ಬೆಂಗಳೂರು, ಮಾ.20- ಜಿದ್ದಾಜಿದ್ದಿನ ಕಣವಾಗಲಿರುವ ಬೀದರ್ ಜಿಲ್ಲೆಯ ಬಸವಕಲ್ಯಾಣ ವಿಧಾನಸಭೆ ಕ್ಷೇತ್ರದ ಉಪ ಚುನಾವಣೆಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಪುತ್ರ ಬಿ.ವೈ.ವಿಜಯೇಂದ್ರ ಅವರನ್ನು ಕಣಕ್ಕಿಳಿಸಬೇಕೆಂಬ ಅಭಿಪ್ರಾಯ ಇಂದು ನಡೆದ ಕೋರ್ಕಮಿಟಿ ಸಭೆಯಲ್ಲಿ ವ್ಯಕ್ತವಾಗಿದೆ.
ಮಲ್ಲೇಶ್ವರಂನಲ್ಲಿರುವ ಪಕ್ಷದ ಕಚೇರಿಯಲ್ಲಿ ನಡೆದ ಕೋರ್ಕಮಿಟಿ ಸಭೆಯಲ್ಲಿ ಬಸವಕಲ್ಯಾಣದಿಂದ ಬಿ.ವೈ.ವಿಜಯೇಂದ್ರ ಅವರನ್ನು ಕಣಕ್ಕಿಳಿಸಲು ಮುಖಂಡರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಕಾಂಗ್ರೆಸ್ ದಿ.ನಾರಾಯಣರಾವ್ ಅವರ ಪತ್ನಿಗೆ ಟಿಕೆಟ್ ಘೋಷಣೆ ಮಾಡಿರುವ ಹಿನ್ನೆಲೆಯಲ್ಲಿ ಅನುಕಂಪ ಸಿಕ್ಕರೆ ಬಿಜೆಪಿಗೆ ಹಿನ್ನಡೆಯಾಗಬಹುದೆಂಬ ಕಾರಣಕ್ಕಾಗಿ ಬಿಜೆಪಿಯಿಂದ ವಿಜಯೆಂದ್ರ ಅವರನ್ನೇ ಅಭ್ಯರ್ಥಿ ಮಾಡಬೇಕೆಂದು ಕೋರ್ಕಮಿಟಿ ಸಭೆಯ ಪ್ರಮುಖರು ತೀರ್ಮಾನಿಸಿದ್ದಾರೆ.
ಈ ಹಿಂದೆ ಕೆ.ಆರ್.ಪೇಟೆ ಮತ್ತು ಶಿರಾದಲ್ಲಿ ವಿಜಯೇಂದ್ರ ಚುನಾವಣಾ ಉಸ್ತುವಾರಿಯಾಗಿದ್ದರಿಂದ ಯುವ ಮತಗಳನ್ನು ಸೆಳೆಯುವಲ್ಲಿ ಯಶಸ್ವಿಯಾಗಿದ್ದರು. ಇದು ಪಕ್ಷಕ್ಕೆ ಹೆಚ್ಚಿನ ಲಾಭವನ್ನು ತಂದಿತ್ತು. ಹೀಗಾಗಿ ಬಸವಕಲ್ಯಾಣದಿಂದ ಅವರನ್ನು ಅಭ್ಯರ್ಥಿ ಮಾಡಿದರೆ ಗೆಲ್ಲಬಹುದೆಂದು ಪಕ್ಷದ ಪ್ರಮುಖರು ಹೇಳಿದ್ದಾರೆಂದು ತಿಳಿದು ಬಂದಿದೆ.
ಬಸವಕಲ್ಯಾಣದಲ್ಲಿ 40ಸಾವಿರ ಮರಾಠ ಸಮುದಾಯದ ಮತಗಳಿವೆ. ಈಗಾಗಲೇ ರಾಜ್ಯ ಸರ್ಕಾರ ಮರಾಠ ಅಭಿವೃದ್ಧಿ ನಿಗಮ ಮಂಡಳಿಯನ್ನು ಘೋಷಣೆ ಮಾಡಿದೆ. ಅಲ್ಲದೆ ಈ ಕ್ಷೇತ್ರದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಲಿಂಗಾಯಿತ ಮತಗಳು ನಿರ್ಣಾಯಕವಾಗಿರುವುದರಿಂದ ಅದೇ ಸಮುದಾಯದ ವಿಜಯೇಂದ್ರ ಅವರನ್ನು ಕಣಕ್ಕಿಳಿಸಿದರೆ ಪಕ್ಷಕ್ಕೆ ಅನುಕೂಲವಾಗಲಿದೆ ಎಂಬ ಅಭಿಪ್ರಾಯ ವ್ಯಕ್ತವಾಗಿದೆ.
ಅಲ್ಲದೆ, ಕ್ಷೇತ್ರದಲ್ಲಿ ಬಿಜೆಪಿಯಿಂದ ಸ್ರ್ಪಸಲು ಹೆಚ್ಚಿನ ಆಕಾಂಕ್ಷಿಗಳಿದ್ದಾರೆ. ಯಾರಿಗೇ ಟಿಕೆಟ್ ನೀಡಿದರೂ ಅಸಮಾಧಾನ ವ್ಯಕ್ತವಾಗಬಹುದು. ಟಿಕೆಟ್ ವಂಚಿತರು ಭಿನ್ನಮತ ಸಾರಿದರೆ ಫಲಿತಾಂಶದ ಮೇಲೆ ವ್ಯತಿರಿಕ್ತ ಪರಿಣಾಮ ಬೀರಬಹುದು. ವಿಜಯೇಂದ್ರ ಕಣಕ್ಕಿಳಿದರೆ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳುತ್ತಾರೆ. ಹೀಗಾಗಿ ಅವರನ್ನು ಕಣಕ್ಕಿಳಿಸಲು ಪಕ್ಷ ಚಿಂತನೆ ನಡೆಸಿದೆ.
ಅಂತಿಮವಾಗಿ ಕೇಂದ್ರ ಚುನಾವಣಾ ಸಮಿತಿಗೆ ವಿಜಯೇಂದ್ರ ಹೆಸರಿನ ಜತೆಗೆ ಸ್ಥಳೀಯ ಒಂದಿಬ್ಬರ ಹೆಸರನ್ನು ಕಳುಹಿಸಿಕೊಡಬೇಕು. ಅಂತಿಮವಾಗಿ ವರಿಷ್ಠರು ಯಾರ ಹೆಸರನ್ನು ಸೂಚಿಸುತ್ತಾರೋ ಅತಂಹವರ ಗೆಲುವಿಗೆ ಒಗ್ಗಟ್ಟಿನಿಂದ ಶ್ರಮಿಸಬೇಕೆಂದು ಕೋರ್ಕಮಿಟಿ ಸಭೆಯಲ್ಲಿ ತೀರ್ಮಾನಿಸಲಾಗಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.