ಬೆಂಗಳೂರು, ಏ.17- ಕೋವಿಡ್ ನಿಯಂತ್ರಣದ ಸಲುವಾಗಿ ಜನರಿಗೆ ಶಿಷ್ಠಾಚಾರವನ್ನು ಬೋಧಿಸುವ ಬಿಜೆಪಿ ನಾಯಕರು ಸಾರ್ವಜನಿಕವಾಗಿ ನಿಯಮಗಳನ್ನು ಏಕೆ ಉಲ್ಲಂಘಿಸುತ್ತಿದ್ದಾರೆ ಎಂದು ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. ಬಿಜೆಪಿ ನಾಯಕರು ಆಡಳಿತಕ್ಕಿಂತಲೂ ಚುನಾವಣಾ ಪ್ರಚಾರಕ್ಕೆ ಹೆಚ್ಚಿನ ಆದ್ಯತೆ ನೀಡಿದ್ದರು. ಕೋವಿಡ್ 2ನೆ ಅಲೆ ರಾಜ್ಯ ಮತ್ತು ಕೇಂದ್ರ ಸರ್ಕಾರಗಳ ವೈಪಲ್ಯವನ್ನು ಬಹಿರಂಗಗೊಳಿಸಿದೆ ಎಂದು ಹೇಳಿದ್ದಾರೆ.
ಜನ ಕೋವಿಡ್ಗೆ ಚಿಕಿತ್ಸೆ ಸಿಗದೆ ಅಸಹಾಯಕರಾಗಿದ್ದಾರೆ. ಮೊದಲ ಹಂತದ ಅಲೆಯಲ್ಲಾದ ಭಾರೀ ಅನಾವುತಗಳಿಂದ ಕೇಂದ್ರ, ರಾಜ್ಯ ಸರ್ಕಾರಗಳು ಪಾಠ ಕಲಿತಿಲ್ಲ. ಕೋವಿಡ್ಗೆ ಚಿಕಿತ್ಸೆ ನೀಡಲು ಬಳಸುವ ರೆಮ್ಡಿಸಿವಿರ್ ಕೊರತೆ ವ್ಯಾಪಕವಾಗಿದೆ. ಔಷಧಿಗಳ ಕೊರತೆಯನ್ನು ನಿಭಾಯಿಸಲು ಸರ್ಕಾರ ಯಾಕೆ ಕ್ರಮ ಕೈಗೊಳ್ಳಲಿಲ್ಲ ಎಂದು ಪ್ರಶ್ನಿಸಿದ್ದಾರೆ. ಕೋವಿಡ್ ಸೋಂಕಿತರಿಗಾಗಿ ಆಸ್ಪತ್ರೆಗಳಲ್ಲಿ ಹಾಸಿಗೆಗಳು ಮತ್ತು ಐಸಿಯು ಬೆಡ್ಗಳ ಕೊರತೆ ಇದೆ.
ಆಮ್ಲಜನಕ ಹಾಗೂ ಇತರ ಜೀವ ರಕ್ಷಕ ಸೌಲಭ್ಯಗಳಿಲ್ಲದೆ ಜನ ಸಂಕಷ್ಟಕ್ಕೀಡಾಗಿದ್ದಾರೆ ಎಂದು ಆತಂಕ ವ್ಯಕ್ತ ಪಡಿಸಿದ್ದಾರೆ. ಸರ್ಕಾರ ಆರೋಗ್ಯ ಕ್ಷೇತ್ರದಲ್ಲಿ ಎದುರಾಗಿರುವ ಬಿಕ್ಕಟ್ಟನ್ನು ನಿವಾರಿಸುವ ಬದಲು, ತನ್ನ ಆತಂರಿಕ ಬಿಕ್ಕಟ್ಟನ್ನು ಬಗೆಹರಿಸುವಲ್ಲಿ ಹೆಚ್ಚು ಸಮಯ ವ್ಯರ್ಥ ಮಾಡುತ್ತಿದೆ ಎಂದು ಅವರು ಹೇಳಿದ್ದಾರೆ. ಸರ್ಕಾರಿ ಆಸ್ಪತ್ರೆಗಳು ಸಂಪೂರ್ಣ ಭರ್ತಿಯಾಗಿವೆ.
ಜನ ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗಳತ್ತ ಧಾವಿಸುತ್ತಿದ್ದಾರೆ. ಅಲ್ಲಿ ವಿಧಿಸಲಾಗುವ ಶುಲ್ಕವನ್ನು ಭರಿಸಲಾಗದೆ ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದಿರುವ ಸಿದ್ದರಾಮಯ್ಯ, ಮುಖ್ಯಮಂತ್ರಿ ಯಡಿಯೂರಪ್ಪ, ಆರೋಗ್ಯ ಸಚಿವ ಡಾ.ಸುಧಾಕರ್ ಅವರು ಕೊರೊನಾ ಸೋಂಕಿಗೆ ಸಿಲುಕಿದ ಎಲ್ಲರಿಗೂ ಖಾಸಗಿ ಆಸ್ಪತ್ರೆಗಳಲ್ಲೂ ಉಚಿತವಾಗಿ ಚಿಕಿತ್ಸೆ ಕೊಡಿಸಲು ಕ್ರಮ ಕೈಗೊಳ್ಳಬೇಕು ಎಂದು ಅವರು ಸಲಹೆ ನೀಡಿದ್ದಾರೆ.
ಕೋವಿಡ್ನಂತಹ ತುರ್ತು ಸಂದರ್ಭದಲ್ಲೂ ಜನರ ಆರೋಗ್ಯದ ಬಗ್ಗೆ ಗಮನ ಹರಿಸದ ಬಿಜೆಪಿ ನಾಯಕರು ಉಪ ಚುನಾವಣೆಗಳ ಪ್ರಚಾರದಲ್ಲಿ ತೊಡಗಿಸಿಕೊಂಡಿದ್ದು ವಿಷಾದನೀಯ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.