ಬೆಳಗಾವಿ, ಎ.15: ಬೆಳಗಾವಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಎಂಇಎಸ್ ಅಭ್ಯರ್ಥಿಯನ್ನು ಬೆಂಬಲಿಸುವ ಮೂಲಕ ನಿಮ್ಮ ಮತಗಳನ್ನು ವ್ಯರ್ಥ ಮಾಡಿಕೊಳ್ಳಬೇಡಿ ಎಂದು ಮಹಾರಾಷ್ಟ್ರದ ವಿರೋಧ ಪಕ್ಷದ ನಾಯಕ ದೇವೇಂದ್ರ ಫಡ್ನವಿಸ್ ಮನವಿ ಮಾಡಿದ್ದಾರೆ.
ಗುರುವಾರ ಬೆಳಗಾವಿಯ ಹಿಂಡಲಗಾ ಗ್ರಾಮದಲ್ಲಿ ನಡೆದ ಆಯೋಜಿಸಲಾಗಿದ್ದ ಬಹಿರಂಗ ಪ್ರಚಾರ ಸಭೆಯಲ್ಲಿ ಬಿಜೆಪಿ ಅಭ್ಯರ್ಥಿ ಮಂಗಳಾ ಸುರೇಶ್ ಅಂಗಡಿ ಮತಯಾಚಿಸಿ ಮಾತನಾಡಿದ ಅವರು, ಶಿವಸೇನೆ ಮುಖಂಡ ಸಂಜಯ್ ರಾವತ್ ಕಾಂಗ್ರೆಸ್ ಅಭ್ಯರ್ಥಿಗೆ ಸಹಾಯ ಮಾಡಲು ನಿನ್ನೆ ಬೆಳಗಾವಿಗೆ ಬಂದಿದ್ದರು. ಅವರು ಎಂಇಎಸ್ ಹೆಗಲ ಮೇಲೆ ಬಂದೂಕು ಇಟ್ಟು ಬಿಜೆಪಿಯನ್ನು ಗುರಿಯನ್ನಾಗಿಸುವ ಪ್ರಯತ್ನ ಮಾಡಿದ್ದಾರೆ ಎಂದು ಟೀಕಿಸಿದರು.
ಬೆಳಗಾವಿಯಲ್ಲಿರುವ ಮರಾಠಿ ಭಾಷಿಕರು ಅಮಾಯಕರೇ ಹೊರತು ಮೂರ್ಖರಲ್ಲ. ಈ ಉಪಚುನಾವಣೆಯಲ್ಲಿ ಎಂಇಎಸ್ ಹಾಗೂ ಸಂಜಯ್ ರಾವತ್ಗೆ ಮರಾಠಿ ಭಾಷಿಕ ಮತದಾರರು ತಕ್ಕ ಪಾಠ ಕಲಿಸುತ್ತಾರೆ ಎಂದು ದೇವೇಂದ್ರ ಫಡ್ನವೀಸ್ ಹೇಳಿದರು.
ಮಹಾರಾಷ್ಟ್ರದಲ್ಲಿ ಕೊರೋನ ಸೋಂಕಿತ ರೋಗಿಗಳು ಆಕ್ಸಿಜನ್, ಬೆಡ್ ಇಲ್ಲದೇ ಸಾಯುತ್ತಿದ್ದಾರೆ. ಅಧಿಕಾರದಲ್ಲಿರುವ ಶಿವಸೇನೆ ನೇತೃತ್ವದ ಸರಕಾರ ಅಲ್ಲಿನ ಮರಾಠಿ ಭಾಷಿಕರ ಮೇಲೆ ಕಾಳಜಿ ತೋರಿಸುತ್ತಿಲ್ಲ. ಇನ್ನು ಬೆಳಗಾವಿ ಜಿಲ್ಲೆಯಲ್ಲಿರುವ ಮರಾಠಿ ಭಾಷಿಕರ ಮೇಲೆ ತೋರಿಸುತ್ತಿರುವುದು ನಕಲಿ ಪ್ರೀತಿ. ಛತ್ರಪತಿ ಶಿವಾಜಿ ಮಹಾರಾಜರ ತತ್ವದಡಿ ಪ್ರಧಾನಿ ಮೋದಿ ಆಡಳಿತ ನಡೆಸುತ್ತಿದ್ದಾರೆ. ಅವರ ಕೈ ಬಲಪಡಿಸಲು ಮಂಗಳಾ ಸುರೇಶ್ ಅಂಗಡಿಗೆ ನಿಮ್ಮ ಮತ ನೀಡಿ ಎಂದು ಅವರು ಮನವಿ ಮಾಡಿದರು.
ಟಿಪ್ಪು ಸುಲ್ತಾನ್ ಜಯಂತಿ ಆಚರಿಸುವ ಕಾಂಗ್ರೆಸ್ ಪಕ್ಷದ ಜೊತೆ ಕೈ ಜೋಡಿಸಿ ಶಿವಸೇನೆ ಸರಕಾರ ರಚನೆ ಮಾಡಿದೆ. ಕರ್ನಾಟಕದಲ್ಲಿ ಬಿಜೆಪಿ ಸರಕಾರ ಟಿಪ್ಪು ಜಯಂತಿಯನ್ನು ರದ್ದುಗೊಳಿಸಿದೆ. ಮಹಾರಾಷ್ಟ್ರದಲ್ಲಿ ಶಿವಸೇನೆ ನೇತೃತ್ವದ ಸರಕಾರ ಅಝಾನ್ ಸ್ಪರ್ಧೆ ಆಯೋಜಿಸಿದೆ. ಶಿವಸೇನೆ ಉರ್ದು ಕ್ಯಾಲೆಂಡರ್ ನಲ್ಲಿ ಬಾಳಾಠಾಕ್ರೆ ಹೆಸರನ್ನು ‘ಜನಾಬ್ ಬಾಳಾಠಾಕ್ರೆ’ ಎಂದು ಬರೆಯಲಾಗಿದೆ ಎಂದು ಅವರು ಟೀಕಿಸಿದರು.