ಬೆಂಗಳೂರು: ದೇಶದ ನಾಲ್ಕು ಕಡೆಗಳಲ್ಲಿ ಕೇಂದ್ರದ ರಕ್ಷಣಾ ಇಲಾಖೆಯ ಡಿಆರ್ ಡಿಒ ವತಿಯಿಂದ ವಿಶೇಷ ಕೋವಿಡ್ ಚಿಕಿತ್ಸಾ ಕೇಂದ್ರಗಳನ್ನು ತೆರೆದ ಮಾದರಿಯಲ್ಲಿಯೇ ಕರ್ನಾಟಕದಲ್ಲಿಯೂ ಕೂಡ ಬೆಂಗಳೂರು ಮತ್ತು ಬೆಳಗಾವಿಗಳಲ್ಲಿ ರಕ್ಷಣಾ ಇಲಾಖೆಯಿಂದ ಕೋವಿಡ್ ಚಿಕಿತ್ಸಾ ಕೇಂದ್ರಗಳನ್ನು ಪ್ರಾರಂಭಿಸಬೇಕೆಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರಿಗೆ ಸಾರಿಗೆ ಸಚಿವ, ಡಿಸಿಎಂ ಲಕ್ಷ್ಮಣ ಸವದಿ ಪತ್ರ ಬರೆದು ಮನವಿ ಮಾಡಿದ್ದಾರೆ.
ದೆಹಲಿ, ವಾರಣಾಸಿ, ಅಹಮದಾಬಾದ್, ಮತ್ತು ಲಖ್ನೋಗಳಲ್ಲಿ ಡಿಆರ್ ಡಿಒ ವತಿಯಿಂದ ವಿಶೇಷ ಕೋವಿಡ್ ಚಿಕಿತ್ಸಾ ಕೇಂದ್ರಗಳನ್ನು ಪ್ರಾರಂಭಿಸುವುದಕ್ಕೆ ಕೇಂದ್ರ ರಕ್ಷಣಾ ಸಚಿವರನ್ನು ಡಿಸಿಎಂ ಸವದಿ ಅಭಿನಂದಿಸಿದ್ದಾರೆ.
ಕರ್ನಾಟಕದಲ್ಲಿಯೂ ಪ್ರಸ್ತುತ ಕೋವಿಡ್ ಅಪಾಯಕಾರಿ ಪ್ರಮಾಣದಲ್ಲಿ ಹೆಚ್ಚಿರುವುದರಿಂದ ಇಲ್ಲಿನ ಆಸ್ಪತ್ರೆಗಳಲ್ಲಿ ರೋಗಿಗಳ ದಟ್ಟಣೆ ಅಧಿಕವಾಗಿದೆ. ವೈದ್ಯರುಗಳ ಮೇಲೆ ಒತ್ತಡವೂ ತೀವ್ರವಾಗಿದೆ. ಆದ್ದರಿಂದ ಕರ್ನಾಟಕದಲ್ಲಿಯೂ ಆದಷ್ಟು ಶೀಘ್ರವಾಗಿ ಸುಸಜ್ಜಿತ ಕೋವಿಡ್ ಚಿಕಿತ್ಸಾ ಕೇಂದ್ರವನ್ನು ಪ್ರಾರಂಭಿಸುವುದು ಸೂಕ್ತ. ಬೆಂಗಳೂರು ಮತ್ತು ಬೆಳಗಾವಿಗಳಲ್ಲಿ ಕೇಂದ್ರದ ರಕ್ಷಣಾ ಇಲಾಖೆಯ ಸ್ವಾಮ್ಯದಲ್ಲಿ ಸಾಕಷ್ಟು ಖಾಲಿ ಜಾಗಗಳೂ ಈಗ ಲಭ್ಯವಿದೆ. ಇದನ್ನು ಬಳಕೆ ಮಾಡಿಕೊಂಡು ರಕ್ಷಣಾ ಇಲಾಖೆಯಿಂದ ತಕ್ಷಣವೇ ಕೋವಿಡ್ ಕೇಂದ್ರಗಳನ್ನು ಪ್ರಾರಂಭಿಸಿದರೆ ಸಾಕಷ್ಟು ರೋಗಿಗಳಿಗೆ ಹೆಚ್ಚಿನ ಅನುಕೂಲವಾಗಲಿದೆ. ಈ ಬಗ್ಗೆ ಆದ್ಯತೆಯ ಮೇರೆಗೆ ಕ್ರಮಕೈಗೊಳ್ಳಬೇಕೆಂದು ಡಿಸಿಎಂ ಸವದಿ ಪತ್ರದ ಮೂಲಕ ಮನವಿ ಮಾಡಿದ್ದಾರೆ.