ಬೆಂಗಳೂರು: ಜಿ.ಪಂ., ತಾ.ಪಂ. ಕ್ಷೇತ್ರ ಪುನರ್ವಿಂಗಡಣೆ ಮಾರ್ಗಸೂಚಿಗಳ ಬಗ್ಗೆ ವಿಧಾನಸಭೆಯಲ್ಲಿ ಪಕ್ಷಾತೀತವಾಗಿ ಸದಸ್ಯರಿಂದ ಆಕ್ಷೇಪ ವ್ಯಕ್ತವಾದ ಹಿನ್ನೆಲೆಯಲ್ಲಿ ಗುರುವಾರ ಸಭೆ ನಡೆಸಿ ಪರಿಷ್ಕೃತ ಮಾರ್ಗಸೂಚಿಗಳನ್ನು ರಾಜ್ಯ ಚುನಾವಣ ಆಯೋಗಕ್ಕೆ ಸಲ್ಲಿಸಲಾಗುವುದು ಎಂದು ಸರಕಾರ ಪ್ರಕಟಿಸಿದೆ. ಈ ನಡುವೆ, ಯಾವುದೇ ಕಾರಣಕ್ಕೂ ಜಿ.ಪಂ., ತಾ.ಪಂ. ಚುನಾವಣೆ ಮುಂದೂಡುವುದಿಲ್ಲ ಎಂದು ಸ್ಪಷ್ಟಪಡಿಸಿದೆ.
ಸೋಮವಾರ ಶೂನ್ಯವೇಳೆಯಲ್ಲಿ ಬಿಜೆಪಿಯ ವಿ. ಸುನಿಲ್ ಕುಮಾರ್ ಪ್ರಸ್ತಾವಿಸಿದ ವಿಷಯದ ಬಗ್ಗೆ ವಿಸ್ತೃತ ಚರ್ಚೆ ನಡೆಯಿತು. ಜಿ.ಪಂ., ತಾ.ಪಂ. ಕ್ಷೇತ್ರಗಳ ಪುನರ್ವಿಂಗಡಣೆ ಪ್ರಕ್ರಿಯೆ ಆರಂಭವಾಗಿದೆ.
ಹೊಸ ತಾಲೂಕು ರಚನೆಯಾಗಿದ್ದರೆ ಜನಸಂಖ್ಯೆ ಆಧಾರದಲ್ಲಿ ವರ್ಗೀಕರಣ ಮಾರ್ಗಸೂಚಿಯಿಂದ ಸಮಸ್ಯೆಯಾಗುತ್ತಿದೆ. ಆಡಳಿತ, ಅನುದಾನ ಲಭ್ಯತೆಯಲ್ಲಿ ಏರಿಳಿತವಾಗಲಿದೆ. ವೈಜ್ಞಾನಿಕವಾಗಿ ಕ್ಷೇತ್ರ ಪುನರ್ವಿಂಗಡಣೆಯಾಗಬೇಕಿದ್ದು, ಸರಕಾರ ಮಧ್ಯ ಪ್ರವೇಶಿಸಿ ಸಮಸ್ಯೆ ಸರಿಪಡಿಸಬೇಕು ಎಂದು ಮನವಿ ಮಾಡಿದರು. ಇದಕ್ಕೆ ಉತ್ತರಿಸಿದ ಸಚಿವ ಬೊಮ್ಮಾಯಿ, ಈ ಬಗ್ಗೆ ಚರ್ಚಿಸಿ ಆಯೋಗಕ್ಕೆ ತಿಳಿಸಲಾಗುವುದು ಎಂದರು.