ಬೆಳಗಾವಿ: ಲೋಕಸಭಾ ಉಪ ಚುನಾವಣೆಯ ಮತ ಎಣಿಕೆ ಕೇಂದ್ರ ಸ್ಥಾಪನೆಗೆ ಸಂಬಂಧಿಸಿದಂತೆ ನಗರದ ಟಿಳಕವಾಡಿಯ ಆರ್.ಪಿ.ಡಿ. ಮಹಾವಿದ್ಯಾಲಯದ ಆವರಣದಲ್ಲಿರುವ ವಿವಿಧ ಕಟ್ಟಡಗಳನ್ನು ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಪರಿಶೀಲಿಸಿದರು.
ಸ್ಟ್ರಾಂಗ್ ರೂಮ್ ಹಾಗೂ ಮತ ಎಣಿಕೆ ಕೊಠಡಿ ನಿರ್ಮಾಣಕ್ಕೆ ಸಂಬಂಧಿಸಿದಂತೆ ವಿವಿಧ ಕೊಠಡಿಗಳನ್ನು ಪರಿಶೀಲಿಸಿ, ಮೂಲಸೌಕರ್ಯಗಳ ಬಗ್ಗೆ ಅಧಿಕಾರಿಗಳ ಜತೆ ಚರ್ಚೆ ನಡೆಸಿದರು.
ಮಹಾವಿದ್ಯಾಲಯದ ವಿದ್ಯಾರ್ಥಿಗಳಿಗೆ ಹಾಗೂ ದೈನಂದಿನ ಶೈಕ್ಷಣಿಕ ಚಟುವಟಿಕೆಗಳಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ಶಿಕ್ಷಣ ಸಂಸ್ಥೆಯ ಪದಾಧಿಕಾರಿಗಳಿಗೆ ತಿಳಿಸಿದರು.
ಸ್ಟ್ರಾಂಗ್ ರೂಮ್ ನಿರ್ಮಾಣ ಹಾಗೂ ಬ್ಯಾರಿಕೇಡಿಂಗ್ ಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ತಿಳಿಸಿದರು.
ಕಟ್ಟಡಗಳನ್ನು ಗುರುತಿಸಿ ಅಂತಿಮಗೊಳಿಸಿದರೆ ನಿಗದಿತ ಕಾಲಾವಧಿಯಲ್ಲಿ ಎಲ್ಲ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ಲೋಕೋಪಯೋಗಿ ಇಲಾಖೆಯ ಕಾರ್ಯನಿರ್ವಾಹಕ ಎಂಜಿನಿಯರ್ ಸಂಜೀವಕುಮಾರ್ ಹುಲಕಾಯಿ ತಿಳಿಸಿದರು. ಭದ್ರತಾ ವ್ಯವಸ್ಥೆ, ಪಾರ್ಕಿಂಗ್ ಮತ್ತಿತರ ವಿಷಯಗಳ ಕುರಿತು ಪರಿಶೀಲನೆ ನಡೆಸಲಾಯಿತು.