ಬೆಳಗಾವಿ – ಬಿಜೆಪಿ ನೂರಾರು ಸುಳ್ಳು ಭರವಸೆಗಳನ್ನು ಜನರಿಗೆ ನೀಡಿ ಕೇಂದ್ರ ಮತ್ತು ರಾಜ್ಯದಲ್ಲಿ ಅಧಿಕಾರ ಹಿಡಿದಿದೆ. ಆದರೆ ಭ್ರಷ್ಟಾಚಾರ ಹೊರತುಪಡಿಸಿ ಎರಡೂ ಸರಕಾರಗಳ ಸಾಧನೆ ಶೂನ್ಯ ಎಂದು ಮಾಜಿ ಸಚಿವ ಎಂ.ಬಿ.ಪಾಟೀಲ ಹೇಳಿದರು.
ಬೆಳಗಾವಿ ಲೋಕಸಭಾ ಉಪ ಚುನಾವಣೆಯ ಪ್ರಯುಕ್ತ ಇಂದು ಮುತ್ನಾಳ ಗ್ರಾಮದಲ್ಲಿ ನಡೆದ ಚುನಾವಣಾ ಪ್ರಚಾರ ಸಭೆಯಲ್ಲಿ ಅವರು ಮಾತನಾಡುತ್ತಿದ್ದರು. ವಿದೇಶದಿಂದ ಕಪ್ಪು ಹಣ ವಾಪಸ್ ತರುವುದಾಗಿ ಹೇಳಲಾಗಿತ್ತು. ಪ್ರತಿಯೊಬ್ಬರ ಖಾತೆಗೆ 15 ಲಕ್ಷ ರೂ. ಹಾಕುವುದಾಗಿ ಹೇಳಲಾಗಿತ್ತು. 7 ವರ್ಷದಲ್ಲಿ 14 ಲಕ್ಷ ಉದ್ಯೋಗ ಸೃಷ್ಟಿ ಮಾಡುವುದಾಗಿ ಹೇಳಲಾಗಿತ್ತು. ಆದರೆ ಲಕ್ಷಾಂತರ ಜನರು ಉದ್ಯೋಗ ಕಳೆದುಕೊಂಡರು. ರೈತರ ಆದಾಯ ದ್ವಿಗುಣ ಮಾಡುವುದಾಗಿ ಹೇಳಿದ್ದರು. ಅದರೆ ರೈತರು ಹಲವು ತಿಂಗಳಿಂದ ಪ್ರತಿಭಟನೆ ನಡೆಸುತ್ತಿದ್ದರೂ ಸೌಜನ್ಯಕ್ಕೂ ರೈತರನ್ನು ಹೋಗಿ ಭೇಟಿಯಾಗಿಲ್ಲ. ಅವರ ಸಂಕಷ್ಟ ಆಲಿಸಿಲ್ಲ. ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ ದರ ಗಗನಕ್ಕೇರಿದೆ. ಮೋದಿ ಹೇಳಿದ ಅಚ್ಚೆ ದಿನಗಳು ಎಲ್ಲಿ? ಅಚ್ಚೆ ದಿನ್ ಬಂದಿದ್ದು ಯಾರಿಗೆ ಎಂದು ಪಾಟೀಲ್ ಪ್ರಶ್ನಿಸಿದರು.
ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಮಾತನಾಡಿ, ಬೆಳಗಾವಿ ಜಿಲ್ಲೆಯ ಸರ್ವತೋಮುಖ ಅಭಿವೃದ್ಧಿಗಾಗಿ ಸತೀಶಣ್ಣಾ ಜಾರಕಿಹೊಳಿಯವರನ್ನು ಬೆಂಬಲಿಸಿ ಎಂದು ಮನವಿ ಮಾಡಿದರು.
ಕಾಂಗ್ರೆಸ್ ಪಕ್ಷದ ಅಭಿವೃದ್ಧಿ ಕಾರ್ಯಗಳನ್ನು ಜನರಿಗೆ ತಿಳಿಸುವುದರೊಂದಿಗೆ, ಬೆಳಗಾವಿ ಜಿಲ್ಲೆಯ ಅಭಿವೃದ್ಧಿಗಾಗಿ ತಮ್ಮ ಅಮೂಲ್ಯವಾದ ಮತವನ್ನು ಕಾಂಗ್ರೆಸ್ ಪಕ್ಷದ ಸರಳ, ಸಜ್ಜನಿಕೆಯ ಶ್ರಮಜೀವಿಯಾದ ಸತೀಶಣ್ಣಾ ಜಾರಕಿಹೊಳಿಯವರಿಗೆ ನೀಡಿ, ಬೆಂಬಲಿಸುವಂತೆ ಅವರು ವಿನಂತಿಸಿದರು.
ಚಿಕ್ಕೋಡಿಯ ಮಾಜಿ ಸಂಸದ ಪ್ರಕಾಶ ಹುಕ್ಕೇರಿ, ಕಾಂಗ್ರೆಸ್ ಜಿಲ್ಲಾಧ್ಯಕ್ಷ ವಿನಯ ನಾವಲಗಟ್ಟಿ, ಸಿ ಸಿ ಪಾಟೀಲ, ಚನ್ನರಾಜ ಹಟ್ಟಿಹೊಳಿ, ನಾಗರಾಜ್ ಯಾದವ್. ಪಕ್ಷದ ಕಾರ್ಯಕರ್ತರು, ಗ್ರಾಮಸ್ಥರು ಉಪಸ್ಥಿತರಿದ್ದರು.