ಬೆಂಗಳೂರು : ರಾಜ್ಯ ರಾಜಧಾನಿಯಲ್ಲಿ ಕೊರೋನಾ 2ನೇ ಅಲೆಯ ಅಬ್ಬರಿಸುತ್ತಿದೆ. ದಿನೇ ದಿನೇ ಹೆಚ್ಚಾಗುತ್ತಿರುವಂತ ಕೊರೋನಾ ಸೋಂಕಿನ ಮುಂಜಾಗ್ರತಾ ಕ್ರಮವಾಗಿ ಏಪ್ರಿಲ್ 11ರಿಂದ 14ರವರೆಗೆ ಲಸಿಕಾ ಅಭಿಯಾನಕ್ಕೂ ಕೂಡ ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ. ಇಂತಹ ಸಂದರ್ಭದಲ್ಲಿ ರಾಜ್ಯದ ಸಚಿವಾಲಯದ 45 ವರ್ಷ ಮೇಲ್ಪಟ್ಟ ಅಧಿಕಾರಿ, ನೌಕರರಿಗೆ ದಿನಾಂಕ 12-04-2021ರಂದು ಬ್ಯಾಂಕ್ವೆಟ್ ಹಾಲ್ ನಲ್ಲಿ ಕೊರೋನಾ ಲಸಿಕಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಈ ಕುರಿತಂತೆ ರಾಜ್ಯ ಸರ್ಕಾರದ ಸಿಆಸುಇ(ಕಾರ್ಯದರ್ಶಿ) ಸರ್ಕಾರದ ಅಧೀನ ಕಾರ್ಯದರ್ಶಿ ಕೆ.ರವೀಂದ್ರ ಸುತ್ತೋಲೆ ಹೊರಡಿಸಿದ್ದು, ಬೆಂಗಳೂರು ನಗರದಲ್ಲಿ ಕೋವಿಡ್-19 ಪ್ರಕರಣಗಳು ದಿನೇ ದಿನೇ ಏರಿಕೆಯಾಗುತ್ತಿರುವುದರಿಂದ 45 ವರ್ಷ ಮೇಲ್ಪಟ್ಟವರು ಲಸಿಕೆ ಪಡೆಯುವುದು ಸೂಕ್ತವೆಂದು ಆರೋಗ್ಯ ಇಲಾಖೆಯು ನಿರ್ಧರಿಸಿದೆ.
ಈ ಹಿನ್ನಲೆಯಲ್ಲಿ ಆರೋಗ್ಯ ಇಲಾಖೆಯ ಸಹಯೋಗದೊಂದಿಗೆ ಸಚಿವಾಲಯದಲ್ಲಿ ಕಾರ್ಯನಿರ್ವಹಿಸುತ್ತಿರುವ 45 ವರ್ಷ ಮೇಲ್ಪಟ್ಟ ಅಧಿಕಾರಿ, ನೌಕರರುಗಳಿಗೆ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ದಿನಾಂಕ 12-04-2021ರಂದು ಲಸಿಕೆ ನೀಡಲು ಅಗತ್ಯ ಸಿದ್ಧತೆ ಮಾಡಲಾಗಿದೆ.
ಸಚಿವಾಲಯದಲ್ಲಿ ಕಾರ್ಯನಿರ್ವಹಿಸುತ್ತಿರುವ 45 ವರ್ಷ ಮೇಲ್ಪಟ್ಟ ಅಧಿಕಾರಿ, ಸಿಬ್ಬಂದಿಗಳು ತಪ್ಪದೇ ತಮ್ಮ ತಮ್ಮ ಆಧಾರ್ ಕಾರ್ಡ್ ಮತ್ತು ಪಾನ್ ಕಾರ್ಡ್ ನೊಂದಿಗೆ ಬ್ಯಾಂಕ್ವೆಟ್ ಹಾಲ್ ನಲ್ಲಿ ಹಾಜರಾಗಿ, ಲಸಿಕೆ ಪಡೆಯುವಂತೆ ಸೂಚಿಸಿದ್ದಾರೆ.