ಬೆಂಗಳೂರು,ಏ.19-ರಾಜ್ಯದಲ್ಲಿ ಕೋವಿಡ್-19 ಸೋಂಕು ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಬಹುನಿರೀಕ್ಷಿತ ಜಿಲ್ಲಾ ಮತ್ತು ತಾಲ್ಲೂಕು ಪಂಚಾಯತ್ ಚುನಾವಣೆ ಮುಂದೂಡುವುದು ಖಚಿತವಾಗಿದೆ. ಬೆಂಗಳೂರಿನಲ್ಲಿ ಈ ಬಗ್ಗೆ ಸುಳಿವು ನೀಡಿರುವ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ರಾಜ್ ಸಚಿವ ಕೆ.ಎಸ್.ಈಶ್ವರಪ್ಪ , ಜಿಲ್ಲಾ ಮತ್ತು ತಾಲ್ಲೂಕು ಪಂಚಾಯ್ತಿ ಚುನಾವಣೆಯನ್ನು ಮುಂದೂಡುವ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ಚುನಾವಣಾ ಆಯೋಗಕ್ಕೆ ಮನವಿ ಮಾಡುತ್ತೇವೆ ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ರಾಜ್ಯದಲ್ಲಿ ಕೋವಿಡ್ ಸೋಂಕಿನ ಪ್ರಕರಣಗಳು ನಮ್ಮ ನಿರೀಕ್ಷೆಗೂ ಮೀರಿ ಹೆಚ್ಚಾಗುತ್ತಿದೆ. ಜಿಲ್ಲಾ ಹಾಗೂ ತಾಲ್ಲೂಕು ಪಂಚಾಯತ್ ಚುನಾವಣೆಯಲ್ಲಿ ಸುಮಾರು 3.5 ಕೋಟಿ ಗ್ರಾಮೀಣ ಭಾಗದ ಮತದಾರರು ಭಾಗವಹಿಸಲಿದ್ದಾರೆ. ಇದರಿಂದ ಸೋಂಕು ಒಬ್ಬರಿಂದ ಒಬ್ಬರಿಗೆ ಹಬ್ಬುವ ಸಾಧ್ಯತೆ ಇರುವುದರಿಂದ ಚುನಾವಣೆ ನಡೆಸುವುದು ಸರಿಯಲ್ಲ ಎಂಬ ಅಭಿಪ್ರಾಯ ಕೇಳಿಬಂದಿದೆ. ಹೀಗಾಗಿ ತಾತ್ಕಾಲಿಕವಾಗಿ ಮುಂದೂಡಲು ಆಯೋಗಕ್ಕೆ ಮನವಿ ಮಾಡುತ್ತೇವೆ ಎಂದು ಹೇಳಿದರು.
ಗ್ರಾಮ ಪಂಚಾಯ್ತಿ ಚುನಾವಣೆ ನಡೆಯುವ ಸಂದರ್ಭದಲ್ಲಿ ಇಷ್ಟು ಪ್ರಮಾಣದಲ್ಲಿ ಕೋವಿಡ್ ಸೋಂಕು ಹರಡುತ್ತಿರಲಿಲ್ಲ. ಈಗ ಪರಿಸ್ಥಿತಿ ಗಂಭೀರವಾಗಿರುವುದರಿಂದ ಬಹುತೇಕ ರಾಜಕೀಯ ಪಕ್ಷಗಳ ಮುಖಂಡರು ಚುನಾವಣೆ ಮುಂದೂಡುವಂತೆ ಮನವಿ ಮಾಡಿದ್ದಾರೆ.
ನಮ್ಮ ಅಕಾರಿಗಳ ಜೊತೆ ಚರ್ಚೆ ಮಾಡಿದಾಗಲೂ ಇದೇ ಅಭಿಪ್ರಾಯ ವ್ಯಕ್ತವಾಗಿದೆ. ಹೀಗಾಗಿ ಸದ್ಯಕ್ಕೆ ಚುನಾವಣೆ ಮುಂದೂಡುವಂತೆ ಸರ್ಕಾರ ಆಯೋಗಕ್ಕೆ ತನ್ನ ಅಭಿಪ್ರಾಯವನ್ನು ತಿಳಿಸಲಿದೆ ಎಂದರು.
ಜಿಲ್ಲಾ ಮತ್ತು ತಾಲ್ಲೂಕು ಪಂಚಾಯ್ತಿ ಸದಸ್ಯರ ಅಕಾರ ಅವ ಮುಗಿಯುವುದರಿಂದ ಆಡಳಿತ ಅಕಾರಿಯನ್ನು ನೇಮಕ ಮಾಡಲಾಗುವುದು. ಪರಿಸ್ಥಿತಿ ಸಹಜ ಸ್ಥಿತಿಗೆ ಬಂದ ನಂತರ ಚುನಾವಣೆ ನಡೆಸಲು ಆಯೋಗಕ್ಕೆ ಮನವಿ ಮಾಡುತ್ತೇವೆ. ಸರ್ಕಾರ ಯಾವುದೇ ಸಂದರ್ಭದಲ್ಲೂ ಚುನಾವಣೆ ನಡೆಸಲು ಸಿದ್ದವಿದೆ ಎಂದು ಈಶ್ವರಪ್ಪ ಸ್ಪಷ್ಟಪಡಿಸಿದರು.
ಪರಿಸ್ಥಿತಿ ಗಂಭೀರವಾಗಿರುವುದರಿಂದ ಚುನಾವಣೆ ನಡೆಸುವುದು ಬೇಡ ಎಂದು ಬಹುತೇಕರು ಮನವಿ ಮಾಡಿಕೊಂಡಿದ್ದಾರೆ. ಅವರ ಅಭಿಪ್ರಾಯಕ್ಕೆ ಬೆಲೆ ಕೊಡುವುದು ಸರ್ಕಾರದ ಕರ್ತವ್ಯ. ಕೆಲವು ದಿನಗಳ ಮಟ್ಟಿಗೆ ಮುಂದೂಡಿದರೆ ಯಾವ ಸಮಸ್ಯೆಯೂ ಎದುರಾಗುವುದಿಲ್ಲ ಎಂದರು.
ನಮ್ಮ ಇಲಾಖೆ ವತಿಯಿಂದ ಗ್ರಾಮ ಮಟ್ಟದಲ್ಲಿ ಕಾರ್ಯಪಡೆಯನ್ನು ಜಿಲ್ಲಾ ಪಂಚಾಯತ್ ಮತ್ತು ಗ್ರಾಮಪಂಚಾಯತ್ ಮಟ್ಟದಲ್ಲಿ ರಚಿಸಲಾಗುವುದು. ಈ ಹಿಂದೆ ಲಾಕ್ಡೌನ್ ಸಂದರ್ಭದಲ್ಲಿ ಇದನ್ನು ಜಾರಿ ಮಾಡಿದ್ದರಿಂದ ಯಶಸ್ವಿಯಾಗಿತ್ತು. ಈಗಲೂ ಇದನ್ನು ಮುಂದುವರೆಸುತ್ತೇವೆ ಎಂದು ಹೇಳಿದರು.
ಗ್ರಾಪಂ ಮಟ್ಟದಲ್ಲಿ ಸಮಿತಿಗೆ ಗ್ರಾಮ ಪಂಚಾಯ್ತಿ ಅಧ್ಯಕ್ಷರು ಮತ್ತು ಉಪಾಧ್ಯಕ್ಷರೇ ಅಧ್ಯಕ್ಷರಾಗಿರುತ್ತಾರೆ. ಇನ್ನು ಪಿಡಿಒ, ಗ್ರಾಮ ಲೆಕ್ಕಾಕಾರಿ, ನಿರೀಕ್ಷಕರು ಮತ್ತಿತರರು ಈ ಸಮಿತಿಯಲ್ಲಿ ಇರುತ್ತಾರೆ ಎಂದು ವಿವರಿಸಿದರು. 2000 ಗ್ರಾಮಪಂಚಾಯ್ತಿಗಳಲ್ಲಿ ಈವರೆಗೂ 6.5 ಲಕ್ಷ ಜನರಿಗೆ ಕೋವಿಡ್ ಲಸಿಕೆ ಹಾಕಲಾಗಿದೆ. ಒಟ್ಟು 15 ಲಕ್ಷ ಲಸಿಕೆಯನ್ನು ಹಾಕಬಹುದು ಎಂದರು.
ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಹೆಚ್ಚಿನ ಕೋವಿಡ್ ಪ್ರಕರಣಗಳು ಕಾಣಿಸಿಕೊಂಡಿರುವುದರಿಂದ ಅಲ್ಲಿನ ಸರ್ಕಾರ ಲಾಕ್ಡೌನ್ ಜಾರಿ ಮಾಡಿದೆ. ಬೆಂಗಳೂರಿನಲ್ಲಿ ಪರಿಸ್ಥಿತಿ ಆ ಮಟ್ಟಿಗೆ ಇನ್ನು ಬಂದಿಲ್ಲ. ನನ್ನ ವೈಯಕ್ತಿಕ ಅಭಿಪ್ರಾಯದಲ್ಲಿ ಹೇಳುವುದಾದರೆ ಲಾಕ್ಡೌನ್ ಜಾರಿ ಮಾಡಬೇಕಾದ ಅಗತ್ಯವಿಲ್ಲ ಎಂದು ಅಭಿಪ್ರಾಯಪಟ್ಟರು.
ನಾಲೆ, ಕಲ್ಯಾಣಿ, ಗೋಕಟ್ಟೆಗಳನ್ನು ನರೇಗಾ ಕಾರ್ಯಕ್ರಮಗಳ ಮೂಲಕ ಅಭಿವೃದ್ಧಿಪಡಿಸಲಿದ್ದೇವೆ. ಮಳೆ ನೀರನ್ನು ಭೂಮಿಯಲ್ಲಿ ಇಂಗಿಸುವ ಕೆಲಸ ಇಲಾಖೆ ವತಿಯಿಂದ ಮಾಡುತ್ತೇವೆ. ಇದಕ್ಕೆ ಟಾರ್ಗೆಟ್ ಕೂಡ ಕೊಡಲಾಗಿದೆ. ಕೆರೆ ಅಭಿವೃದ್ಧಿ ಮಾಡುವ ಹೊಣೆಗಾರಿಕೆಯನ್ನು ಗ್ರಾಮಪಂಚಾಯ್ತಿಗೆ ಕೊಡುತ್ತೇವೆ ಎಂದು ಈಶ್ವರಪ್ಪಹೇಳಿದರು.