ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಗಣರಾಜ್ಯೋತ್ಸವ ದಿನದಂದು ನಡೆದ ಘಟನೆಯು ದುರದೃಷ್ಟಕರವಾಗಿದೆ. ಹಿಂಸಾಚಾರದಲ್ಲಿ ಭಾಗಿಯಾದವರಿಗೆ ಕಠಿಣ ಶಿಕ್ಷೆಯಾಗಲಿ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಒತ್ತಾಯಿಸಿದ್ದಾರೆ.
ಈ ಬಗ್ಗೆ ಗುರುವಾರ ಮಾತನಾಡಿರುವ ಅವರು, ‘ದೆಹಲಿಯಲ್ಲಿ ಗಣರಾಜ್ಯೋತ್ಸವ ದಿನದಂದು ನಡೆದ ಘಟನೆಯು ದುರದೃಷ್ಟಕರವಾಗಿದೆ. ಹಿಂಸಾಚಾರದಲ್ಲಿ ಭಾಗಿಯಾದವರಿಗೆ ಕಠಿಣ ಶಿಕ್ಷೆಯಾಗಲಿ. ಆದರೆ, ಈ ಘಟನೆಯಿಂದ ಕೃಷಿ ಕಾಯ್ದೆಗಳ ವಿರುದ್ಧ ರೈತರು ನಡೆಸುತ್ತಿರುವ ಹೋರಾಟವು ಕೊನೆಯಾಗುವುದಿಲ್ಲ. ರೈತರ ಬಗ್ಗೆ ನಮಗಿರುವ ಕಾಳಜಿಯು ಮುಂದುವರೆಯಲಿದೆ. ಪ್ರತಿಭಟನೆ ನಡೆಸುತ್ತಿರುವ ರೈತರಿಗೆ ನಾವೆಲ್ಲರೂ ಶಾಂತಿಯುತ ಬೆಂಬಲ ನೀಡಬೇಕಿದೆ’ ಎಂದು ಮನವಿ ಮಾಡಿದ್ದಾರೆ.
‘ರೈತರು ಸಂತಸದಿಂದ ಇರದಿದ್ದರೆ, ದೇಶವೂ ಸಹ ಸಂತಸದಿಂದ ಇರಲು ಸಾಧ್ಯವಿಲ್ಲ’ ಎಂದು ಕೇಜ್ರಿವಾಲ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಮೂರು ಕೃಷಿ ಕಾಯ್ದೆಗಳನ್ನು ಹಿಂಪಡೆಯುವಂತೆ ಒತ್ತಾಯಿಸಿ ರಾಷ್ಟ್ರ ರಾಜಧಾನಿಯಲ್ಲಿ ರೈತರು ಮಂಗಳವಾರ ನಡೆಸಿದ ಟ್ರ್ಯಾಕ್ಟರ್ ರ್ಯಾಲಿ ವೇಳೆ ಹಿಂಸಾಚಾರ ಭುಗಿಲೆದ್ದಿತ್ತು. ರೈತರ ಒಂದು ಗುಂಪು ದೆಹಲಿಯ ಬೀದಿಗಳಲ್ಲಿ ದಾಂದಲೆ ನಡೆಸಿತ್ತು. ಬ್ಯಾರಿಕೇಡ್ಗಳನ್ನು ಕಿತ್ತೆಸದು ಪೊಲೀಸರ ಮೇಲೂ ಹಲ್ಲೆ ಮಾಡಿತ್ತು. ಕೆಂಪುಕೋಟೆ ಆವರಣಕ್ಕೆ ನುಗ್ಗಿದ್ದ ನೂರಾರು ಪ್ರತಿಭಟನಾಕಾರರು ಐತಿಹಾಸಿಕ ಕೆಂಪು ಕೋಟೆಯ ಮೇಲೆ ಅನ್ಯ ಧ್ವಜವನ್ನು ಹಾರಿಸಿದ್ದರು.