ನವದೆಹಲಿ:ಕೋವಿಡ್ ಸೋಂಕಿನಿಂದ ದುಡಿಯುತ್ತಿದ್ದ ಕುಟುಂಬದ ವ್ಯಕ್ತಿಯನ್ನು ಕಳೆದುಕೊಂಡಿದ್ದ ಕುಟುಂಬಗಳಿಗೆ ಆರ್ಥಿಕ ನೆರವು ನೀಡುವುದನ್ನು ವಿಸ್ತರಿಸಲಾಗುವುದು ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಶುಕ್ರವಾರ(ಮೇ 14) ಘೋಷಿಸಿದ್ದಾರೆ.
ವರ್ಚುವಲ್ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಕೇಜ್ರಿವಾಲ್, ಕೋವಿಡ್ ಸೋಂಕಿನಿಂದ ಪೋಷಕರನ್ನು ಕಳೆದುಕೊಂಡು ಅನಾಥರಾಗಿರುವ ಮಕ್ಕಳ ವಿದ್ಯಾಭ್ಯಾಸದ ಖರ್ಚನ್ನು ದೆಹಲಿ ಸರ್ಕಾರ ಭರಿಸಲಿದೆ ಎಂದು ಈ ಸಂದರ್ಭದಲ್ಲಿ ಹೇಳಿದರು.
ರಾಷ್ಟ್ರರಾಜಧಾನಿ ದೆಹಲಿಯಲ್ಲಿ ಕೋವಿಡ್ 19 ಪ್ರಕರಣಗಳ ಸಂಖ್ಯೆ ಇಳಿಕೆಯಾಗುತ್ತಿದ್ದು, ಕಳೆದ 24ಗಂಟೆಗಳಲ್ಲಿ 8,500 ಕೋವಿಡ್ ಪ್ರಕರಣ ಪತ್ತೆಯಾಗಿದೆ. ಅಲ್ಲದೇ ಪಾಸಿಟಿವಿಟಿ ದರ ಶೇ.12ಕ್ಕೆ ಕುಸಿದಿದೆ ಎಂದು ತಿಳಿಸಿದೆ.
“ಆದರೆ ಕೋವಿಡ್ 19 ಸೋಂಕು ವಿರುದ್ದದ ಹೋರಾಟ ನಿಂತಿಲ್ಲ. ಈ ವಿಚಾರದಲ್ಲಿ ಯಾವುದೇ ಅಸಡ್ಡೆ ಸಲ್ಲದು ಎಂದು ಮುಖ್ಯಮಂತ್ರಿ ಕೇಜ್ರಿವಾಲ್ ತಿಳಿಸಿದರು. ಹಲವಾರು ಮಕ್ಕಳು ತಮ್ಮ ತಂದೆ, ತಾಯಿಯನ್ನು ಕಳೆದುಕೊಂಡಿರುವ ವಿಚಾರ ನನ್ನ ಗಮನಕ್ಕೆ ಬಂದಿದೆ. ನಾನು ಒಂದು ಮಾತು ಹೇಳಲು ಬಯಸುತ್ತೇನೆ, ನೀವ್ಯಾರು ಅನಾಥರಲ್ಲ, ನಿಮ್ಮೊಂದಿಗೆ ನಾವು ಸದಾ ಇದ್ದಿರುವುದಾಗಿ” ತಿಳಿಸಿದ್ದಾರೆ.