ಬೆಂಗಳೂರು: ರೈತ ನಾಯಕ ರಾಕೇಶ್ ಟಿಕಾಯತ್ ವಿರುದ್ಧ ಶಿವಮೊಗ್ಗ, ಹಾವೇರಿಯಲ್ಲಿ ಪ್ರಕರಣ ದಾಖಲಾಗಿದೆ. ಪ್ರಚೋದನಕಾರಿ ಭಾಷಣ ಮಾಡಿದ ಆರೋಪ ಅವರ ಮೇಲಿದೆ. ರೈತರ ಧ್ವನಿ ಹತ್ತಿಕ್ಕುವ ಸರ್ಕಾರದ ಪ್ರಯತ್ನಗಳಿವು ಎಂದು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಆರೋಪಿಸಿದ್ದಾರೆ.
ಪ್ರಚೋದನಕಾರಿ ಭಾಷಣದ ಆರೋಪದ ಮೇಲೆ ನಿಜಕ್ಕೂ ಕೇಸು ದಾಖಲಿಸುವುದೇ ಆದರೆ ಬಿಜೆಪಿಯ ಎಷ್ಟು ನಾಯಕರ ಮೇಲೆ ಎಷ್ಟೆಷ್ಟು ಪ್ರಕರಣ ದಾಖಲಾಗಬೇಕಿತ್ತು ಎಂದು ಎಚ್ ಡಿಕೆ ಟ್ವೀಟ್ ಮೂಲಕ ಪ್ರಶ್ನಿಸಿದ್ದಾರೆ.
“ಹೋರಾಟ ಮಾಡಲು ರೈತರು ದೆಹಲಿಗೇ ಬರಬೇಕಿಲ್ಲ, ದೆಹಲಿಯಂತೆ ಇಲ್ಲೇ ಹೋರಾಟ ಮಾಡಿ,” ಎಂಬ ಟಿಕಾಯತ್ ಹೇಳಿಕೆಯಲ್ಲಿ ಪ್ರಚೋದನೆ ಏನೂ ಇಲ್ಲ. ಇದರಲ್ಲಿ ತಪ್ಪು ಕಂಡವರದ್ದು ಗ್ರಹಿಕೆ ದೋಷವಷ್ಟೇ. ಹೋರಾಟ, ಹೋರಾಟಕ್ಕೆ ಕರೆ ನೀಡುವುದು ಸಂವಿಧಾನ ಬದ್ಧ. ಅವರು ಕೊಚ್ಚಿ ಎನ್ನಲಿಲ್ಲ, ಕೊಲ್ಲಿರಿ ಎನ್ನಲಿಲ್ಲ. ಟಿಕಾಯತ್ ವಿರುದ್ಧದ ಕೇಸು ರದ್ದಾಗಬೇಕು ಎಂದು ಅವರು ಆಗ್ರಹಿಸಿದ್ದಾರೆ.