ಬೆಂಗಳೂರು,ಫೆ.25- ಶತಾಯಗತಾಯ ಲಿಂಗಾಯಿತ ಪಂಚಮಸಾಲಿ ಸಮುದಾಯವನ್ನು 2ಎಗೆ ಸೇರ್ಪಡೆ ಮಾಡಲೇಬೇಕೆಂಬ ಹಿನ್ನೆಲೆಯಲ್ಲಿ ಮುಂದೆ ಕೈಗೊಳ್ಳಬೇಕಾದ ಕಾರ್ಯತಂತ್ರಗಳ ಬಗ್ಗೆ ಇಂದು ಸಂಜೆ ಮಹತ್ವದ ದುಂಡುಮೇಜಿನ ಸಭೆ ನಡೆಯಲಿದೆ. ಈ ಸಭೆಗೆ ಸಚಿವರು, ಶಾಸಕರು, ಸಮಾಜದ ಮುಖಂಡರು ಸೇರಿದಂತೆ ಅನೇಕರನ್ನು ಕೂಡಲಸಂಗಮ ಮಠದ ಜಯ ಮೃತ್ಯುಂಜಯ ಸ್ವಾಮೀಜಿಗಳೇ ಖುದ್ದು ಆಹ್ವಾನಿಸಿದ್ದಾರೆ.
ಈ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಮಾಜಿ ಶಾಸಕ ಹಾಗೂ ಅಖಿಲ ಭಾರತ ಲಿಂಗಾಯತ ಪಂಚಮಸಾಲಿ ರಾಷ್ಟ್ರೀಯ ಘಟಕದ ಅಧ್ಯಕ್ಷ ವಿಜಯಾನಂದ ಕಾಶಪ್ಪನವರ್, ಮಹತ್ವದ ಸಭೆ ಕರೆದಿದ್ದು ಸಭೆಯಲ್ಲಿ ರಾಜ್ಯ, ಜಿಲ್ಲೆ ಹಾಗೂ ತಾಲೂಕು ಘಟಕಗಳ ಅಧ್ಯಕ್ಷರು ಭಾಗವಹಿಸಲಿದ್ದಾರೆಂದು ತಿಳಿದುಬಂದಿದೆ. ಸಭೆಯಲ್ಲಿ ಪ್ರತಿಭಟನೆ ತೀವ್ರಗೊಳಿಸುವ ಕುರಿತು ನಿರ್ಧಾರಗಳನ್ನು ಕೈಗೊಳ್ಳಲಾಗುತ್ತದೆ ಎನ್ನಲಾಗಿದೆ.
ಭಾನುವಾರದ ಬೆಳವಣಿಗೆ ನಂತರ ಪ್ರತಿಭಟನೆಯಿಂದ ಹರಿಹರ ಪಂಚಮಸಾಲಿ ಮಠದ ಶ್ರೀ ವಚನಾನಂದ ಸ್ವಾಮೀಜಿ, ಸಚಿವರಾದ ಸಿ.ಸಿ.ಪಾಟೀಲ್, ಮುರುಗೇಶ್ ನಿರಾಣಿ ಹಾಗೂ ಆ ಸಮುದಾಯವನ್ನು ಪ್ರತಿನಿಸುವ ಶಾಸಕರು ಅಂತರವನ್ನು ಕಾಪಾಡಿಕೊಂಡಿದ್ದಾರೆ. ಹೀಗಾಗಿ ಸಂಜೆ ನಡೆಯಲಿರುವ ಸಭೆಗೆ ಇವರು ಪಾಲ್ಗೊಳ್ಳಲಿದ್ದಾರೆ ಇಲ್ಲವೇ ದೂರ ಉಳಿಯಲಿದ್ದಾರೆ ಎಂಬುದು ಕುತೂಹಲಕ್ಕೆ ಕಾರಣವಾಗಿದೆ.