ಬೆಳಗಾವಿ: ಈ ವರ್ಷದ ಅನುದಾನ ಯಾವುದೇ ಕಾರಣಕ್ಕೂ ವ್ಯಪಗತ(ಲ್ಯಾಪ್ಸ್) ಆಗಬಾರದು. ಒಂದು ವೇಳೆ ಅನುದಾನ ವ್ಯಪಗತವಾದರೆ ಸಂಬಂಧಿಸಿದ ಇಲಾಖೆಯ ಅಧಿಕಾರಿಗಳು ಮತ್ತು ತಾಲ್ಲೂಕು ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿಗಳನ್ನು ಹೊಣೆ ಮಾಡಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಎಲ್.ಕೆ.ಅತೀಕ್ ಎಚ್ಚರಿಕೆ ನೀಡಿದರು.
ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಬುಧವಾರ (ಫೆ.24) ನಡೆದ ಜಿಲ್ಲಾ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಸರ್ಕಾರದಿಂದ ಲಭ್ಯವಿರುವ ಅನುದಾನವನ್ನು ಸಂಪೂರ್ಣವಾಗಿ ಬಳಸಿಕೊಂಡು ಕಾಮಗಾರಿಗಳನ್ನು ಆರಂಭಿಸಬೇಕು.
ಈ ಹಣಕಾಸು ವರ್ಷ ಅಂತ್ಯಕ್ಕೆ ಅತ್ಯಂತ ಕಡಿಮೆ ಅವಧಿ ಉಳಿದಿರುವುದರಿಂದ ಈ ಬಾರಿ ಅನುದಾನ ಉಳಿಸದೇ ನಿಗದಿತ ಯೋಜನೆ ಮತ್ತು ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಬೇಕು ಎಂದು ಸೂಚನೆ ನೀಡಿದರು.
ಪ್ರವಾಹದಲ್ಲಿ ಹಾನಿಗೊಳಗಾದ ಶಾಲೆಗಳು ಮತ್ತು ಅಂಗನವಾಡಿ ಕಟ್ಟಡಗಳ ದುರಸ್ತಿಗೆ ಸಂಬಂಧಿಸಿದ ಕಾಮಗಾರಿ ಮತ್ತು ಅಂದಾಜುಪಟ್ಟಿಯನ್ನು ತಕ್ಷಣವೇ ಸಲ್ಲಿಸಬೇಕು ಎಂದು ಅಧಿಕಾರಿಗಳಿಗೆ ತಿಳಿಸಿದರು.
ರೈತ ಕ್ರಿಯಾ ಯೋಜನೆಯಡಿ ನೋಂದಣಿ ಮಾಡಿಕೊಂಡಿರುವ ಎಲ್ಲ ರೈತರಿಗೆ ನರೇಗಾದಡಿ ತೋಟಗಾರಿಕೆ ಸೌಲಭ್ಯಗಳನ್ನು ಕಲ್ಪಿಸಬೇಕು ಎಂದು ನಿರ್ದೇಶನ ನೀಡಿದರು.
ಬಿತ್ತನೆ, ಬೆಳೆಹಾನಿ, ಬೆಳೆಪರಿಹಾರ ಮತ್ತಿತರ ವಿಷಯಗಳ ಬಗ್ಗೆ ಚರ್ಚಿಸಿದರು.
ರಾಷ್ಟ್ರೀಯ ಲಸಿಕಾ ಕಾರ್ಯಕ್ರಮಗಳಲ್ಲಿ ನೂರಕ್ಕೆ ನೂರರಷ್ಟು ಗುರಿ ಸಾಧಿಸಬೇಕು. ಕೋವಿಡ್, ಇಂದ್ರಧನುಷ್ ಲಸಿಕಾಕರಣ, ರಾಷ್ಟ್ರೀಯ ಆರೋಗ್ಯ ಅಭಿಯಾನ, ಅನುದಾನ ಬಳಕೆ ಸೇರಿದಂತೆ ಆರೋಗ್ಯ ಇಲಾಖೆಯ ವಿವಿಧ ಯೋಜನೆಗಳ ಪ್ರಗತಿಯನ್ನು ಪರಿಶೀಲಿಸಿದರು.
ಮಹಾರಾಷ್ಟ್ರದಿಂದ ರಾಜ್ಯಕ್ಕೆ ಆಗಮಿಸುವ ಪ್ರಯಾಣಿಕರನ್ನು ಸರ್ಕಾರದ ಮಾರ್ಗಸೂಚಿ ಪ್ರಕಾರ ಕೋವಿಡ್ ತಪಾಸಣಾ ವರದಿ ಪಡೆದುಕೊಳ್ಳಬೇಕು ಎಂದು ಅತೀಕ್ ತಿಳಿಸಿದರು.
ಪ್ರತಿದಿನ ಎರಡು ಸಾವಿರಕ್ಕೂ ಅಧಿಕ ಜನರ ಕೋವಿಡ್ ತಪಾಸಣೆ ಮಾಡಲಾಗುತ್ತಿದ್ದು, ಸೋಂಕಿನ ಪ್ರಮಾಣ ಕೇವಲ 0.5 ರಷ್ಟಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಸ್.ವಿ.ಮುನ್ಯಾಳ ತಿಳಿಸಿದರು.
ಮೊದಲ ಹಂತದಲ್ಲಿ 30,350 ಜನರಿಗೆ ಲಸಿಕೆ ನೀಡಲಾಗಿದ್ದು, ಎರಡನೇ ಹಂತದ ಲಸೀಕಾಕರಣ ಕೂಡ ನಡೆದಿದೆ ಎಂದು ವಿವರಿಸಿದರು.
ಶಾಲಾ ಕಟ್ಟಡ ನಿರ್ಮಾಣ ಸೇರಿದಂತೆ ಎಲ್ಲ ಕಾಮಗಾರಿಗಳನ್ನು ಮಳೆಗಾಲಕ್ಕೆ ಮುಂಚೆ ಕೈಗೆತ್ತಿಕೊಂಡು ಪೂರ್ಣಗೊಳಿಸಬೇಕು ಎಂದು ಅತೀಕ್ ತಿಳಿಸಿದರು.
ತೋಟಗಾರಿಕೆ, ಪಶುಪಾಲನೆ, ರೇಷ್ಮೆ, ವಸತಿ, ಶಿಕ್ಷಣ, ಸಮಾಜ ಕಲ್ಯಾಣ ಸೇರಿದಂತೆ ವಿವಿಧ ಇಲಾಖೆಗಳ ಪ್ರಗತಿಯನ್ನು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಅತೀಕ್ ಪರಿಶೀಲಿಸಿದರು.
ಅಪರ ಜಿಲ್ಲಾಧಿಕಾರಿ ಅಶೋಕ ದುಡಗುಂಟಿ ಅವರು, ಪ್ರವಾಹ ಸಂದರ್ಭದಲ್ಲಿ ಉಂಟಾಗಿರುವ ಮನೆಗಳ ಹಾನಿಗೆ ಸಂಬಂಧಿಸಿದಂತೆ ಪರಿಹಾರ ವಿತರಣೆ ಮತ್ತು ಮನೆಗಳ ನಿರ್ಮಾಣದ ಕುರಿತು ಸಭೆಗೆ ಮಾಹಿತಿಯನ್ನು ನೀಡಿದರು.
ಜಿಲ್ಲೆಯಲ್ಲಿ ಪ್ರವಾಹದಿಂದ ಹಾನಿಗೊಳಗಾದ ಒಟ್ಟಾರೆ ಮನೆಗಳ ಪೈಕಿ 15,466 ಮನೆಗಳ ನಿರ್ಮಾಣ ಕಾಮಗಾರಿ ಈಗಾಗಲೇ ಆರಂಭಗೊಂಡಿದ್ದು, ಇದುವರೆಗೆ ನಿರ್ಮಾಣ ಕಾಮಗಾರಿ ಆರಂಭಿಸದ ಮನೆಗಳಿಗೆ ಸಂಬಂಧಿಸಿದ ಪರಿಹಾರವನ್ನು ರದ್ದುಗೊಳಿಸುವ ಪ್ರಕ್ರಿಯೆ ಆರಂಭಿಸಲಾಗಿದೆ ಎಂದು ತಿಳಿಸಿದರು.
ಇತ್ತೀಚಿನ ಮಳೆಯಿಂದ ಕಡಲೆ ಮತ್ತು ಗೋಧಿ ಸ್ವಲ್ಪಮಟ್ಟಿಗೆ ಮಾತ್ರ ಹಾನಿಯಾಗಿದೆ.
ಪಿ.ಎಂ. ಕಿಸಾನ ಯೋಜನೆಯಡಿ ಜಿಲ್ಲೆಯಲ್ಲಿ 831 ಕೋಟಿ ರೂಪಾಯಿಗಳನ್ನು ರೈತ ಕುಟುಂಬಗಳಿಗೆ ಒದಗಿಸಲಾಗಿದೆ ಎಂದು ಕೃಷಿ ಇಲಾಖೆಯ ಜಂಟಿ ನಿರ್ದೇಶಕರಾದ ಶಿವನಗೌಡ ಪಾಟೀಲ ವಿವರಿಸಿದರು.
ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ದರ್ಶನ್ ಎಚ್.ವಿ, ಚಿಕ್ಕೋಡಿ ಉಪ ವಿಭಾಗಾಧಿಕಾರಿ ಯುಕೇಶ್ ಕುಮಾರ್ ಉಪಸ್ಥಿತರಿದ್ದರು.
ಮಹಾನಗರ ಪಾಲಿಕೆ ಆಯುಕ್ತ ಜಗದೀಶ್ ಕೆ.ಎಚ್., ಉಪ ವಿಭಾಗಾಧಿಕಾರಿಗಳಾದ ಅಶೋಕ ತೇಲಿ, ಶಶಿಧರ್ ಬಗಲಿ ಸೇರಿದಂತೆ ಎಲ್ಲ ಇಲಾಖೆಗಳ ಜಿಲ್ಲಾಮಟ್ಟದ ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು.