ಬೆಂಗಳೂರು: ಕನ್ನಡ ನಿಘಂಟು ತಜ್ಞ, ಶತಾಯುಷಿ ಪ್ರೊ. ಜಿ. ವೆಂಕಟಸುಬ್ಬಯ್ಯ ಅವರು ನಿಧನರಾಗಿದ್ದಾರೆ.
ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. 108 ವರ್ಷದ ಪ್ರೊ. ಜಿ. ವೆಂಕಟಸುಬ್ಬಯ್ಯ ಅವರು ಚಿಕಿತ್ಸೆ ಫಲಕಾರಿಯಾಗದೆ ರಾತ್ರಿ 1.30 ರ ಸುಮಾರಿಗೆ ನಿಧನರಾಗಿದ್ದಾರೆ.
1913ರ, ಆಗಸ್ಟ್ 23ರಂದು ಮೈಸೂರಿನಲ್ಲಿ ಜನಿಸಿದ ಪ್ರೊ| ಜಿ. ವೆಂಕಟಸುಬ್ಬಯ್ಯ ಕನ್ನಡದ ಅಪ್ರತಿಮ ಭಾಷಾ ತಜ್ಞರು, ಸಂಶೋಧಕರು, ಬರಹಗಾರರು ಹಾಗೂ ಶಿಕ್ಷಕರಾಗಿ ಸೇವೆ ಸಲ್ಲಿಸಿದ್ದಾರೆ. ಪ್ರಾಚೀನ ಸಾಹಿತ್ಯ ಅಧ್ಯಯನ ಹಾಗೂ ಅನುವಾದ ಕ್ಷೇತ್ರಗಳಲ್ಲಿ ಅಪಾರ ಕೊಡುಗೆ ನೀಡಿದ್ದಾರೆ. ನಿಘಂಟು ತಜ್ಞರೆಂದೇ ಖ್ಯಾತರಾಗಿರುವ ವೆಂಕಟಸುಬ್ಬಯ್ಯ ಅವರಿಗೆ ಪದ್ಮಶ್ರೀ, ನಾಡೋಜ, ಪಂಪ, ಭಾಷಾ ಸನ್ಮಾನ್ ಪ್ರಶಸ್ತಿ ಗೌರವಗಳು ಸಿಕ್ಕಿವೆ.
ಕುಮಾರಸ್ವಾಮಿ ಕಂಬನಿ: ಫ್ರೊ. ಜಿ. ವೆಂಕಟಸುಬ್ಬಯ್ಯ ಅವರ ನಿಧನಕ್ಕೆ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ದುಖಃ ವ್ಯಕ್ತಪಡಿಸಿದ್ದಾರೆ. ಟ್ವೀಟ್ ಮಾಡಿರುವ ಅವರು, ನಾಡಿನ ಖ್ಯಾತ ಸಂಶೋಧಕ, ನಿಘಂಟು ತಜ್ಞ ಫ್ರೊ. ಜಿ. ವೆಂಕಟಸುಬ್ಬಯ್ಯ ಅವರ ನಿಧನಕ್ಕೆ ತೀವ್ರ ಕಂಬನಿ ಮಿಡಿಯುತ್ತೇನೆ. ಕನ್ನಡ ಸಾಹಿತ್ಯ ಪರಿಷತ್ತಿನ ಕನ್ನಡ-ಕನ್ನಡ ನಿಘಂಟುವಿನ ಪ್ರಧಾನ ಸಂಪಾದಕರಾಗಿ ಸೇವೆ ಸಲ್ಲಿಕೆ. ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿ, ಕನ್ನಡ ಸಾಹಿತ್ಯ ಪರಿಷತ್ತಿಗೆ ಅಖಿಲ ಕರ್ನಾಟಕ ವ್ಯಾಪ್ತಿಯನ್ನು ತಂದುಕೊಟ್ಟ ಹಿರಿಮೆ ಶ್ರೀಯುತರದು. ನಾಡು-ನುಡಿಗೆ ಸಲ್ಲಿಸಿದ ಸೇವೆ ಅನನ್ಯವಾದದ್ದು ಎಂದಿದ್ದಾರೆ.
ನಾಡು-ನುಡಿಯ ಶ್ರೇಷ್ಠ ವಿದ್ವಾಂಸರನ್ನು ರಾಜ್ಯ ಕಳೆದುಕೊಂಡಂತಾಗಿದೆ. ಅವರ ಕುಟುಂಬ ವರ್ಗದವರಿಗೆ ಅವರ ಅಗಲಿಕೆಯ ನೋವನ್ನು ಸಹಿಸುವ ಶಕ್ತಿಯನ್ನು ಭಗವಂತ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಎಚ್ ಡಿಕೆ ಕಂಬನಿ ಮಿಡಿದಿದ್ದಾರೆ.