ಬೆಂಗಳೂರು, ಜ.24- ಯಾವುದೇ ಕ್ಷಣದಲ್ಲಾದರೂ ಚುನಾವಣಾ ಆಯೋಗ ರಾಜ್ಯದ ಮೂರು ಕ್ಷೇತ್ರಗಳ ಉಪಚುನಾವಣೆಗೆ ದಿನಾಂಕ ಘೋಷಿಸುವ ಸಾಧ್ಯತೆಯಿದ್ದು, ಬಸವ ಕಲ್ಯಾಣ ಹಾಲಿ ಮತ್ತು ಮಾಜಿ ಮುಖ್ಯಮಂತ್ರಿಗಳ ಪುತ್ರರ ಅಖಾಡಕ್ಕೆ ಸಜ್ಜಾಗುತ್ತಿದೆ. ಪ್ರತಿಷ್ಠೆಯ ಕಣವಾಗಿರುವ ಬಸವ ಕಲ್ಯಾಣ ವಿಧಾನಸಭಾ ಕ್ಷೇತ್ರದಿಂದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಪುತ್ರ ಹಾಗೂ ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ, ಮಾಜಿ ಸಿಎಂ ದಿ.ಧರಂಸಿಂಗ್ ಪುತ್ರ ವಿಜಯ್ ಸಿಂಗ್ ಮುಖಾಮುಖಿಯಾಗಲಿದ್ದಾರೆ.
ಈ ಮೂಲಕ ರಾಜ್ಯದಲ್ಲೇ ಬಸವ ಕಲ್ಯಾಣ ಕ್ಷೇತ್ರವು ಹೈವೋಲ್ಟೇಜ್ ಕ್ಷೇತ್ರವಾಗುವುದು ಬಹುತೇಕ ಖಚಿತವಾಗಿದೆ. ಈವರೆಗೆ ಬಿಜೆಪಿಯಾಗಲಿ, ಕಾಂಗ್ರೆಸ್ ಆಗಲಿ ಇನ್ನೂ ಅಕೃತವಾಗಿ ಟಿಕೆಟ್ ಘೋಷಣೆ ಮಾಡಿಲ್ಲ. ಚುನಾವಣಾ ಆಯೋಗ ದಿನಾಂಕ ನಿಗದಿಪಡಿಸುವುದನ್ನೇ ಎಲ್ಲ ರಾಜಕೀಯ ಪಕ್ಷಗಳು ಎದುರು ನೋಡುತ್ತಿವೆ. ಬಸವ ಕಲ್ಯಾಣದ ಜತೆಗೆ ಮಸಿ ವಿಧಾನಸಭಾ ಕ್ಷೇತ್ರ ಹಾಗೂ ಬೆಳಗಾವಿ ಲೋಕಸಭಾ ಕ್ಷೇತ್ರಕ್ಕೆ ಉಪಚುನಾವಣೆ ನಡೆಯಬೇಕಿದೆ.
ಉಪಚುನಾವಣೆಗೆ ಯಾವ ಸಮಯದಲ್ಲಿ ಬೇಕಾದರೂ ದಿನಾಂಕ ಪ್ರಕಟಿಸುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ ರಾಜಕೀಯ ಪಕ್ಷಗಳು ಅಭ್ಯರ್ಥಿ ಆಯ್ಕೆ ಕಸರತ್ತಿನಲ್ಲಿ ನಿರತವಾಗಿವೆ. ಉಪ ಚುನಾವಣೆಯನ್ನು ಪ್ರತಿಷ್ಠೆಯಾಗಿ ಪರಿಗಣಿಸಿರುವ ಆಡಳಿತ ಪಕ್ಷ ಬಿಜೆಪಿ, ಅಭ್ಯರ್ಥಿಯನ್ನಾಗಿ ಬಿಜೆಪಿ ರಾಜ್ಯ ಉಪಾಧ್ಯಕ್ಷ ವಿಜಯೇಂದ್ರ ಅವರನ್ನು ಕಣಕ್ಕಿಳಿಸಲಿದೆ ಎಂದು ಮೂಲಗಳು ತಿಳಿಸಿವೆ.
ಕಳೆದ ಮೂರು ತಿಂಗಳಲ್ಲಿ ವಿಜಯೇಂದ್ರ ಎರಡು ಬಾರಿ ಬಸವಲ್ಯಾಣ ಕ್ಷೇತ್ರಕ್ಕೆ ಭೇಟಿ ನೀಡಿದ್ದಾರೆ. ಇದರ ಜತೆಗೆ ಅಲ್ಲಿನ ಸ್ಥಳೀಯ ನಾಯಕರ ಜತೆ ಚರ್ಚಿಸಿ ವಿವಿಧ ಮಠಗಳಿಗೂ ಭೇಟಿ ನೀಡುತ್ತಿದ್ದಾರೆ. ಪಕ್ಷ ಯಾರಿಗೆ ಟಿಕೆಟ್ ಕೊಡುತ್ತದೋ ಅವರ ಪರ ಕೆಲಸ ಮಾಡುತ್ತೇನೆ. ಪಕ್ಷದ ಕಾರ್ಯಕರ್ತರು ಯಡಿಯೂರಪ್ಪ ಅವರ ಮೇಲಿನ ಪ್ರೀತಿಯಿಂದ ನನಗೆ ಟಿಕೆಟ್ ನೀಡುವಂತೆ ಒತ್ತಾಯಿಸುತ್ತಿದ್ದಾರೆ. ಅವರ ಪ್ರೀತಿಗೆ ಋಣಿಯಾಗಿದ್ದೇನೆ ಎನ್ನುವ ಮೂಲಕ ವಿಜಯೇಂದ್ರ ಸ್ಪರ್ಧೆ ಮಾಡುತ್ತೇನೆ ಎಂದಾಗಲಿ ಅಥವಾ ಇಲ್ಲ ಎಂದಾಗಲಿ ಸ್ಪಷ್ಟಪಡಿಸಿಲ್ಲ.