ಬೆಂಗಳೂರು,ಮಾ.13- ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಸೋಮವಾರ ಸಚಿವರ ಸಭೆ ಕರೆದಿರುವುದು ರಾಜ್ಯ ರಾಜಕೀಯದಲ್ಲಿ ಭಾರೀ ಕುತೂಹಲಕ್ಕೆ ಕಾರಣವಾಗಿದೆ. ಅಂದು ಬೆಳಗ್ಗೆ 10 ಗಂಟೆಗೆ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸಭೆ ಕರೆಯಲಾಗಿದ್ದು, ಹಲವು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ. ಮೇಲ್ನೋಟಕ್ಕೆ ಇದು ಒಂದು ಅನೌಪಚಾರಿಕ ಸಭೆ ಎಂದು ಹೇಳಲಾಗುತ್ತಿದೆ. ರಾಜ್ಯದಲ್ಲಿ ಇತ್ತೀಚೆಗೆ ನಡೆದಿರುವ ಕೆಲವು ವಿದ್ಯಮಾನಗಳ ಬಗ್ಗೆ ಚರ್ಚಿಸಲು ಸಚಿವರ ಸಭೆ ಕರೆದಿದ್ದಾರೆ ಎಂಬ ಮಾತು ಕೇಳಿಬರುತ್ತಿದೆ.
ಮಾಜಿ ಸಚಿವ ರಮೇಶ್ ಜಾರಕಿಹೊಳಿ ವಿರುದ್ಧ ಕೇಳಿಬಂದಿರುವ ಸಿ.ಡಿ ಆರೋಪ, ಸಚಿವರ ರಾಜೀನಾಮೆ, ರಾಜ್ಯದಲ್ಲಿ ಕೊರೊನಾ ಪ್ರಕರಣಗಳ ಹೆಚ್ಚಳ, ಕೆಲವು ಪ್ರದೇಶಗಳಲ್ಲಿ ನಿರ್ಬಂಧ ವಿಧಿಸುವುದು, ಸದ್ಯದಲ್ಲೇ ನಡೆಯಲಿರುವ ಉಪಚುನಾವಣೆ ಸೇರಿದಂತೆ ಪ್ರಚಲಿತ ವಿದ್ಯಮಾನಗಳ ಬಗ್ಗೆ ಚರ್ಚೆ ನಡೆಯಲಿದೆ. ಬಹುದಿನಗಳ ನಂತರ ಸಚಿವರ ಸಭೆ ಕರೆದಿರುವ ಸಿಎಂ, ಮುಂದೆ ಕೈಗೊಳ್ಳಬೇಕಾದ ತೀರ್ಮಾನಗಳ ಬಗ್ಗೆ ತಮ್ಮ ಸಹೋದ್ಯೋಗಿಗಳ ಜೊತೆ ಮಾಹಿತಿಯನ್ನು ಪಡೆಯಲಿದ್ದಾರೆ.
ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಸಿ.ಡಿ ವಿವಾದದಿಂದ ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿದ್ದು, ಬಿಜೆಪಿಗೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ. ತೆರವಾಗಿರುವ ಈ ಸ್ಥಾನಕ್ಕೆ ಯಾರನ್ನು ತೆಗೆದುಕೊಳ್ಳಬೇಕು, ಸಿ.ಡಿಯಲ್ಲಿ ಅವರ ಪಾತ್ರ ಏನೂ ಇಲ್ಲವೆಂದರೆ ಪುನಃ ಅವರಿಗೇ ಕೊಡಬೇಕೆ? ಅವರ ಸಹೋದರ ಬಾಲಚಂದ್ರ ಜಾರಕಿಹೊಳಿಗೆ ನೀಡಬೇಕೆ? ಎಂಬುದರ ಕುರಿತಾಗಿ ಸಭೆಯಲ್ಲಿ ಅಭಿಪ್ರಾಯಗಳನ್ನು ಸಂಗ್ರಹಿಸಲಿದ್ದಾರೆ.
ಎಲ್ಲಕ್ಕಿಂತ ಹೆಚ್ಚಾಗಿ ಕಳೆದ 10 ದಿನಗಳಿಂದ ಕೊರೊನಾ ಸಂಖ್ಯೆ ಮತ್ತೆ ಹೆಚ್ಚಳವಾಗತ್ತಿರುವುದು ಆತಂಕ ಸೃಷ್ಟಿಸಿದೆ. ಮಹಾರಾಷ್ಟ್ರದ ನಾಗ್ಪುರ ಸೇರಿದಂತೆ ಮತ್ತಿತರ ಕಡೆ ಲಾಕ್ಡೌನ್ ಜಾರಿ ಮಾಡಿದ್ದರೆ, ಇನ್ನು ಕೆಲವು ನಗರಗಳಲ್ಲಿ ರಾತ್ರಿ ಕಫ್ರ್ಯೂ ವಿಧಿಸಲಾಗಿದೆ. ಕರ್ನಾಟಕದಲ್ಲೂ ಕೊರೊನಾ ಪಾಸಿಟಿವ್ ಸಂಖ್ಯೆ ಹೆಚ್ಚಾಗುತ್ತಿದೆ. ರಾಜಧಾನಿ ಬೆಂಗಳೂರು, ಮೈಸೂರು, ಮಂಗಳೂರು, ಬಳ್ಳಾರಿ ಸೇರಿದಂತೆ ಮತ್ತಿತರ ಕಡೆ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿರುವುದು ಆತಂಕವೊಡ್ಡಿದೆ. ಇದರ ಜೊತೆಗೆ ಬಳ್ಳಾರಿ ಮತ್ತು ಶ್ರೀನಗರದಲ್ಲಿ ದಕ್ಷಿಣ ಆಫ್ರಿಕಾ ಮಾದರಿಯ ಸೋಂಕು ಕಾಣಿಸಿಕೊಂಡಿದೆ.