ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಶುಕ್ರವಾರ ರಾತ್ರಿ 9 ಗಂಟೆಯಿಂದ ಸೋಮವಾರ ಬೆಳಿಗ್ಗೆ 6 ಗಂಟೆಯವರೆಗೆ ವಾರಾಂತ್ಯ ಕರ್ಫ್ಯೂ ಜಾರಿಗೊಳಿಸಿ ಜಿಲ್ಲಾಧಿಕಾರಿ ಡಾ.ಕೆ.ವಿ. ರಾಜೇಂದ್ರ ಆದೇಶಿಸಿದ್ದಾರೆ.
ಔಷಧಿ ಅಂಗಡಿಗಳು ಮತ್ತು ಆಸ್ಪತ್ರೆ ಹೊರತುಪಡಿಸಿ ಶುಕ್ರವಾರ ರಾತ್ರಿ 9 ರಿಂದ ಸೋಮವಾರ ಬೆಳಿಗ್ಗೆ 6 ರವರೆಗೆ ಎಲ್ಲ ರೀತಿಯ ಚಟುವಟಿಕೆಗಳನ್ನು ನಿರ್ಬಂಧಿಸಲಾಗಿದೆ. ಸಾರ್ವಜನಿಕರು ಈ ಸೇವೆಗಳನ್ನು ಹತ್ತಿರದ ಅಂಗಡಿಗಳಿಂದ ಮಾತ್ರ ಪಡೆಯಬೇಕು.
ತುರ್ತು, ಅಗತ್ಯ ಸೇವೆಗಳು, ನಿರಂತರ ಕಾರ್ಯಾಚರಣೆ ಅಗತ್ಯವಿರುವ ಕೈಗಾರಿಕೆಗಳು, ಕಂಪನಿಗಳು, ಸಂಸ್ಥೆಗಳು ಮಾತ್ರವೇ ಕಾರ್ಯನಿರ್ವಹಿಸಲು ಅನುಮತಿ ನೀಡಲಾಗಿದೆ. ಯಾವುದೇ ನಿರ್ಮಾಣ ಚಟುವಟಿಕೆಗಳಿಗೆ ಅವಕಾಶ ಇಲ್ಲ. ನಿರ್ಮಾಣ ಸ್ಥಳದಲ್ಲಿಯೇ ಕಾರ್ಮಿಕರು ಲಭ್ಯವಿದ್ದಲ್ಲಿ, ಅಂತಹ ಕಾಮಗಾರಿ ನಡೆಸಬಹುದು.
ರೋಗಿಗಳು ಮತ್ತು ಅವರ ಆರೈಕೆದಾರರು, ವೈದ್ಯಕೀಯ ತುರ್ತು ಸಂದರ್ಭದಲ್ಲಿ ಜನರಿಗೆ ಕನಿಷ್ಠ ಪುರಾವೆಗಳೊಂದಿಗೆ ಸಂಚರಿಸಲು ಅನುಮತಿ ನೀಡಲಾಗಿದೆ. ಮೇ 8 ಮತ್ತು 9 ರಂದು ನಿಗದಿಯಾಗಿರುವ ಮದುವೆ ಕಾರ್ಯಕ್ರಮಗಳನ್ನು ಮಾರ್ಗಸೂಚಿಯಂತೆ ನಡೆಸಲು ಅನುಮತಿ ನೀಡಲಾಗಿದೆ.