ಬೆಂಗಳೂರು(ಜ. 28): ಇಂದಿನಿಂದ ಏಳು ದಿನಗಳ ಕಾಲ ವಿಧಾನಮಂಡಲ ಅಧಿವೇಶನ ನಡೆಯಲಿದೆ. ಬೆಳಗ್ಗೆ 11 ಗಂಟೆಗೆ ಅಧಿವೇಶನ ಪ್ರಾರಂಭವಾಯಿತು. ಫೆ. 5ರವರೆಗೆ ನಡೆಯುವ ಈ ಅಧಿವೇಶನದಲ್ಲಿ ತೀವ್ರ ರಾಜಕೀಯ ಜಟಾಪಟಿ ನಡೆಯುವುದು ನಿಶ್ಚಿತವಾಗಿದೆ. ಈ ಮಧ್ಯೆ 11 ಮಸೂದೆಗಳು ಮಂಡನೆಗೆ ಸಿದ್ಧವಾಗಿವೆ. ಇವುಗಳ ಪೈಕಿ 2-3 ಮಸೂದೆಗಳ ಸುಗ್ರೀವಾಜ್ಞೆ ಕೂಡ ಆಗಲಿದೆ. ವಿಧಾನಪರಿಷತ್ನಲ್ಲಿ ಸಭಾಪತಿ ಸ್ಥಾನಕ್ಕಾಗಿ ಬಿಜೆಪಿ ಮತ್ತು ಜೆಡಿಎಸ್ ಪಕ್ಷದ ಮಧ್ಯೆ ಒಪ್ಪಂದ ಆಗಿರುವುದು ಸಾಕಷ್ಟು ಕುತೂಹಲ ಮೂಡಿಸಿದೆ. ಈ ಹಿನ್ನೆಲೆಯಲ್ಲಿ ಈ ಬಾರಿಯ ಅಧಿವೇಶನದಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ಮಧ್ಯೆ ನೇರ ಹಣಾಹಣಿ ನಡೆಯುವ ಸಾಧ್ಯತೆಯೇ ಹೆಚ್ಚು.
ಸಭಾಪತಿ ಸ್ಥಾನವನ್ನು ಜೆಡಿಎಸ್ಗೆ ಬಿಜೆಪಿ ಬಿಟ್ಟುಕೊಟ್ಟಿದೆ. ಬಸವರಾಜ ಹೊರಟ್ಟಿ ಅವರು ಸಭಾಪತಿ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದ್ದಾರೆ. ಕಾಂಗ್ರೆಸ್ನಿಂದ ಈ ಸ್ಥಾನಕ್ಕೆ ನಾಮಪತ್ರ ಸಲ್ಲಿಕೆಯಾಗಿಲ್ಲ. ಈ ಹಿನ್ನೆಲೆಯಲ್ಲಿ ಹೊರಟ್ಟಿ ಅವರು ಅವಿರೋಧವಾಗಿ ಆಯ್ಕೆಯಾಗುವ ಸಾಧ್ಯತೆ ದಟ್ಟವಾಗಿದೆ. ಉಪಸಭಾಪತಿ ಸ್ಥಾನಕ್ಕೆ ಎಂ.ಕೆ. ಪ್ರಾಣೇಶ್ ಅವರು ಬಿಜೆಪಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ. ಸಂಖ್ಯೆ ಇಲ್ಲದಿದ್ದರೂ ಉಸಭಾಪತಿ ಸ್ಥಾನಕ್ಕೆ ಕಾಂಗ್ರೆಸ್ ಪಕ್ಷ ಕೆ.ಸಿ. ಕೊಂಡಯ್ಯ ಅವರನ್ನ ಕಣಕ್ಕಿಳಿಸಿದೆ. ಬಿಜೆಪಿ ಪಕ್ಷದ ಅಭ್ಯರ್ಥಿಗೆ ಜೆಡಿಎಸ್ ಬೆಂಬಲ ನೀಡುತ್ತಿರುವುದು ಜಗಜ್ಜಾಹೀರಾಗಲೀ ಎಂಬುದು ಕೊಂಡಯ್ಯ ಅವರನ್ನ ಕಣಕ್ಕಿಳಿಸುತ್ತಿರುವುದರ ಹಿಂದಿನ ತಂತ್ರ ಎಂದು ಬಣ್ಣಿಸಲಾಗುತ್ತಿದೆ.