ವಿಜಯಪುರ: ಕೋವಿಡ್ ಎರಡನೇ ಅಲೆಯ ವೇಗ ಹೆಚ್ಚಿದ್ದು, ಸೋಂಕು ನಿಯಂತ್ರಣ ವಿಷಯದಲ್ಲಿ ವಿಫಲವಾಗಿದ್ದಾರೆ ಎಂಬ ಆರೋಪದಲ್ಲಿ ವಿಜಯಪುರ ಡಿಎಚ್ಒ ಡಾ.ರಾಜಕುಮಾರ ಯರಗಲ ಅವರನ್ನು ಕಡ್ಡಾಯ ರಜೆ ಮೇಲೆ ತೆರಳುವಂತೆ ಸರ್ಕಾರ ಆದೇಶ ಹೊರಡಿಸಿದೆ.
ಈ ಕುರಿತು ಅಧಿಸೂಚನೆ ಹೊರಡಿಸಿರುವ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧೀನ ಕಾರ್ಯದರ್ಶಿ ಯ. ಶಿವಶಂಕರ ಅವರು, ತಕ್ಷಣದಿಂದಲೇ ಜಾರಿಗೆ ಬರುವಂತೆ ಹಾಗೂ ಸರ್ಕಾರದ ಮುಂದಿನ ಆದೇಶದವರೆಗೆ ಡಾ.ರಾಜಕುಮಾರ ಅವರನ್ನು ಕಡ್ಡಾಯ ರಜೆ ಮೇಲೆ ಕಳಿಸಲು ಆದೇಶದಲ್ಲಿ ತಿಳಿಸಿದ್ದಾರೆ.
ಡಾ.ರಾಜಕುಮಾರ ಅವರ ಕಡ್ಡಾಯ ರಜೆಯಿಂದ ತೆರವಾಗುವ ವಿಜಯಪುರ ಡಿಎಚ್ಒ ಹುದ್ದೆಗೆ ಈ ಹಿಂದೆ ಇದೇ ಹುದ್ದೆಯಲ್ಲಿ ಸೇವೆ ಸಲ್ಲಿಸಿರುವ ಸದ್ಯ ಕಲಬುರಗಿ ಸರ್ಕಾರಿ ಜಿಲ್ಲಾ ಆಸ್ಪತ್ರೆಯಲ್ಲಿ ಫಿಜೀಶಿಯನ್ ಆಗಿರುವ ಡಾ.ಮಹೇಂದ್ರ ಕಾಪಸೆ ಅವರಿಗೆ ಹೆಚ್ಚುವರಿ ಹೊಣೆಗಾರಿಕೆ ನೀಡುವಂತೆ ಏಪ್ರಿಲ್ 28 ರಂದು ಹೊರಡಿಸಿರುವ ಅಧಿಸೂಚನೆಯ ಆದೇಶದಲ್ಲಿ ತಿಳಿಸಲಾಗಿದೆ.
ಮೂಲಗಳ ಪ್ರಕಾರ ಶುಕ್ರವಾರ ಮಧ್ಯಾಹ್ನ 3 ಗಂಟೆಗೆ ಡಾ.ರಾಜಕುಮಾರ ಯರಗಲ ಅವರು ಡಾ.ಮಹೇಂದ್ರ ಕಾಪ್ಸೆ ಅವರಿಗೆ ಅಧಿಕಾರ ಹಸ್ತಾಂತರ ಮಾಡಲಿದ್ದಾರೆ.