ಬೆಂಗಳೂರು: ಕೊರೊನಾ ಸೋಂಕು ಏರಿಕೆ ಹಿನ್ನೆಲೆ ಇಂದು ದೇಶವನ್ನುದ್ದೇಶಿ ಮಾತನಾಡಿದ ಪ್ರಧಾನಿ ಮೋದಿ ಭಾಷಣದ ಕುರಿತು ಪ್ರತಿಕ್ರಿಯೆ ನೀಡಿರುವ ಮಾಜಿ ಸಿಎಂ ಸಿದ್ದರಾಮಯ್ಯ.. ಮೋದಿ ಭಾಷಣ ‘ನಿಮ್ಮ ತಲೆ ಮೇಲೆ ನಿಮ್ಮ ಕೈ’ ಎಂಬ ಸಂದೇಶ ನೀಡಿದೆ ಎಂದು ವ್ಯಂಗ್ಯವಾಡಿದ್ದಾರೆ.
ಟ್ವೀಟ್ ಮೂಲಕ ಪ್ರತಿಕ್ರಿಯೆ ನೀಡಿರುವ ಅವರು ರಾಜ್ಯದ ಆರ್ಥಿಕ ಸ್ಥಿತಿ ದಿವಾಳಿಯ ಅಂಚಿಗೆ ಬಂದು ನಿಂತಿದೆ. ಇದಕ್ಕೆ ನ್ಯಾಯಬದ್ಧವಾಗಿ ತೆರಿಗೆ ಪಾಲನ್ನು ನೀಡದಿರುವ ಕೇಂದ್ರ ಬಿಜೆಪಿ ಸರ್ಕಾರವೂ ಕಾರಣ ಎಂದು ಗುಡುಗಿದ್ದಾರೆ.
ಸಿದ್ದರಾಮಯ್ಯ ಸರಣಿ ಟ್ವೀಟ್ಗಳು..
ಇಂದು ರಾತ್ರಿ ಪ್ರಧಾನಿ ನರೇಂದ್ರ ಮೋದಿ ಅವರು ಮಾಡಿದ ಭಾಷಣ ಅತ್ಯಂತ ನಿರಾಶದಾಯಕ. ಕೊರೊನಾ ಸೋಂಕಿನಿಂದ ತತ್ತರಿಸಿಹೋಗಿರುವ ರಾಜ್ಯಗಳಿಗೆ ತುರ್ತಾಗಿ ಬೇಕಾಗಿರುವುದು ನೆರವಿನ ಹಸ್ತವೇ ಹೊರತು ಉಪದೇಶದ ಬುರುಡೆ ಮಾತಲ್ಲ.
ರಾಜ್ಯದಲ್ಲಿ ಕೊರೊನಾ ಸೋಂಕಿತರು ಆಮ್ಲಜನಕ ಇಲ್ಲದೆ, ಐಸಿಯು ಹಾಸಿಗೆಗಳಿಲ್ಲದೆ, ರೆಮಿಡಿಸಿವೆರ್ನಂತಹ ಪ್ರಾಣರಕ್ಷಕ ಔಷಧಿ ಸಿಗದೆ ಜೀವ ಕಳೆದುಕೊಳ್ಳುತ್ತಿದ್ದಾರೆ. ಈ ಸಮಸ್ಯೆಗಳಿಗೆ ಯಾವುದೇ ಪರಿಹಾರ ನೀಡದ ನರೇಂದ್ರ ಮೋದಿ ಜನತೆಗೆ ಜವಾಬ್ದಾರಿಯ ಪಾಠ ಹೇಳಿದ್ದಾರೆ. ಪ್ರಧಾನಿಗಳೇ, ಮೊದಲು ನಿಮ್ಮ ಜವಾಬ್ದಾರಿಯನ್ನು ಸರಿಯಾಗಿ ನಿರ್ವಹಿಸಿ.
ಕೊರೊನಾ ಉಲ್ಬಣವಾದ ಕಾರಣದಿಂದಾಗಿ ಲಾಕ್ಡೌನ್ ಅನಿವಾರ್ಯ ಎಂಬಂತೆ ರಾಜ್ಯ ಬಿಜೆಪಿ ಸರ್ಕಾರ ಮಾತನಾಡುತ್ತಿದೆ. ಲಾಕ್ ಡೌನ್ ಹೇರಿದರೆ ಕಷ್ಟನಷ್ಟಕ್ಕೀಡಾಗುವ ಜನತೆಗೆ ಕೇಂದ್ರ ಬಿಜೆಪಿ ಸರ್ಕಾರ ನೀಡುವ ನೆರವಿನ ಘೋಷಣೆಯನ್ನು ಜನ ನಿರೀಕ್ಷಿಸಿದ್ದರು. ಮೋದಿ ಭಾಷಣ ‘ನಿಮ್ಮ ತಲೆ ಮೇಲೆ ನಿಮ್ಮ ಕೈ’ ಎಂಬ ಸಂದೇಶ ನೀಡಿದೆ.
ಕೊರೊನಾ ಪರಿಣಾಮವನ್ನು ಸಮರ್ಥವಾಗಿ ನಿರ್ವಹಿಸಲಾಗದೆ ರಾಜ್ಯದ ಆರ್ಥಿಕ ಸ್ಥಿತಿ ದಿವಾಳಿಯ ಅಂಚಿಗೆ ಬಂದು ನಿಂತಿದೆ. ಇದಕ್ಕೆ ನ್ಯಾಯಬದ್ಧವಾಗಿ ತೆರಿಗೆ ಪಾಲನ್ನು ನೀಡದಿರುವ ಕೇಂದ್ರ ಬಿಜೆಪಿ ಸರ್ಕಾರವೂ ಕಾರಣ. ಪ್ರಧಾನಿಯವರೇ, ನೀವು ವಿಶೇಷ ಆರ್ಥಿಕ ನೆರವು ಕೊಡುವುದು ಬೇಡ, ನಮ್ಮ ನ್ಯಾಯಬದ್ಧ ಪಾಲನ್ನಷ್ಟಾದರೂ ನೀಡಿ ಪುಣ್ಯ ಕಟ್ಟಿಕೊಳ್ಳಿ.