ಕೊಲ್ಕತ್ತಾ : ತೃಣಮೂಲ ಕಾಂಗ್ರೆಸ್ ಅಧ್ಯಕ್ಷೆ ಮಮತಾ ಬ್ಯಾನರ್ಜಿ ಅವರು ಪಶ್ಚಿಮ ಬಂಗಾಳದ ಮುಖ್ಯಮಂತ್ರಿಯಾಗಿ ಇಂದು (ಬುಧವಾರ) ಕೋಲ್ಕತ್ತಾದ ರಾಜ ಭವನದಲ್ಲಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ರಾಜ್ಯದಲ್ಲಿ ಕೋವಿಡ್ -19 ಸೋಂಕು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಕೋವಿಡ್ ನಿಯಮಾವಳಿಗಳ ನಿರ್ಬಂಧಗಳನ್ನು ಗಮನದಲ್ಲಿಟ್ಟುಕೊಂಡು ಸರಳವಾಗಿ ಪ್ರಮಾಣವಚನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
2021ರ ವಿಧಾನ ಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಸಾಧಿಸುವ ಮೂಲಕ ದೀದಿ ಮೂರನೇ ಬಾರಿಗೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸುತ್ತಿದ್ದಾರೆ.
ಸೋಮವಾರ ನಡೆದ ಸಭೆಯಲ್ಲಿ ಮಮತಾ ಅವರನ್ನು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಶಾಸಕಾಂಗ ಪಕ್ಷದ ನಾಯಕಿಯನ್ನಾಗಿ ಆಯ್ಕೆ ಮಾಡಲಾಗಿದೆ. ಮೇ 6 ರಂದು ನೂತನ ಶಾಸಕರ ಪ್ರಮಾಣವಚನ ಕೂಡ ನಿಗದಿಯಾಗಿದೆ. ನಿರ್ಗಮಿತ ವಿಧಾನ ಸಭಾಧ್ಯಕ್ಷ ಬಿಮನ್ ಬ್ಯಾನರ್ಜಿ ಅವರನ್ನು ಹಂಗಾಮಿ ಸ್ಪೀಕರ್ ಸ್ಥಾನಕ್ಕೆ ಸೂಚಿಸಲು ಕೂಡ ಸಭೆ ನಿರ್ಧರಿಸಿತು ಎಂದು ಚಟರ್ಜಿ ಹೇಳಿದ್ದಾರೆ.
ರಾಜಭವನದಲ್ಲಿ ನಡೆಯುತ್ತಿರುವ ಪ್ರಮಾಣ ವಚನ ಕಾರ್ಯಕ್ರಮದಲ್ಲಿ, ತೃಣಮೂಲ ಕಾಂಗ್ರೆಸ್ ಸಂಸದ ಅಭಿಷೇಕ್ ಬ್ಯಾನರ್ಜಿ, ಪ್ರಶಾಂತ್ ಕಿಶೋರ್ ಮತ್ತು ಪಕ್ಷದ ಮುಖಂಡ ಫಿರ್ಹಾದ್ ಹಕೀಮ್ ಭಾಗಿಯಾಗಲಿದ್ದಾರೆ. ಇನ್ನು ಕಾರ್ಯಕ್ರಮವನ್ನು ಬೆಳಿಗ್ಗೆ 10.45 ರ ಸುಮಾರಿಗೆ ಹಮ್ಮಿಕೊಳ್ಳಲಾಗಿದೆ.