ಹಾವೇರಿ, ಮಾರ್ಚ್ 13: ಸಿದ್ದರಾಮಯ್ಯ ಆರಂಭಿಸಿದ ಯೋಜನೆಗಳಿಂದಲೇ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಹೇಳಿದ್ದಾರೆ.
ಶನಿವಾರ ಹಾವೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ನೇತೃತ್ವದ ಸರ್ಕಾರ ರಚಿಸಿದ ಯೋಜನೆಗಳಿಂದಲೇ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರಲಿದೆ.
ಸಿದ್ದರಾಮಯ್ಯ ಅವರು ಐದು ವರ್ಷಗಳ ಕಾಲ ಜನಪರ ಯೋಜನೆಗಳನ್ನು ಜಾರಿಗೊಳಿಸುವ ಮೂಲಕ ರಾಜ್ಯದ ಸಮಗ್ರ ಅಭಿವೃದ್ಧಿಗೆ ಶ್ರಮಿಸಿದ್ದಾರೆ. ಅವರ ಶ್ರಮ ಎಂದಿಗೂ ವ್ಯರ್ಥವಾಗುವುದಿಲ್ಲ ಎಂದರು.
ಹಾವೇರಿಯು ಕಾಂಗ್ರೆಸ್ನ ಭದ್ರಕೋಟೆ ಮುಂದೆಯೂ ಹೀಗೆಯೇ ಇರಲಿದೆ, ರಾಜಕೀಯ ಬದಲಾವಣೆಗಳಿಂದಾಗಿ ಬಿಜೆಪಿ ಅಧಿಕಾರದಲ್ಲಿದೆ ಆದರೆ ಜನರ ಮನಸ್ಸಿನಲ್ಲಿ ಇನ್ನೂ ಕಾಂಗ್ರೆಸ್ ಪಕ್ಷವೇ ಇದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಮುಂದಿನ ದಿನಗಳಲ್ಲಿ ಮತ್ತೆ ಹಾವೇರಿ ಕಾಂಗ್ರೆಸ್ ಪಾಲಾಗಲಿದೆ, ಬಿಜೆಪಿಯ ಜನ ವಿರೋಧಿ-ರೈತ ವಿರೋಧಿ ನೀತಿಗಳಿಂದ ಆಕ್ರೋಶಗೊಂಡಿರುವ ಮತದಾರರು ಮತ್ತೊಮ್ಮೆ ಕಾಂಗ್ರೆಸ್ ಆಶೀರ್ವದಿಸುವ ಮೂಲಕ ರಾಜ್ಯದಲ್ಲಿ ಅಧಿಕಾರಕ್ಕೆ ತರಲಿದ್ದಾರೆ ಎಂದರು.
ನಿನ್ನೆಯಷ್ಟೇ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ವಿಚಾರವಾಗಿ ಮಾತನಾಡಿದ್ದ ಅವರು, ಮಾಜಿ ಸಚಿವ ಸಿಡಿ ಪ್ರಕರಣ ತನಿಖೆಗೆ ಎಸ್ಐಟಿ ರಚನೆ ಮಾಡಿರುವುದು ಸ್ವಾಗತಾರ್ಹ, ಆದರೆ, ಯಾವುದೇ ಪ್ರಕರಣದಲ್ಲಿ ಎಸ್ಐಟಿ ವರದಿಯನ್ನಷ್ಟೇ ನೀಡುತ್ತದೆ. ಎಫ್ಐಆರ್ ದಾಖಲಾದರೆ ಮಾತ್ರ ಅಪರಾಧಿಗಳಿಗೆ ಶಿಕ್ಷೆ ನೀಡಲು ಸಾಧ್ಯ ಎಂದು ಹೇಳಿದ್ದರು.