದರ ಬಗ್ಗೆ ಎಳ್ಳಷ್ಟು ಅನುಮಾನಪಡದೆ ಲಸಿಕೆಯನ್ನು ಪಡೆಯಬೇಕೆಂದು ಸಲಹೆ ಮಾಡಿದರು.
ರಾಜ್ಯದಲ್ಲಿ ಇಂದು ಏಕಕಾಲಕ್ಕೆ 243 ಕೇಂದ್ರಗಳಲ್ಲಿ ಲಸಿಕೆಯನ್ನು ನೀಡಲಾಗುತ್ತಿದೆ. ಪ್ರತಿಯೊಂದು ಕೇಂದ್ರಗಳಲ್ಲಿ 100 ಜನರಿಗೆ ನೀಡಲಾಗುತ್ತದೆ. ನಂತರದ ದಿನಗಳಲ್ಲಿ ಇದರ ಪ್ರಮಾಣ ಹೆಚ್ಚಾಗಲಿದೆ ಎಂದು ಸಿಎಂ ತಿಳಿಸಿದರು. ಭಾರತದಲ್ಲಿ ಇಂದು ವಿಶ್ವದಲ್ಲೇ ಅತಿದೊಡ್ಡ ಕೋವಿಡ್ ಲಸಿಕೆ ಅಭಿಯಾನಕ್ಕೆ ಚಾಲನೆ ನೀಡಲಾಗಿದೆ. ಇದು ವಿಶ್ವದ ಗಮನವನ್ನು ಸೆಳೆದಿದೆ. ಕರ್ನಾಟಕ ಮತ್ತು ರಾಷ್ಟ್ರದ ಪರವಾಗಿ ಪ್ರಧಾನಿ ನರೇಂದ್ರಮೋದಿ ಮತ್ತು ವಿಜ್ಞಾನಿಗಳನ್ನು ಅಭಿನಂದಿಸುತ್ತೇನೆ ಎಂದು ಹೇಳಿದರು.
ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಸದಸ್ಯರಾಗಿದ್ದ ಸುದರ್ಶನ್ ಬಲ್ಲಾಳ್ ಸೇರಿದಂತೆ ಅನೇಕರು ಲಸಿಕೆಯನ್ನು ಪಡೆಯಲಿದ್ದಾರೆ. ರಾಜ್ಯದಲ್ಲಿ ಈ ಅಭಿಯಾನವನ್ನು ಯಶಸ್ವಿಯಾಗಿ ನೆರವೇರಿಸಲು ಸರ್ಕಾರ ಎಲ್ಲ ರೀತಿಯ ಕ್ರಮಗಳನ್ನು ತೆಗೆದುಕೊಂಡಿದೆ. ಅಭಿಯಾನ ಯಶಸ್ವಿಯಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ನೀವು ಲಸಿಕೆಯನ್ನು ತೆಗೆದುಕೊಳ್ಳಲಿದ್ದೀರಾ?ಎಂಬ ಮಾಧ್ಯಮದವರ ಪ್ರಶ್ನೆಗೆ ಅಗತ್ಯಬಿದ್ದರೆ ಕಂಡಿತವಾಗಿಯೂ ತೆಗೆದುಕೊಳ್ಳುವುದಾಗಿ ಬಿಎಸ್ವೈ ಹಾಸ್ಯ ಚಟಾಕಿ ಹಾರಿಸಿದರು.
# ಅಭಿಯಾನಕ್ಕೆ ಚಾಲನೆ:
ಇದಕ್ಕೂ ಮುನ್ನ ಮುಖ್ಯಮಂತ್ರಿ ಯಡಿಯೂರಪ್ಪ, ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ.ಕೆ.ಸುಧಾಕರ್ ಸೇರಿದಂತೆ ಅನೇಕರು ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಕೋವಿಡ್-19 ತಡೆಗಟ್ಟುವ ಲಸಿಕೆಯನ್ನು ಮೊದಲ ಬಾರಿಗೆ 10 ಕೋವಿಡ್ ಯೋಧರಿಗೆ ನೀಡುವ ಮೂಲಕ ಚಾಲನೆ ನೀಡಿದರು.
Laxmi News 24×7