Breaking News
Home / ರಾಜ್ಯ / ಕೃಷಿ ಪೂರಕ ಚಟುವಟಿಕೆಗಳಿಗೆ 31,028 ಕೋಟಿ ಅನುದಾನ

ಕೃಷಿ ಪೂರಕ ಚಟುವಟಿಕೆಗಳಿಗೆ 31,028 ಕೋಟಿ ಅನುದಾನ

Spread the love

ಬೆಂಗಳೂರು, ಮಾರ್ಚ್ 8: ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು 2021-22ನೇ ಸಾಲಿನ ಆಯವ್ಯಯ ಮಂಡಿಸಿದ್ದು, ಅದರಲ್ಲಿ ಕೃಷಿ ಕ್ಷೇತ್ರಕ್ಕೆ ಪ್ರಾಧಾನ್ಯತೆ ಕೊಟ್ಟಿದ್ದಾರೆ.

ಕೃಷಿ ಹಾಗೂ ಪೂರಕ ಚಟುವಟಿಕೆ

” ಕೃಷಿಕರ ಆದಾಯವನ್ನು 2023ರ ವೇಳೆಗೆ ದ್ವಿಗುಣಗೊಳಿಸುವ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಕನಸನ್ನು ಸಾಕಾರಗೊಳಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರವು ಕೇಂದ್ರದೊಂದಿಗೆ ಕೈಜೋಡಿಸಿ ಹಲವು ಕ್ರಮಗಳನ್ನು ಕೈಗೊಂಡಿದೆ.”

“ಗುಣಮಟ್ಟದ ಬಿತ್ತನೆ ಬೀಜ ಲಭ್ಯತೆ, ಬೆಳೆ ನಿರ್ವಹಣೆ, ಕೊಯ್ಲೋತ್ತರ ನಿರ್ವಹಣೆ, ಸಂಗ್ರಹಣೆ, ಸಂಸ್ಕರಣೆ ಮಾರಾಟ ಹೀಗೆ ಪ್ರತಿ ಹಂತದಲ್ಲೂ ರೈತರಿಗೆ ಅಗತ್ಯ ಮೂಲಸೌಲಭ್ಯ ಒದಗಿಸಿ ಬೆಂಬಲ ನೀಡಲು ಸರ್ಕಾರ ಬದ್ಧವಾಗಿದೆ” ಎಂದು ಬಿ.ಎಸ್ ಯಡಿಯೂರಪ್ಪ ಬಜೆಟ್ ನಲ್ಲಿ ತಿಳಿಸಿದ್ದಾರೆ.

“ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ರೈತರಿಗೆ ಕೇಂದ್ರ ಸರ್ಕಾರ ವಾರ್ಷಿಕ ತಲಾ 6000 ರೂ.ಗಳ ನೆರವು ನೀಡಿದರೆ, ರಾಜ್ಯ ಸರ್ಕಾರದಿಂದ ತಲಾ 4000 ರೂ.ಗಳ ನೆರವು ನೀಡಲಾಗುತ್ತಿದೆ. ರಾಜ್ಯದಲ್ಲಿ ಇಲ್ಲಿಯವರೆಗೆ 53 ಲಕ್ಷಕ್ಕೂ ಹೆಚ್ಚು ರೈತರಿಗೆ ಈ ಯೋಜನೆ ತಲುಪಿಸಲಾಗಿದೆ” ಎಂದು ಸಿಎಂ ಹೇಳಿದರು.

“ಕೇಂದ್ರ ಹಾಗೂ ರಾಜ್ಯ ಸರ್ಕಾರಗಳಿಂದ ಒಟ್ಟಾರೆ 7730 ಕೋಟಿ ರೂ.ಗಳ ಆರ್ಥಿಕ ನೆರವನ್ನು ವರ್ಗಾಯಿಸಲಾಗಿದೆ. ಈ ಯೋಜನೆಯಡಿ ದೇಶದಲ್ಲಿಯೇ ಅತ್ಯಂತ ಹೆಚ್ಚು ಆಧಾರ್ ದೃಢೀಕೃತ ಮಾಹಿತಿ (ಶೇ.97) ಹಾಗೂ ಆಧಾರ್ ಆಧಾರಿತ ನೇರ ನಗದು ವರ್ಗಾವಣೆಗಾಗಿ (ಶೇ.90) ರಾಜ್ಯವು ಕೇಂದ್ರ ಸರ್ಕಾರದ ಪ್ರಶಸ್ತಿಗೆ ಭಾಜನವಾಗಿದೆ.”

“ಪ್ರಧಾನಮಂತ್ರಿ ಫಸಲ್ ಭೀಮಾ ಯೋಜನೆ, ಪ್ರಧಾನಮಂತ್ರಿ ಸಿಂಚಾಯಿ ಯೋಜನೆ ಮುಂತಾದ ಕೇಂದ್ರದ ಯೋಜನೆಗಳನ್ನು ಅನುಷ್ಠಾನಗೊಳಿಸಲು ಸರ್ಕಾರ ಕ್ರಮವಹಿಸಿದೆ. ಪ್ರಸಕ್ತ ಸಾಲಿನಲ್ಲಿ ಪ್ರಧಾನಮಂತ್ರಿ ಫಸಲ್ ಭೀಮಾ ಯೋಜನೆಗೆ 900 ಕೋಟಿ ರೂ.ಗಳನ್ನು ಹಾಗೂ ಪ್ರಧಾನಮಂತ್ರಿ ಸಿಂಚಾಯಿ ಯೋಜನೆಗೆ 831 ಕೋಟಿ ರೂ.ಗಳನ್ನು ಒದಗಿಸಲಾಗಿದೆ.”

“ರಾಜ್ಯ ಸರ್ಕಾರವು ಕೃಷಿ ಉತ್ಪನ್ನಗಳಿಗೆ ಮುಕ್ತ ಮಾರುಕಟ್ಟೆ ಸೌಲಭ್ಯ ಒದಗಿಸಲು ಎಪಿಎಂಸಿ ಕಾಯ್ದೆಗೆ ತಿದ್ದುಪಡಿ ಮಾಡಲಾಗಿದೆ. ರೈತರ ಮೇಲಿನ ಹೊರೆಯನ್ನು ಕಡಿಮೆ ಮಾಡಲು ಮಾರುಕಟ್ಟೆ ಶುಲ್ಕವನ್ನು ಶೇ.1.5 ರಿಂದ ಶೇ.0.60ಗೆ ಇಳಿಸಲಾಗಿದೆ. ಇದಲ್ಲದೇ, ಕೃಷಿ ಉತ್ಪನ್ನ ಸಂಗ್ರಹಣೆ ಹಾಗೂ ಸಂಸ್ಕರಣೆಗೆ ಕೂಡ ಆದ್ಯತೆ ನೀಡಿದೆ.”

” ಜನರಿಗೆ ಆರೋಗ್ಯಕರ ಹಾಗೂ ರಸಾಯನಿಕ ಮುಕ್ತ ಕೃಷಿ ಮತ್ತು ತೋಟಗಾರಿಕಾ ಉತ್ಪನ್ನಗಳನ್ನು ದೊರಕಿಸಲು ಹಾಗೂ ಸಾವಯುವ ಕೃಷಿಯನ್ನು ಉತ್ತೇಜಿಸಲು 500 ಕೋಟಿ ರೂ.ಗಳ ಯೋಜನೆಯನ್ನು ರೂಪಿಸಲಾಗುವುದು.”

“ಕೃಷಿ ನವೋದ್ಯಮಗಳ ಮತ್ತು ಸಣ್ಣ ಹಾಗೂ ಮಧ್ಯಮ ಕೈಗಾರಿಕೆಗಳ ಸ್ಥಾಪನೆಗೆ ಅವಕಾಶ ಕಲ್ಪಿಸಲು ಹಾಗೂ ಸ್ಥಳೀಯ ಉತ್ಪನ್ನಗಳ ಸಂಸ್ಕರಣೆಗೆ ಉತ್ತೇಜನ ನೀಡಲು ವಿಜಯಪುರ ಜಿಲ್ಲೆಯ ಇಟ್ಟಂಗಿಹಾಳ ಗ್ರಾಮದಲ್ಲಿ ಆತ್ಮನಿರ್ಭರ ಭಾರತ ಅಭಿಯಾನ ಯೋಜನೆಯಡಿ ಆಹಾರ ಪಾರ್ಕನ್ನು ಸ್ಥಾಪಿಸಲಾಗುವುದು.”

“ಕೃಷಿ ವಿಶ್ವವಿದ್ಯಾಲಯಗಳಲ್ಲಿ ರೈತರ ಮಕ್ಕಳಿಗೆ ನೀಡುತ್ತಿರುವ ಮೀಸಲಾತಿಯನ್ನು ಶೇ.40 ರಿಂದ ಶೇ.50ಕ್ಕೆ ಹೆಚ್ಚಿಸಲಾಗುವುದು.”

“ರೈತರು ಮಿತವ್ಯದಲ್ಲಿ ಆಧುನಿಕ ಕೃಷಿ ಪದ್ಧತಿ ಅಳವಡಿಸಿಕೊಳ್ಳಲು ನೆರವಾಗುವಂತೆ ಕೃಷಿ ಯಂತ್ರಧಾರೆ ಕೇಂದ್ರಗಳನ್ನು ಬಲಪಡಿಸಲಾಗುವುದು. ಈ ಉದ್ದೇಶಕ್ಕಾಗಿ ಯಂತ್ರೋಪಕರಣಗಳನ್ನು ಒದಗಿಸಲಾಗುವುದು. ವಿವಿಧ ಕೃಷಿ ಬೆಳೆಗಳನ್ನು ಒಕ್ಕಲು ಮಾಡಲು ಕಂಬೈನ್ಡ್ ಹಾರ್ವೆಸ್ಟರ್ ಗಳನ್ನೂ ಸಹ ಪೂರೈಸಲಾಗುವುದು.”

“ಕೃಷಿ ಯಾಂತ್ರೀಕರಣ ಯೋಜನೆಯಡಿ ಸಣ್ಣ ಟ್ರ್ಯಾಕ್ಟರ್ ಗಳಿಗೆ ಸಹಾಯಧನ ನೀಡುತ್ತಿದ್ದು, ಇದನ್ನು 25-45 PTO HP ಟ್ರ್ಯಾಕ್ಟರ್ ಗಳಿಗೂ ವಿಸ್ತರಿಸಲಾಗುವುದು.”

“ದ್ವಿದಳ ಧಾನ್ಯಗಳ ಉತ್ಪಾದನೆಯನ್ನು ಹೆಚ್ಚಿಸಲು ಬಿತ್ತನೆ ಬೀಜ ಹಾಗೂ ಹಸಿರೆಲೆ ಗೊಬ್ಬರದ ವಿತರಣೆ ಮಾಡಿ ಸಾವಯುವ ಇಂಗಾಲ ಹೆಚ್ಚಿರುವ ಅಭಿಯಾನ ಕಾರ್ಯಕ್ರಮವನ್ನು 75 ಕೋಟಿ ರೂ. ವೆಚ್ಚದಲ್ಲಿ ಮುಂದಿನ ಐದು ವರ್ಷಗಳಲ್ಲಿ ಅನುಷ್ಠಾನಗೊಳಿಸಲಾಗುವುದು. ಈ ಉದ್ದೇಶಕ್ಕೆ 2021-22ನೇ ಸಾಲಿನಲ್ಲಿ 10 ಕೋಟಿ ರೂ, ಅನುದಾನವನ್ನು ಒದಗಿಸಲಾಗುವುದು.”

“ಆತ್ಮನಿರ್ಭರ ಭಾರತ ಅಭಿಯಾನ ಯೋಜನೆಯಡಿಯಲ್ಲಿ ಪ್ರಧಾನಮಂತ್ರಿಗಳ ಕಿರು ಆಹಾರ ಸಂಸ್ಕರಣೆ ಉದ್ದಿಮೆಗಳ ನಿಯಮಬದ್ಧಗೊಳಿಸುವಿಕೆ ಯೋಜನೆ ಹಾಗೂ ಇತರ ಕಾರ್ಯಕ್ರಮಗಳಡಿಯಲ್ಲಿ ಶೇ.35ರಷ್ಟು ಸಹಾಯಧನವನ್ನು ವಿವಿಧ ಚಟುವಟಿಕೆಗಳಾದ ಶೀತಲಗೃಹ ನಿರ್ಮಾಣ, ಕೊಯ್ಲೋತ್ತರ ನಿರ್ವಹಣೆ ಮತ್ತು ಸಂಸ್ಕರಣಾ ಘಟಕಗಳ ಸ್ಥಾಪನೆಗೆ ನೀಡಲಾಗುತ್ತಿದೆ. ಈ ಸಹಾಯಧನವನ್ನು ಶೇ.50ಕ್ಕೆ ಹೆಚ್ಚಿಸಲು ರಾಜ್ಯ ಸರ್ಕಾರವು ಶೇ.15ರಷ್ಟು ಹೆಚ್ಚುವರಿ ಸಹಾಯಧನ ನೀಡಲಿದೆ. ಈ ಯೋಜನೆಗೆ 50 ಕೋಟಿ ರೂ.ಗಳನ್ನು ಹಂಚಿಕೆ ಮಾಡಲಾಗುವುದು.”

“ಅತ್ಯುತ್ತಮ ತರಬೇತಿ, ನೂತನ ಆವಿಷ್ಕಾರಗಳು ಹಾಗೂ ತಂತ್ರಜ್ಞಾನಗಳನ್ನು ಪರಿಚಯಿಸುವ ಮೂಲಕ ತೋಟಗಾರಿಕಾ ಬೆಳೆಗಾರರ ಆರ್ಥಿಕ ಅಭಿವೃದ್ಧಿಗೆ ನೆರವು ನೀಡಲು ಕೊಪ್ಪಳ ಜಿಲ್ಲೆಯ ಸಿರಿವಾರ ಗ್ರಾಮದಲ್ಲಿ ತೋಟಗಾರಿಕೆ ತಂತ್ರಜ್ಞಾನ ಪಾರ್ಕ್ ಅನ್ನು ಅಭಿವೃದ್ಧಿಪಡಿಸಲಾಗುವುದು.”

“ವಿನೂತನ ತಂತ್ರಜ್ಞಾನ, ಹೊಸ ಬೆಳೆ ತಳಿಗಳು, ಉತ್ತಮ ನಿರ್ವಹಣಾ ಪದ್ಧತಿಗಳನ್ನು ರೈತರಿಗೆ ಪರಿಚಯಿಸಲು ಭಾರತೀಯ ತೋಟಗಾರಿಕಾ ಸಂಶೋಧನಾ ಸಂಸ್ಥೆ (IIHR) ಮತ್ತು ರಾಜ್ಯದ ಕೃಷಿ ಮತ್ತು ತೋಟಗಾರಿಕಾ ವಿಶ್ವವಿದ್ಯಾನಿಲಯ ಸಹಯೋಗದೊಂದಿಗೆ ಪ್ರಾತ್ಯಕ್ಷಿಕ ಕ್ಷೇತ್ರಗಳನ್ನು ಅಭಿವೃದ್ಧಿಪಡಿಸುವುದು.”

“ರೈತ ಉತ್ಪಾದಕರ ಸಂಸ್ಥೆಗಳು ಮಾರಾಟ ಮಾಡುವ ತೋಟಗಾರಿಕಾ ಉತ್ಪನ್ನಗಳಿಗೆ ಏಕರೂಪದ ಬ್ರಾಂಡಿಂಗ್ ಮತ್ತು ಮಾರುಕಟ್ಟೆ ಸೌಲಭ್ಯಗಳನ್ನು ಒದಗಿಸಿ ‘ಬ್ರಾಂಡ್ ವ್ಯಾಲ್ಯೂ’ ಹೆಚ್ಚಿಸಲಾಗುವುದು. ರೈತ ಉತ್ಪಾದಕರ ಸಂಸ್ಥೆಗಳ ತೋಟಗಾರಿಕೆ ಉತ್ಪನ್ನಗಳಿಗೆ ಉತ್ತಮ ಮಾರುಕಟ್ಟೆ, ಸಂಪರ್ಕ ಮತ್ತು ಪ್ರಚಾರಕ್ಕಾಗಿ ಏಕೀಕೃತ ಮಾರುಕಟ್ಟೆ ವೇದಿಕೆ ಕಲ್ಪಿಸಿ ತಂತ್ರಜ್ಞಾನ ಅಳವಡಿಕೆಯನ್ನು ಉತ್ತೇಜಿಸಲಾಗುವುದು.”


Spread the love

About Laxminews 24x7

Check Also

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಜೋಶಿ

Spread the love ಹುಬ್ಬಳ್ಳಿ : ಮುಸ್ಲಿಂ ಮೀಸಲಾತಿ ವಿಚಾರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸುಳ್ಳು ಹೇಳುತ್ತಿದ್ದಾರೆ. ಸುಳ್ಳು ಹೇಳುವುದರಲ್ಲಿ ಅವರು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ