Breaking News
Home / ಜಿಲ್ಲೆ / ಬೆಳಗಾವಿ / ಜಿಲ್ಲಾ ಉಸ್ತುವಾರಿ ಸಚಿವರಾದ ಗೋವಿಂದ ಕಾರಜೋಳ ಅವರು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ

ಜಿಲ್ಲಾ ಉಸ್ತುವಾರಿ ಸಚಿವರಾದ ಗೋವಿಂದ ಕಾರಜೋಳ ಅವರು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ

Spread the love

ಬೆಳಗಾವಿ : ಜಿಲ್ಲೆಯ ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಗಳಲ್ಲಿ ಕೋವಿಡ್ ಸೋಂಕಿತರ ಚಿಕಿತ್ಸೆಗೆ ಲಭ್ಯವಿರುವ ಬೆಡ್ ಗಳ ಮಾಹಿತಿಯನ್ನು ಪ್ರತಿದಿನ ವೆಬ್‌ಸೈಟ್‌ ಮೂಲಕ ಜನರಿಗೆ ನೀಡಬೇಕು; ಆಕ್ಸಿಜನ್, ರೆಮಿಡಿಸಿವಿರ್ ಮತ್ತಿತರ ಔಷಧೋಪಕರಣಗಳ ಕೊರತೆ ಉಂಟಾಗದಂತೆ ಎಲ್ಲಾ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಉಪ ಮುಖ್ಯಮಂತ್ರಿ ಮಂತ್ರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಗೋವಿಂದ ಕಾರಜೋಳ ಅವರು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.
ಜಿಲ್ಲೆಯಲ್ಲಿ ಕೋವಿಡ್ ನಿಯಂತ್ರಣ ಮತ್ತು ಅಗತ್ಯ ಚಿಕಿತ್ಸೆ ಒದಗಿಸುವುದಕ್ಕೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿಗಳು ಸೇರಿದಂತೆ ಎಲ್ಲ ಹಿರಿಯ ಅಧಿಕಾರಿಗಳ ಜತೆ ಮಂಗಳವಾರ (ಮೇ 4) ಝೂಮ್ ಸಭೆಯ ಮೂಲಕ ಅವರು ಚರ್ಚೆ ನಡೆಸಿದರು.
ಇಂತಹ ಸಂಕಷ್ಟದ ಪರಿಸ್ಥಿತಿಯಲ್ಲಿ ಜನರ ಆರೋಗ್ಯದ ಸಮಸ್ಯೆಗಳಿಗೆ ಸ್ಪಂದಿಸಲು ಎಲ್ಲ ಅಧಿಕಾರಿಗಳು ಸಮನ್ವಯತೆಯೊಂದಿಗೆ 24 ಗಂಟೆಯೂ ಕೆಲಸ ಮಾಡಲು ಮುಂದಾಗಬೇಕು.
ಕೋವಿಡ್ ಸೋಂಕಿತರ ಚಿಕಿತ್ಸೆಯಲ್ಲಿ ಆಕ್ಸಿಜನ್ ಕೊರತೆಯ ಬಗ್ಗೆ ಸಾಕಷ್ಟು ವರದಿಗಳು ಬರುತ್ತಿವೆ. ಆದ್ದರಿಂದ ಜಿಲ್ಲೆಯಲ್ಲಿ ಲಭ್ಯವಿರುವ ಆಕ್ಸಿಜನ್ ದಾಸ್ತಾನು, ದೈನಂದಿನ ಬಳಕೆ ಹಾಗೂ ತುರ್ತು ಸಂದರ್ಭದಲ್ಲಿ ಪೂರೈಕೆಯ ಮೇಲೆ ನಿರಂತರ ನಿಗಾ ವಹಿಸಬೇಕು ಎಂದು ಸಚಿವ ಗೋವಿಂದ ಕಾರಜೋಳ ನಿರ್ದೇಶನ ನೀಡಿದರು.
ಅದೇ ರೀತಿ ರೆಮಿಡಿಸಿವಿರ್ ಲಭ್ಯತೆ ಬಗ್ಗೆ ನಿಗಾ ವಹಿಸುವುದರ ಜತೆಗೆ ಅದು ಕಾಳಸಂತೆಯಲ್ಲಿ ಮಾರಾಟವಾಗದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು.
ರೆಮಿಡಿಸಿವಿರ್ ಅನ್ನು ಹೆಚ್ಚಿನ ದರಕ್ಕೆ ಮಾರಾಟ ಮಾಡುವ ಆಸ್ಪತ್ರೆಗಳಿಗೆ ನೋಟಿಸ್ ನೀಡಬೇಕು. ಆದರೆ ಸೇವಾಶುಲ್ಕ ಮಾತ್ರ ಪಡೆಯಲು ಅವಕಾಶವನ್ನು ಕಲ್ಪಿಸಬೇಕು ಎಂದು ಹೇಳಿದರು.
ಜಿಲ್ಲೆಯಲ್ಲಿ ಲಭ್ಯವಿರುವ ವೆಂಟಿಲೇಟರ್ ಸೌಲಭ್ಯ ಸಮರ್ಪಕ ಬಳಕೆಗೆ‌ ಅಗತ್ಯವಿರುವ ತಂತ್ರಜ್ಞರನ್ನು ನೇಮಿಸಿಕೊಳ್ಳಬೇಕು.
ಅಕ್ಕಪಕ್ಕದ ಜಿಲ್ಲೆಗಳ ಅಧಿಕಾರಿಗಳ ಜತೆ ಸಮನ್ವಯ ಸಾಧಿಸಿಕೊಂಡು ಆಕ್ಸಿಜನ್ ಮತ್ತಿತರ ಸೌಲಭ್ಯಗಳನ್ನು ಸಂದರ್ಭಕ್ಕೆ ತಕ್ಕಂತೆ ಪರಸ್ಪರ ವಿನಿಮಯ ಮಾಡಿಕೊಳ್ಳಬೇಕು ಎಂದು ತಿಳಿಸಿದರು.

ವಲಸೆ ಕಾರ್ಮಿಕರಿಗೆ ಉದ್ಯೋಗ ನೀಡಿ:

ಕೋವಿಡ್ ಸೋಂಕು ಹರಡುತ್ತಿರುವುದರಿಂದ ವಲಸೆ ಕಾರ್ಮಿಕರು ಜಿಲ್ಲೆಗೆ ಹಿಂದಿರುಗುತ್ತಿದ್ದಾರೆ. ಹೀಗೆ ಹುಟ್ಟೂರಿಗೆ ಬರುವ ಕಾರ್ಮಿಕರಿಗೆ ಉದ್ಯೋಗ ಖಾತ್ರಿ ಯೋಜನೆಯಡಿ ಕಡ್ಡಾಯವಾಗಿ ಉದ್ಯೋಗ ಕಲ್ಪಿಸಬೇಕು ಎಂದು ಜಿಲ್ಲಾ ಪಂಚಾಯತ ಅಧಿಕಾರಿಗಳಿಗೆ ಸಚಿವರು ಸೂಚನೆ ನೀಡಿದರು.
ಮಳೆನೀರು ಕೊಯ್ಲು, ಸಿಡಿ, ಬದು ನಿರ್ಮಾಣ ಮೂಲಕ ಉದ್ಯೋಗ ಕಲ್ಪಿಸಬೇಕು. ಒಂದು ವೇಳೆ ಸರಕಾರಿ ಜಾಗೆಯಲ್ಲಿ ಕೆಲಸ ಸೃಷ್ಟಿಸುವುದು ಸಾಧ್ಯವಿಲ್ಲದಿದ್ದರೆ ಅವರ ಜಮೀನಿನಲ್ಲಿ ಉದ್ಯೋಗ ಸೃಷ್ಟಿಸಲು ಸಲಹೆ ನೀಡಿದರು.

ಕಡ್ಡಾಯವಾಗಿ ಲಸಿಕೆ ನೀಡಲು ನಿರ್ದೇಶನ:

ಮಾಧ್ಯಮ‌ ಪ್ರತಿನಿಧಿಗಳು, ಮನೆ ಮನೆಗೆ ಸಿಲಿಂಡರ್ ಪೂರೈಸುವವರಿಗೆ, ಕ್ಷೌರಿಕರು, ಅಗಸ ವೃತ್ತಿಯಲ್ಲಿ ತೊಡಗಿರುವವರಿಗೆ ಕೋವಿಡ್ ಲಸಿಕೆಯನ್ನು ಆದ್ಯತೆಯ ಮೇರೆಗೆ ನೀಡಬೇಕು ಎಂದು ಸಚಿವ ಗೋವಿಂದ ಕಾರಜೋಳ ಜಿಲ್ಲಾಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಬೆಳಗಾವಿ ದೊಡ್ಡ ಜಿಲ್ಲೆಯಾಗಿರುವುದರಿಂದ ಬೆಡ್, ಆಕ್ಸಿಜನ್, ರೆಮಿಡಿಸಿವಿರ್ ಸೇರಿದಂತೆ ಯಾವುದೇ ರೀತಿಯ ಸಮಸ್ಯೆಗಳು ಉಂಟಾಗದಂತೆ‌ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು.
ಜಿಲ್ಲಾಧಿಕಾರಿಗಳ ಬಳಿ ಸಾಕಷ್ಟು ಅನುದಾನ ಲಭ್ಯವಿದೆ. ಒಂದು ವೇಳೆ ಹಣಕಾಸು, ಔಷಧೋಪಕರಣಗಳ ಖರೀದಿ ಸೇರಿದಂತೆ ಸರ್ಕಾರದಿಂದ ಯಾವುದೇ ರೀತಿಯ ನೆರವು  ಅಗತ್ಯವಿದ್ದರೆ ತಕ್ಷಣವೇ ತಮ್ಮ ಗಮನಕ್ಕೆ ತರಬೇಕು ಎಂದು‌ ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಅವರು ಜಿಲ್ಲಾಧಿಕಾರಿಗಳಿಗೆ ತಿಳಿಸಿದರು.
ಜಿಲ್ಲೆಯಲ್ಲಿ ‌ಕೋವಿಡ್ ನಿಯಂತ್ರಣ ಹಾಗೂ ಚಿಕಿತ್ಸಾ ಸೌಲಭ್ಯಗಳ‌ ಕುರಿತು ಮಾಹಿತಿ ನೀಡಿದ ಜಿಲ್ಲಾಧಿಕಾರಿ ಡಾ.ಕೆ.ಹರೀಶ್ ಕುಮಾರ್ ಅವರು, ಆಕ್ಸಿಜನ್ ಕೊರತೆ ಉಂಟಾಗದಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು‌ ತಿಳಿಸಿದರು.
ಸಚಿವರ ನಿರ್ದೇಶನದಂತೆ ಜಿಲ್ಲೆಯ ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಗಳಲ್ಲಿ ಲಭ್ಯವಿರುವ ಬೆಡ್ ಗಳು ಹಾಗೂ ಚಿಕಿತ್ಸಾ ಸೌಲಭ್ಯಗಳ ಮಾಹಿತಿಯನ್ನು ವೆಬ್ ಸೈಟ್ ಮೂಲಕ ಸಾರ್ವಜನಿಕರಿಗೆ ನೀಡಲು ತಕ್ಷಣವೇ ಕ್ರಮ ಕೈಗೊಳ್ಳಲಾಗುತ್ತಿದೆ ಎಂದರು.
ಜಿಲ್ಲೆಯಲ್ಲಿ ಕೋವಿಡ್ ಸೋಂಕಿತರ ಚಿಕಿತ್ಸೆಗೆ ಸುಮಾರು 4 ಸಾವಿರ ಬೆಡ್ ಗಳು ಲಭ್ಯವಾಗಿರುತ್ತವೆ. ಇದರಲ್ಲಿ 1909 ಆಕ್ಸಿಜನ್ ವ್ಯವಸ್ಥೆ ಕಲ್ಪಿಸಬಹುದಾದ ಬೆಡ್ ಗಳು; 179 ಐಸಿಯು ಬೆಡ್; 137 ಐಸಿಯು ಜತೆಗೆ ವೆಂಟಿಲೇಟರ್ ಸೌಲಭ್ಯ ಹೊಂದಿರುವ ಬೆಡ್ ಗಳಿವೆ.
ಇದಲ್ಲದೇ 77 ಹೈಫ್ಲೋ ಆಕ್ಸಿಜನ್ ಹಾಗೂ 543 ಹೈಫ್ಲೋ ನೇಸಲ್ ಆಕ್ಸಿಜನ್ ಸೌಲಭ್ಯ ಹೊಂದಿರುವ ಬೆಡ್ ಗಳಿವೆ ಎಂದು ಜಿಲ್ಲಾಧಿಕಾರಿಗಳು ವಿವರಿಸಿದರು.
ಇದರಲ್ಲಿ ಒಂದು ಸಾವಿರ ಬೆಡ್ ಗಳಿಗೆ ನಿರಂತರವಾಗಿ 24 ಗಂಟೆಗಳ ಕಾಲ ಆಕ್ಸಿಜನ್ ಒದಗಿಸುವ ಸಾಮರ್ಥ್ಯವಿದೆ ಎಂದು ತಿಳಿಸಿದರು.
ಲಸಿಕಾಕರಣದಲ್ಲಿ ಜಿಲ್ಲೆಯು ಮುಂಚೂಣಿಯಲ್ಲಿದ್ದು, ಶೇ.40 ರಷ್ಟು ಲಸಿಕಾಕರಣವಾಗಿದೆ. 32 ಸಾವಿರ ಲಸಿಕೆಗಳು ಜಿಲ್ಲೆಗೆ ಸದ್ಯದಲ್ಲಿಯೇ ಪೂರೈಕೆಯಾಗಲಿವೆ.
ಪ್ರತಿ ತಾಲ್ಲೂಕು ಮಟ್ಟದಲ್ಲಿ ಕೋವಿಡ್ ಕೇರ್ ಸೆಂಟರ್ ಸ್ಥಾಪಿಸಲಾಗಿದ್ದು, ಅಗತ್ಯಬಿದ್ದರೆ ಹೋಬಳಿ ಮಟ್ಟದಲ್ಲಿ ಕೂಡ ಇಂತಹ ಕೇಂದ್ರಗಳನ್ನು ಆರಂಭಿಸಲಾಗುವುದು ಎಂದು ಜಿಲ್ಲಾಧಿಕಾರಿ ಡಾ.ಕೆ.ಹರೀಶ್ ಕುಮಾರ್ ತಿಳಿಸಿದರು.
ಇದೇ ಸಂದರ್ಭದಲ್ಲಿ ಮಾತನಾಡಿದ ಅಪರ ಜಿಲ್ಲಾಧಿಕಾರಿ ಯೋಗೇಶ್ವರ್ ಅವರು, ಜಿಲ್ಲೆಯಲ್ಲಿ ರೋಗಿಗಳ ಸಂಖ್ಯೆಯನ್ನು ಆಧರಿಸಿ 47 ಆಸ್ಪತ್ರೆಗಳಿಗೆ ರೆಮಿಡಿಸಿವಿರ್ ಒದಗಿಸಲಾಗುತ್ತಿದೆ. ಸದ್ಯಕ್ಕೆ ಆಕ್ಸಿಜನ್ ಹಾಗೂ ರೆಮಿಡಿಸಿವಿರ್ ಕೊರತೆಯಿಲ್ಲ ಎಂದು ಸ್ಪಷ್ಟಪಡಿಸಿದರು.
ಬೆಳಗಾವಿ ನಗರ ಪೊಲೀಸ್ ಆಯುಕ್ತರಾದ ಡಾ.ಕೆ.ತ್ಯಾಗರಾಜನ್ ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ಅವರು, ತುರ್ತು ವೈದ್ಯಕೀಯ ಹಾಗೂ ಅಗತ್ಯ ಸೇವೆಗಳಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಕ್ರಮ ಕೈಗೊಳ್ಳಲಾಗಿದೆ ಎಂದು ಸಚಿವರಿಗೆ ವಿವರಿಸಿದರು.
ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ದರ್ಶನ್ ಎಚ್.ವಿ. ಸೇರಿದಂತೆ ಆರೋಗ್ಯ, ಕಂದಾಯ ಹಾಗೂ ತುರ್ತುಸೇವೆಗಳಿಗೆ ಸಂಬಂಧಿಸಿದ ಇಲಾಖೆಯ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.
****
 ಕೋವಿಡ್-೧೯ ನಿಯಂತ್ರಣ ಹಾಗೂ ಚಿಕಿತ್ಸೆಗೆ ಸಂಬಂಧಿಸಿದಂತೆ ಉಪ ಮುಖ್ಯಮಂತ್ರಿಗಳು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಗೋವಿಂದ ಕಾರಜೋಳ ಅವರು ಈ ಕೆಳಕಂಡಂತೆ ಕ್ರಮಗಳನ್ನು ಕೈಗೊಳ್ಳಲು ಸೂಚನೆ ನೀಡಿದರು.
ಸರ್ಕಾರದ ಮೊದಲ ಆದ್ಯತೆ ಕೋವಿಡ್ 19 ನಿಯಂತ್ರಣವಾಗಿದ್ದು, ಜಿಲ್ಲಾಡಳಿತವು ಜಿಲ್ಲೆಯಲ್ಲಿ  ಸರ್ಕಾರದ ಮಾರ್ಗಸೂಚಿಗಳು/ನಿರ್ದೇಶನಗಳನ್ನು ಕಟ್ಟುನಿಟ್ಟಾಗಿ ಅನುಷ್ಠಾನೊಳಿಸುವ ಮೂಲಕ ಕೋವಿಡ್ 19 ನಿಯಂತ್ರಣಕ್ಕೆ ಮತ್ತಷ್ಟು  ಸಮರೋಪಾದಿಯಲ್ಲಿ ಕಾರ್ಯನಿರ್ವಹಿಸಬೇಕು. ಈ ಕೆಳಕಂಡ ನಿರ್ದೇಶನಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲು ಸೂಚಿಸಿದೆ.
1) ಗುಳೆಹೋದ ಜನ ಮರಳಿ ತಮ್ಮ ತಮ್ಮ ಊರುಗಳಿಗೆ ಹಿಂದಿರುಗುತ್ತಿದ್ದು, ಅವರಿಗೆ ಪ್ರತಿಗ್ರಾಮದಲ್ಲಿ ಮಹಾತ್ಮಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯಡಿ ಅವಶ್ಯಕತೆ ಇದ್ದವರೆಲ್ಲರಿಗೂ ಕಡ್ಡಾಯವಾಗಿ  ಉದ್ಯೋಗ  ಕೊಡುವಂತೆ ಕ್ರಮಕೈಗೊಳ್ಳಲು ಸೂಚಿಸಿದೆ.
2) ಕೋವಿಡ್ ಹೆಚ್ಚಾಗಿ ಹರಡುತ್ತಿರುವ  ಗ್ರಾಮಗಳಲ್ಲಿ  ಯಾವ ಕಾರಣಕ್ಕಾಗಿ ಹರಡುತ್ತಿದೆ ಎನ್ನುವುದನ್ನು  ಪತ್ತೆಹಚ್ಚಲು ಗ್ರಾಮಗಳಲ್ಲಿ ಕಾರ್ಯಪಡೆಗಳನ್ನು ಕಡ್ಡಾಯವಾಗಿ ರಚನೆ ಮಾಡಿ ನಿಯಂತ್ರಿಸಲು ಕ್ರಮಜರುಗಿಸಬೇಕು.
3) ತರಕಾರಿ ಮಾರುಕಟ್ಟೆಗಳಲ್ಲಿ ಜನಜಂಗುಳಿ ಹೆಚ್ಚಾಗಿದ್ದು, ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳುತ್ತಿಲ್ಲ. ಎಲ್ಲಾ ವಾರ್ಡುಗಳಲ್ಲಿ ಸುಲಲಿತವಾಗಿ  ತರಕಾರಿ ದೊರಕುವಂತೆ ವ್ಯವಸ್ಥೆ ಕಲ್ಪಿಸಬೇಕು.
4) ವಿನಾಕಾರಣ ಜನರನ್ನು ಭಯಭೀತರನ್ನಾಗಿ ಮಾಡಲು ಕೆಲವರು ಸುಳ್ಳುಸುದ್ದಿಗಳನ್ನು/ವದಂತಿಗಳನ್ನು ಹಬ್ಬಿಸುತ್ತಿದ್ದಾರೆ. ಅಂತಹವರ ಬಗ್ಗೆ ನಿಗಾವಹಿಸಬೇಕು.
5) ರೆಮಿಡಿಸಿವಿರ್ ಚುಚ್ಚುಮದ್ದು ಅನ್ನು  ಅವಶ್ಯಕತೆಗನುಗುಣವಾಗಿ ಸರ್ಕಾರ ಪೂರೈಕೆ ಮಾಡುತ್ತಿದೆ. ಕೆಲವರು ಕೃತಕ ಅಭಾವ ಸೃಷ್ಠಿಮಾಡಲು ಪ್ರಯತ್ನಮಾಡುತ್ತಿದ್ದಾರೆ. ಕಾಳಸಂತೆಯಲ್ಲಿ ಈ ಚುಚ್ಚುಮದ್ದನ್ನು  ಮಾರಾಟಮಾಡಲು ಪ್ರಯತ್ನಮಾಡುತ್ತಿದ್ದಾರೆ. ಅಂತಹವರ ಬಗ್ಗೆ ಹೆಚ್ಚು ತೀವ್ರ ನಿಗಾವಹಿಸಲು ಪೊಲೀಸರು ಎಚ್ಚರವಹಿಸಿ, ಅವರ ವಿರುದ್ಧ ಕ್ರಮಕೈಗೊಳ್ಳಬೇಕು.
6) ಎಲ್ಲಾ ತಾಲೂಕುಗಳಲ್ಲಿ ಕೋವಿಡ್ ಕೇರ್ ಸೆಂಟರ್ ಪ್ರಾರಂಭಿಸಿ, ಸಕ್ರಿಯವಾಗಿ ಕಾರ್ಯನಿರ್ವಹಿಸುವಂತೆ ಕ್ರಮಕೈಗೊಂಡು ವರದಿಯನ್ನು ಸರ್ಕಾರಕ್ಕೆ ಸಲ್ಲಿಸುವುದು.
7) ಆಸ್ಪತ್ರೆಗಳಲ್ಲಿ ಬೆಡ್ (ಹಾಸಿಗೆ) ಲಭ್ಯತೆ ಮಾಹಿತಿಯನ್ನು ಸಾರ್ವಜನಿಕರಿಗೆ ಪಾರದರ್ಶಕವಾಗಿ  ನೀಡಬೇಕು.
8) ಜಿಲ್ಲೆಯಲ್ಲಿ ಲಸಿಕೆ ಹಾಕಿಸಿಕೊಳ್ಳುವವರ ಮಾಹಿತಿ ಸಂಗ್ರಹಿಸುವುದು.
9) ಆಕ್ಸಿಜನ್ ಲಭ್ಯತೆಯ ಮಾಹಿತಿ ಸಂಗ್ರಹಿಸುವುದು ಮತ್ತು ಕೊರತೆಯಾಗದಂತೆ ಎಚ್ಚರ ವಹಿಸುವುದು.
10) ಕಡ್ಡಾಯವಾಗಿ ವಲಸಿಗರ ಮಾಹಿತಿ ಸಂಗ್ರಹಿಸುವುದು.
11) ಅವಶ್ಯವಿರುವ ಎಲ್ಲಾ ಇಲಾಖೆಗಳ ಅಧಿಕಾರಿಗಳು ಹಾಗೂ ಸಿಬ್ಬಂದಿವರ್ಗದವರು ಕೋವಿಡ್ 19 ನಿಯಂತ್ರಣ ಕರ್ತವ್ಯಕ್ಕೆ ನಿಯೋಜಿಸಿ, ಸಕ್ರಿಯವಾಗಿ ಕಾರ್ಯನಿರ್ವಹಿಸುವಂತೆ ಕ್ರಮಕೈಗೊಳ್ಳಬೇಕು.
12) ಕೋವಿಡ್ ಸೊಂಕಿತ ರೋಗಿಗಳಿಗೆ ಹಾಸಿಗೆ ಕೊರತೆಯಾಗದಂತೆ ವಸತಿ ಶಾಲೆ/ವಸತಿ ನಿಲಯಗಳನ್ನು ಸಜ್ಜುಗೊಳಿಸಿ ಆಸ್ಪತ್ರೆಯ ಅನೆಕ್ಸ್ ಕಟ್ಟಡವೆಂದು ಗುರುತಿಸಿ. ಸೌಲಭ್ಯ ಕಲ್ಪಿಸಬೇಕು.
13) ಸಣ್ಣ-ಸಣ್ಣ ಮನೆ ಇದ್ದವರಿಗೆ ಕ್ವಾರಂಟೈನ್‍ನಲ್ಲಿಡುವ ಪರಿಸ್ಥಿತಿ ಎದುರಾದರೆ  ವಸತಿ ನಿಲಯ/ವಸತಿ ಶಾಲೆಗಳಲ್ಲಿ ಕ್ವಾರಂಟೈನ್‍ನಲ್ಲಿಟ್ಟು ಆರೈಕೆ ಮಾಡಬೇಕು.
14) ಹೋಬಳಿ ಮಟ್ಟದಲ್ಲಿ ಸಾರ್ವಜನಿಕರ ಸಲಹಾ ಸಮಿತಿ ರಚಿಸಿ, ಸರ್ಕಾರದ ಮಾರ್ಗಸೂಚಿಗಳ ಅನುಷ್ಠಾನದ ಬಗ್ಗೆ ಪಾರದರ್ಶಕತೆ ಇರುವಂತೆ ನೋಡಿಕೊಳ್ಳಲು ಕ್ರಮಕೈಗೊಳ್ಳಬೇಕು.

Spread the love

About Laxminews 24x7

Check Also

ಇಂದು, ನಾಳೆ ಬೆಂಗಳೂರಿನಲ್ಲಿ ಅಮಿತ್‌ ಶಾ, ಯೋಗಿ ರೋಡ್‌ ಶೋ

Spread the loveಬೆಂಗಳೂರು: ಮೊದಲನೇ ಹಂತದ ಚುನಾವಣೆಯ ಬಹಿರಂಗ ಪ್ರಚಾರ ಅಂತ್ಯಕ್ಕೆ ದಿನಗಣನೆ ಪ್ರಾರಂಭವಾಗಿದ್ದು ಕೇಂದ್ರ ಗೃಹ ಸಚಿವ ಅಮಿತ್‌ ಶಾ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ