ರಾಜ್ಯದಲ್ಲಿ ಉಪ ಚುನಾವಣಾ ಕಣ ದಿನದಿಂದ ದಿನಕ್ಕೆ ರಂಗೇರುತ್ತಿದ್ದು, ಆಡಳಿತರೂಢ ಬಿಜೆಪಿ ಗೆಲುವಿಗಾಗಿ ನಾನಾ ತಂತ್ರ ಹೆಣೆಯುತ್ತಿದೆ. ಇನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಕೂಡಾ ಕಾಂಗ್ರೆಸ್ ಗೆಲುವಿಗೆ ತೀವ್ರ ಪ್ರಯತ್ನ ನಡೆಸಿದ್ದು, ಇವರಿಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಹಲವು ನಾಯಕರು ಸಾಥ್ ನೀಡಿದ್ದಾರೆ.
ಇದರ ಮಧ್ಯೆ ಉಪ ಚುನಾವಣೆಯಲ್ಲಿ ಕಣಕ್ಕಿಳಿಯುವುದಿಲ್ಲ ಎಂದು ಹೇಳಿದ್ದ ಜಾತ್ಯತೀತ ಜನತಾದಳ ಬಸವಕಲ್ಯಾಣದಲ್ಲಿ ತನ್ನ ಅಭ್ಯರ್ಥಿಯನ್ನು ಕಣಕ್ಕಿಳಿಸುವ ಮೂಲಕ ಅಚ್ಚರಿ ಮೂಡಿಸಿದೆ. ಇದೀಗ ಬೆಂಗಳೂರಿನ ಚಾಮರಾಜಪೇಟೆ ಶಾಸಕ ಜಮೀರ್ ಅಹಮದ್ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಹೊಸ ಬಾಂಬ್ ಸಿಡಿಸಿದ್ದಾರೆ.
ಬೀದರ್ ನಲ್ಲಿ ಮಾತನಾಡಿದ ಜಮೀರ್ ಅಹಮದ್, ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಬಿಜೆಪಿ ಏಜೆಂಟ್ ಎಂದರಲ್ಲದೆ ಬಿಜೆಪಿ ಬಳಿ 10 ಕೋಟಿ ರೂಪಾಯಿ ಪಡೆದು ಜೆಡಿಎಸ್ ಅಭ್ಯರ್ಥಿಯನ್ನು ಬಸವಕಲ್ಯಾಣದಲ್ಲಿ ಕಣಕ್ಕಿಳಿಸಿದ್ದಾರೆ ಎಂಬ ಗಂಭೀರ ಆರೋಪ ಮಾಡಿದ್ದಾರೆ.