ವಿಜಯಪುರ: ಕೃಷ್ಣಾ ಮೇಲ್ದಂಡೆ ಯೋಜನೆಯನ್ನ ರಾಷ್ಟ್ರೀಯ ಯೋಜನೆಯಾಗಿ ಘೋಷಣೆ ಮಾಡುವುದು ಕಷ್ಟಸಾಧ್ಯ. ಒಂದು ವೇಳೆ ರಾಜ್ಯ ಸರಕಾರ ಕೇಂದ್ರದ ಮೇಲೆ ಒತ್ತಡ ತಂದು ರಾಷ್ಟ್ರೀಯ ಯೋಜನೆ ಎಂದು ಘೋಷಣೆ ಮಾಡಿಸಿದರೆ ಕೃತಜ್ಞತೆ ಸಲ್ಲಿಸುವುದಾಗಿ ಜಲಸಂಪನ್ಮೂಲ ಖಾತೆ ಮಾಜಿ ಸಚಿವ ಎಂ. ಬಿ. ಪಾಟೀಲ ತಿಳಿಸಿದ್ದಾರೆ. ವಿಜಯಪುರ ಜಿಲ್ಲೆಯ ಇಟ್ಟಂಗಿಹಾಳದಲ್ಲಿ ಮಾತನಾಡಿದ ಅವರು, ಯಾವುದೇ ನೀರಾವರಿ ಯೋಜನೆ ರಾಷ್ಟ್ರೀಯ ಯೋಜನೆ ಘೋಷಣೆಯಾಗಬೇಕಾದರೆ ಎರಡು ಅಂಶಗಳನ್ನು ಪ್ರಮುಖವಾಗಿ ಪರಿಗಣಿಸಲಾಗುತ್ತದೆ. ಭದ್ರಾ ಮೇಲ್ದಂಡೆ ಯೋಜನೆ ರಾಷ್ಟ್ರೀಯ ನೀರಾವರಿ ಯೋಜನೆ ಎಂದು ಘೋಷಣೆಯಾಗಲು ಅದಕ್ಕಿದ್ದ ಪೂರಕ ಅಂಶಗಳೇ ಕಾರಣ ಎಂದು ಅವರು ಹೇಳಿದ್ದಾರೆ.
ಯಾವುದೇ ನೀರಾವರಿ ಯೋಜನೆ ರಾಷ್ಟ್ರೀಯ ನೀರಾವರಿ ಯೋಜನೆ ಎಂದು ಘೋಷಣೆಯಾಗಬೇಕಾದರೆ ಆ ಯೋಜನೆಯಡಿ 2 ಲಕ್ಷ ಹೆಕ್ಟೇರ್ ಅಂದರೆ 5 ಲಕ್ಷ ಎಕರೆ ನೀರಾವರಿಯಾಗಬೇಕು. ಅಲ್ಲದೇ, ಈ ಯೋಜನೆ ಯಾವುದೇ ವಿವಾದಕ್ಕೆ ಈಡಾಗಿರಬಾರದು. ಕೃಷ್ಣಾ ಮೇಲ್ದಂಡೆ ಯೋಜನೆಯಡಿ 2 ಲಕ್ಷ ಹೆಕ್ಟೇರ್ ಅಂದರೆ 5 ಲಕ್ಷ ಎಕರೆ ನೀರಾವರಿ ಸೌಲಭ್ಯ ದೊರೆಯುತ್ತದೆ. ಆದರೆ, ಆಲಮಟ್ಟಿ ಜಲಾಷಯದ ಎತ್ತರ ಹೆಚ್ಚಳ ಮತ್ತು ನೀರು ಹಂಚಿಕೆ ವಿರುದ್ಧ ನೆರೆಯ ರಾಜ್ಯಗಳು ಸುಪ್ರೀಂ ಕೋರ್ಟಿನಲ್ಲಿ ತಕರಾರು ಅರ್ಜಿ ಸಲ್ಲಿಸಿವೆ. ಈ ಹಿನ್ನೆಲೆಯಲ್ಲಿ ಈ ಯೋಜನೆಯನ್ನು ರಾಷ್ಟ್ರೀಯ ನೀರಾವರಿ .ಯೋಜನೆ ಎಂದು ಘೋಷಸುವುದು ಕಷ್ಟಸಾಧ್ಯ ಎಂದು ಎಂ. ಬಿ. ಪಾಟೀಲ ಹೇಳಿದರು.