Breaking News

ಜಿಂದಾಲ್ ಗೆ 3667 ಎಕರೆ ಪರಭಾರೆ : ಸುಪ್ರೀಂ ಕೋರ್ಟ್ ಮೊರೆ ಹೋದ ಸಾಮಾಜಿಕ ಕಾರ್ಯಕರ್ತ

Spread the love

ಬೆಂಗಳೂರು, ಮೇ. 14 : ಕೊರೊನಾ ಕಷ್ಟ ಕಾಲದಲ್ಲಿ ಸಮರ್ಪಕ ರೀತಿಯಲ್ಲಿ ಆಕ್ಸಿಜನ್ ಪೂರೈಕೆ ಮಾಡದೇ ವಿವಾದಕ್ಕೆ ಈಡಾಗಿದ್ದ ಜಿಂದಾಲ್ ಸಂಸ್ಥೆಗೆ ಭೂಮಿ ನೀಡಲು ರಾಜ್ಯ ಸರ್ಕಾರ ಕೈಗೊಂಡಿರುವ ತೀರ್ಮಾನ ವಿವಾದಕ್ಕೆ ಎಡೆ ಮಾಡಿಕೊಟ್ಟಿದೆ. ಬಳ್ಳಾರಿಯಲ್ಲಿರುವ ಜೆಎಸ್‌ಡಬ್ಲೂ ಸಂಸ್ಥೆಗೆ 3667 ಎಕರೆ ಜಮೀನು ಮಾರಾಟ ಮಾಡಲು ರಾಜ್ಯ ಸರ್ಕಾರ ಕೈಗೊಂಡಿರುವ ತೀರ್ಮಾನ ಪ್ರಶ್ನಿಸಿ ಸುಪ್ರೀಂಕೋರ್ಟ್ ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆಯಾಗಿದೆ.

ಸಾಮಾಜಿಕ ಕಾರ್ಯಕರ್ತ ಪೌಲ್ ಎಂಬುವರು ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿಗಳ ಪೀಠಕ್ಕೆ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸಲ್ಲಿಸಿದ್ದಾರೆ. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದ ರಾಜ್ಯ ಸರ್ಕಾರ, ಬಳ್ಳಾರಿಯ ಸಂಡೂರಿನ ಕುರುಕುಪ್ಪೆ ಗ್ರಾಮದ ಸುತ್ತ ಇರುವ 3667 ಎಕರೆ ಜಮೀನನ್ನು ಜಿಂದಾಲ್ ಸಂಸ್ಥೆಗೆ ಮಾರಾಟ ಮಾಡುವ ತೀರ್ಮಾನವನ್ನು ಕೈಗೊಂಡಿದೆ. ಕಳೆದ ಏಪ್ರಿಲ್ 25 ರಂದು ಸಚಿವ ಸಂಪುಟ ಇದಕ್ಕೆ ಅನುಮೋದನೆ ನೀಡಿದೆ. ಒಂದು ಎಕರೆ ಜಮೀನನ್ನು 1.22 ಲಕ್ಷ ರೂ. ಬೆಲೆಗೆ ಮಾರಾಟ ಮಾಡಲು ಸರ್ಕಾರ ತೀರ್ಮಾನಿಸಿದ್ದು, ಇದರಿಂದ ಸರ್ಕಾರದ ಬೊಕ್ಕಸಕ್ಕೆ ಸಾವಿರಾರು ಕೋಟಿ ರೂ. ನಷ್ಟವಾಗಲಿದೆ.

ಲೀಸ್ ಕಂ ಸೇಲ್ ಆಧಾರದ ಮೇಲೆ ಇದೇ ಭೂಮಿಯನ್ನು ಜಿಂದಾಲ್ ಸಂಸ್ಥೆಗೆ ಹಿಂದಿನ ಮುಖ್ಯಮಂತ್ರಿ ಎಚ್. ಡಿ ಕುಮಾರಸ್ವಾಮಿ ತೀರ್ಮಾನ ಕೈಗೊಂಡಿದ್ದ ವೇಳೆ, ವಿರೋಧ ಪಕ್ಷದ ನಾಯಕರಾಗಿದ್ದ ಯಡಿಯೂರಪ್ಪ ಅವರೇ ವಿರೋಧಿಸಿದ್ದರು. ಯಡಿಯೂರಪ್ಪ ಇದೀಗ ಸಿಎಂ ಆಗಿ ಸಾವಿರಾರು ಎಕರೆ ಭೂಮಿಯನ್ನು ಜಿಂದಾಲ್ ಸಂಸ್ಥೆಗೆ ಪರಭಾರೆ ಮಾಡುವ ತೀರ್ಮಾನ ಕೈಗೊಂಡಿದ್ದಾರೆ.

ಅಮೂಲ್ಯ ಗಣಿ ಸಂಪತ್ತು ಇರುವ ಈ ಭೂಮಿ ಒಂದು ಎಕರೆ ಒಂದು ಕೋಟಿ ರೂಪಾಯಿಗೆ ಮಾರಾಟವಾಗುತ್ತಿದೆ. ಯಡಿಯೂರಪ್ಪ ಅವರು ವಿರೋಧ ಪಕ್ಷದವರಾಗಿದ್ದಾಗ ಅಧಿವೇಶನದಲ್ಲಿ ಅಹೋರಾತ್ರಿ ಧರಣಿ ನಡೆಸಿ ಜಿಂದಾಲ್ ಸಂಸ್ಥೆಗೆ ಭೂಮಿ ನೀಡುವುದನ್ನು ತಡೆದಿದ್ದರು. ಇದೀಗ ಅವರೇ ಈ ಭೂಮಿಯನ್ನು ಜಿಂದಾಲ್ ಸಂಸ್ಥೆಗೆ ಪರಭಾರೆ ಮಾಡುತ್ತಿದ್ದಾರೆ ಎಂದು ಪೌಲ್ ಆರೋಪಿಸಿದ್ದಾರೆ.

ರಾಜ್ಯ ಸರ್ಕಾರದ ಈ ತೀರ್ಮಾನದಿಂದ ಕೋಟ್ಯಂತರ ರೂಪಾಯಿ ನಷ್ಟವಾಗಲಿದೆ. ಜಿಂದಾಲ್ ಸಂಸ್ಥೆಗೆ ಲಾಭ ಮಾಡಿಕೊಡುವ ಉದ್ದೇಶದಿಂದ ಯಡಿಯೂರಪ್ಪ ಅವರು ಈ ತೀರ್ಮಾನ ಕೈಗೊಂಡಿದ್ದಾರೆ. ಹೀಗಾಗಿ ಈ ಕುರಿತು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಅಂಗಕರಿಸಿ ನ್ಯಾಯಾಲಯದಲ್ಲಿ ವಾದ ಮಂಡನೆಗೆ ಅವಕಾಶ ನೀಡಬೇಕು. ಸುಪ್ರೀಂಕೋರ್ಟ್ ಸ್ವಯಂ ಪ್ರೇರಿತ ಕೇಸು ದಾಖಲಿಸಿಕೊಂಡು ತನಿಖೆಗೆ ಆದೇಶಿಸಬೇಕು ಎಂದು ದೂರುದಾರರು ಮನವಿ ಮಾಡಿದ್ದಾರೆ.


Spread the love

About Laxminews 24x7

Check Also

ಸಂಧ್ಯಾ ಸುರಕ್ಷಾ ಯೋಜನೆಯಿಂದ ಹಿರಿಯ ನಾಗರಿಕರಿಗೆ ಅನುಕೂಲಗಳು ಏನೇನು?

Spread the love ಬೆಂಗಳೂರು: ವಯಸ್ಸಾದ ವೃದ್ಧರಿಗೆ ಮಕ್ಕಳೇ ಆಸರೆ. ಆದರೂ, ಹಿರಿಯ ಜೀವಗಳಿಗೆ ಹಲವು ಸಮಸ್ಯೆಗಳು ಎದುರಾಗುತ್ತವೆ. ಪ್ರತಿಯೊಂದಕ್ಕೂ ಮಕ್ಕಳನ್ನೇ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ