ನವದೆಹಲಿ, ಏಪ್ರಿಲ್ 15: ರಾಜ್ಯದಲ್ಲಿ ಕೊರೊನಾ ಸೋಂಕಿನ ನಿಯಂತ್ರಣಕ್ಕೆ ವಾರಾಂತ್ಯದ ಕರ್ಫ್ಯೂ ಹೇರಲು ನಿರ್ಧರಿಸಿರುವುದಾಗಿ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಗುರುವಾರ ಘೋಷಿಸಿದ್ದಾರೆ.
ರಾಜ್ಯದಲ್ಲಿ ಕೊರೊನಾ ಸ್ಥಿತಿಗತಿ ಪರಿಶೀಲನೆಗೆ ಗುರುವಾರ ಮಧ್ಯಾಹ್ನ ಗವರ್ನರ್ ಅನಿಲ್ ಬೈಜಾಲ್ ಹಾಗೂ ಇತರೆ ಉನ್ನತ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ನಂತರ ವಾರಾಂತ್ಯ ಕರ್ಫ್ಯೂ ಘೋಷಣೆ ಮಾಡಿದ್ದಾರೆ.
ಕರ್ಫ್ಯೂ ಸಂದರ್ಭ ಮಾಲ್ಗಳು, ಜಿಮ್ಗಳು, ಸ್ಪಾ ಹಾಗೂ ಆಡಿಟೋರಿಯಂಗಳು ಮುಚ್ಚಿರಲಿವೆ. ಮದುವೆಗೆ ಹಾಗೂ ಯಾವುದೇ ಕಾರ್ಯಕ್ರಮಗಳಿಗೆ ಕರ್ಫ್ಯೂ ಪಾಸ್ ಕಡ್ಡಾಯವಾಗಿದೆ. ಚಿತ್ರಮಂದಿರಗಳಲ್ಲಿ ಶೇ 30ರಷ್ಟು ಭರ್ತಿಗೆ ಮಾತ್ರ ಅವಕಾಶ ನೀಡಲಾಗಿದೆ ಎಂದು ತಿಳಿಸಿದ್ದಾರೆ.
ರೆಸ್ಟೊರೆಂಟ್ಗಳಲ್ಲಿ ಆಹಾರ ಸೇವಿಸುವಂತಿಲ್ಲ. ಪಾರ್ಸೆಲ್ಗೆ ಮಾತ್ರ ಅವಕಾಶವಿದೆ. ವಾರಾಂತ್ಯದ ಮಾರುಕಟ್ಟೆಗಳಲ್ಲಿ ಕೆಲವು ನಿಬಂಧನೆಗಳೊಂದಿಗೆ ಅವಕಾಶ ಕಲ್ಪಿಸಲಾಗಿದೆ ಎಂದಿದ್ದಾರೆ.
ಶುಕ್ರವಾರ ರಾತ್ರಿ 10 ಗಂಟೆಯಿಂದ ಸೋಮವಾರ ಬೆಳಿಗ್ಗೆ 6 ಗಂಟೆವರೆಗೆ ಕರ್ಫ್ಯೂ ಜಾರಿಯಲ್ಲಿರಲಿದೆ. ಅಗತ್ಯ ಸೇವೆಗಳಿಗೆ ಜನರಿಗೆ ಯಾವುದೇ ಸಮಸ್ಯೆಯಾಗುವುದಿಲ್ಲ ಎಂದು ಕೇಜ್ರಿವಾಲ್ ಭರವಸೆ ನೀಡಿದ್ದಾರೆ.
ನಿಮ್ಮ ಆರೋಗ್ಯದ ಸಲುವಾಗಿ ಈ ನಿಬಂಧನೆಗಳನ್ನು ಹೇರಲಾಗಿದೆ. ಕೊರೊನಾ ಸೋಂಕು ಹರಡುವಿಕೆ ತಡೆಯಲು ಇವು ಅವಶ್ಯಕವಾಗಿವೆ ಎಂದು ಜನರಲ್ಲಿ ಮನವಿ ಮಾಡಿದ್ದಾರೆ.
ಬುಧವಾರ ದೆಹಲಿಯಲ್ಲಿ ಅತಿ ಹೆಚ್ಚು ಕೊರೊನಾ ಪ್ರಕರಣಗಳು ದಾಖಲಾಗಿವೆ. ಒಂದೇ ದಿನ 17,282 ಹೊಸ ಕೊರೊನಾ ಪ್ರಕರಣಗಳು ದಾಖಲಾಗಿದ್ದು, ನೂರಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ. ಈ ಹಿನ್ನೆಲೆಯಲ್ಲಿ ಬಿಗಿ ಕ್ರಮ ಕೈಗೊಳ್ಳಲಾಗಿದೆ.
ಇದೇ ಸಂದರ್ಭ ಆಸ್ಪತ್ರೆಗಳ ಕುರಿತು ಸ್ಪಷ್ಟನೆ ನೀಡಿದ ಅವರು, “ದೆಹಲಿಯ ಆಸ್ಪತ್ರೆಗಳಲ್ಲಿ ಹಾಸಿಗೆಗಳ ಕೊರತೆ ಉಂಟಾಗಿಲ್ಲ. ಸದ್ಯಕ್ಕೆ ಐದು ಸಾವಿರಕ್ಕೂ ಹೆಚ್ಚು ಹಾಸಿಗೆಗಳು ಲಭ್ಯವಿವೆ” ಎಂದು ಹೇಳಿದ್ದಾರೆ.
Laxmi News 24×7