ಬೀದರ್: ಬಸವ ಕಲ್ಯಾಣ ವಿಧಾನಸಭೆ ಕ್ಷೇತ್ರದಲ್ಲಿ ಬಿಜೆಪಿಯ ಪಕ್ಷದ ಅಭ್ಯರ್ಥಿ ಶರಣು ಸಲಗರ ಭರ್ಜರಿ ಗೆಲುವು ಸಾಧಿಸಿದ್ದಾರೆ. ಬಿಜೆಪಿ ಅಭ್ಯರ್ಥಿ ಸಲಗಾರ್ ಅವರು ಕಾಂಗ್ರೆಸ್ ಅಭ್ಯರ್ಥಿ ವಿರುದ್ದ 20,448 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.
ಅಂತಿಮ ಸುತ್ತಿನ ಎಣಿಕಯ ಬಳಿಕ ಶರಣು ಸಲಗರ್ 70556 ಮತಗಳನ್ನು ಪಡೆದಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಮಾಲ ನಾರಾಯಣ ರಾವ್ ಅವರು 50108 ಮತಗಳನ್ನಷ್ಟೇ ಪಡೆದಿದ್ದಾರೆ. ಜೆಡಿಎಸ್ ನಿಂದ ಕಣಕ್ಕಿಳಿಸಿದ್ದ ಸಯ್ಯದ್ ಖಾದ್ರಿ ಅವರು 11390 ಮತಗಳನ್ನಷ್ಟೇ ಪಡೆದಿದ್ದಾರೆ.
ಬಿಜೆಪಿಗೆ ಸೆಡ್ಡು ಹೊಡೆದು ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಮಾಜಿ ಶಾಸಕ ಮಲ್ಲಿಕಾರ್ಜುನ ಖೂಬಾಗೆ ಕೇವಲ 9390 ಮತಗಳು ಲಭಿಸಿವೆ. ಖೂಬಾ ಸ್ಪರ್ಧೆಯಿಂದ ಶರಣು ಸಲಗರಗೆ ಹಿನ್ನಡೆಯಾಗಬಹುದು ಎಂಬ ಲೆಕ್ಕಾಚಾರ ತಲೆಗೆಳಗಾಗಿದೆ.
ಭರ್ಜರಿ ಜಯದೊಂದಿಗೆ ಶರಣು ಸಲಗರ ಮೊದಲ ಬಾರಿಗೆ ವಿಧಾನಸಭೆಗೆ ಪ್ರವೇಶ ಪಡೆದಿದ್ದಾರೆ. ಕಾಂಗ್ರೆಸ್ ಮತ್ತೊಂದು ಕ್ಷೇತ್ರವನ್ನು ಕಳೆದುಕೊಂಡಿದೆ.
ಬೀದರ್ ಸಂಸದ ಭಗವಂತ ಖೂಬಾ ಮತ ಎಣಿಕೆ ಕೇಂದ್ರಕ್ಕೆ ಬರುತ್ತಿದಂತೆ ಅವರ ಕಾಲಿಗೆ ಸಾಷ್ಟಾಂಗ ನಮಸ್ಕಾರ ಹಾಕಿದ ಶರಣು ಸಲಗರ ಆಶೀರ್ವಾದ ಪಡೆದರು.