ಬೆಂಗಳೂರು: ಸಿಡಿ ಪ್ರಕರಣದಲ್ಲಿ ರಾಜಿನಾಮೆ ಸಲ್ಲಿಸಿರುವ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರನ್ನು ಅವರ ಸಹೋದರ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ.
ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ರಚನೆ ಮಾಡಿರುವ ಎಸ್ಐಟಿ ತನಿಖೆಯ ಬಗ್ಗೆ ಚರ್ಚೆ ಮಾಡಿದ್ದಾರೆ ಎಂದು ತಿಳಿದು ಬಂದಿದೆ. ರಮೇಶ್ ಜಾರಕಿಹೊಳಿ ಭೇಟಿಯ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಶಾಸಕ ಬಾಲಚಂದ್ರ ಜಾರಕಿಹೊಳಿ, ಸಿಡಿ ಪ್ರಕರಣ ಕುರಿತಂತೆ ಎಸ್ ಐ ಟಿ ತನಿಖೆ ಚುರುಕಾಗಿ ಸಾಗುತ್ತಿದೆ.
ತನಿಖೆ ನಡೆಯುತ್ತಿರುವುದರಿಂದ ಬಹಿರಂಗ ಹೇಳಿಕೆ ನೀಡುವುದಿಲ್ಲ. ಸಚಿವರು, ಶಾಸಕರು ಮಾಧ್ಯಮಗಳಿಗೆ ಹೇಳಿಕೆ ನೀಡಬೇಡಿ ಎಂದು ಕಾನೂನು ಸಲಹೆಗಾರರು ತಿಳಿಸಿದ್ದಾರೆ. ಹೀಗಾಗಿ ಬಹಿರಂಗ ಹೇಳಿಕೆ ನೀಡುವುದಿಲ್ಲ. ಎಸ್ಐಟಿ ತನಿಖೆ ಸರಿಯಾದ ದಿಕ್ಕಿನಲ್ಲೇ ನಡೆಯುತ್ತಿದೆ ಎಂದು ಹೇಳಿದರು.