ಬೆಂಗಳೂರು: ರಾಜ್ಯದಲ್ಲಿನ ಪಂಚಾಯತ್ ರಾಜ್ ವ್ಯವಸ್ಥೆಯನ್ನು ಬಲಪಡಿಸುವ ಉದ್ದೇಶದಿಂದ ಸ್ಥಳೀಯ ಸಂಸ್ಥೆಗಳ ಕ್ಷೇತ್ರಗಳಿಂದ ಆಯ್ಕೆಯಾಗಿರುವ ವಿಧಾನ ಪರಿಷತ್ನ 25 ಸದಸ್ಯರನ್ನು ಶೀಘ್ರದಲ್ಲಿ ಕೇರಳ ಪ್ರವಾಸಕ್ಕೆ ಕಳುಹಿಸಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್. ಈಶ್ವರಪ್ಪ ಭರವಸೆ ನೀಡಿದರು.
ಶುಕ್ರವಾರ ವಿಧಾನ ಪರಿಷತ್ನಲ್ಲಿ ಪ್ರಶ್ನೋತ್ತರ ಕಲಾಪದಲ್ಲಿ ಗ್ರಾಮ ವಿಕಾಸ ಯೋಜನೆ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಸದಸ್ಯ ಕೆ. ಹರೀಶ್ ಕುಮಾರ್ ಅವರ ಪ್ರಶ್ನೆಗೆ ಉತ್ತರಿಸುವಾಗ ಈ ವಿಷಯ ತಿಳಿಸಿದ ಸಚಿವರು, ‘ಕೇರಳದ ಮಾದರಿಯಲ್ಲಿ ಪಂಚಾಯಿತಿಗಳನ್ನು ಬಲಪಡಿಸುವ ಉದ್ದೇಶವಿದೆ. ಪರಿಷತ್ ಸದಸ್ಯರ ತಂಡ ಅಲ್ಲಿಗೆ ತೆರಳಿ, ಅಧ್ಯಯನ ನಡೆಸಿ ನೀಡುವ ವರದಿ ಆಧರಿಸಿ ಕ್ರಮ ಕೈಗೊಳ್ಳುತ್ತೇವೆ’ ಎಂದರು.
ಗ್ರಾಮ ವಿಕಾಸ ಯೋಜನೆಯೆ 2017-18ರಿಂದ 2020ರ ಡಿಸೆಂಬರ್ ಅಂತ್ಯದವರೆಗೆ ₹ 735 ಕೋಟಿ ಅನುದಾನ ಬಿಡುಗಡೆ ಮಾಡಲಾಗಿದೆ. ₹ 79.50 ಕೋಟಿ ಅನುದಾನವನ್ನು ಶೀಘ್ರದಲ್ಲಿ ಬಿಡುಗಡೆ ಮಾಡಲಾಗುವುದು ಎಂದು ಉತ್ತರಿಸಿದರು.
ವಿಶೇಷ ಸಭೆ: ‘ಮಕ್ಕಳ ಸ್ನೇಹಿ ಗ್ರಾಮ ಪಂಚಾಯಿತಿ ಅಭಿಯಾನ’ದ ಅನುಷ್ಠಾನದಲ್ಲಿನ ಲೋಪಗಳಿಗೆ ಸಂಬಂಧಿಸಿದಂತೆ ಕಾಂಗ್ರೆಸ್ ಸದಸ್ಯ ಬಿ..ಕೆ. ಹರಿಪ್ರಸಾದ್ ಪ್ರಶ್ನೆಗೆ ಉತ್ತರಿಸಿದ ಈಶ್ವರಪ್ಪ, ‘2020ರ ನವೆಂಬರ್ 14ರಿಂದ 2021ರ ಫೆಬ್ರುವರಿ 28ರವರೆಗೆ ಅಭಿಯಾನ ಹಮ್ಮಿಕೊಳ್ಳಲಾಗಿತ್ತು. ಕೋವಿಡ್ ಕಾರಣದಿಂದ ಮಾರ್ಚ್ ಅಂತ್ಯದವರೆಗೂ ವಿಸ್ತರಿಸಲಾಗಿದೆ. 6,011 ಗ್ರಾಮ ಪಂಚಾಯಿತಿಗಳ ಪೈಕಿ 3,826 ಗ್ರಾಮ ಪಂಚಾಯಿತಿಗಳಲ್ಲಿ ಮಕ್ಕಳ ಗ್ರಾಮ ಸಭೆಗಳನ್ನು ನಡೆಸಲಾಗಿದೆ’ ಎಂದರು.
ಗ್ರಾಮ ಪಂಚಾಯಿತಿಗಳನ್ನು ಮಕ್ಕಳ ಸ್ನೇಹಿಯಾಗಿ ಪರಿವರ್ತಿಸುವ ಯೋಜನೆಯನ್ನು ಮತ್ತಷ್ಟು ಉತ್ತಮಪಡಿಸಲು ಶಾಸಕರು, ಸರ್ಕಾರೇತರ ಸಂಸ್ಥೆಗಳ ಪ್ರತಿನಿಧಿಗಳು ಮತ್ತು ತಜ್ಞರನ್ನು ಒಳಗೊಂಡಂತೆ ರಾಜ್ಯಮಟ್ಟದಲ್ಲಿ ವಿಶೇಷ ಸಭೆ ಆಯೋಜಿಸಲಾಗುವುದು ಎಂದು ತಿಳಿಸಿದರು.
2.15 ಲಕ್ಷ ಚಾಲಕರಿಗೆ ನೆರವು: ಕಾಂಗ್ರೆಸ್ ಸದಸ್ಯ ಎಂ. ನಾರಾಯಣಸ್ವಾಮಿ ಅವರ ಪ್ರಶ್ನೆಗೆ ಉತ್ತರಿಸಿದ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ, ‘ಕೋವಿಡ್ ಲಾಕ್ಡೌನ್ ಅವಧಿಯಲ್ಲಿ ನೆರವು ಕೋರಿ 2.45 ಲಕ್ಷ ವಾಹನ ಚಾಲಕರು ಅರ್ಜಿ ಸಲ್ಲಿಸಿದ್ದರು. 2.15 ಲಕ್ಷ ಚಾಲಕರಿಗೆ ತಲಾ ₹ 5,000ದಂತೆ ಒಟ್ಟು ₹ 171.51 ಕೋಟಿ ನೆರವು ನೀಡಲಾಗಿದೆ’ ಎಂದರು.
ಅರ್ಹವಲ್ಲದ 2,700 ಅರ್ಜಿಗಳನ್ನು ತಿರಸ್ಕರಿಸಲಾಗಿದೆ. 27,733 ಅರ್ಜಿಗಳಲ್ಲಿ ದಾಖಲೆಗಳ ಸಮಸ್ಯೆ ಇದೆ. ಅಗತ್ಯ ದಾಖಲೆಗಳನ್ನು ಸಲ್ಲಿಸುವಂತೆ ಸೂಚಿಸಲಾಗಿದೆ ಎಂದು ತಿಳಿಸಿದರು.