ಬೆಂಗಳೂರು: ವೈದ್ಯರ ಮೇಲೆ ಹಲ್ಲೆ ಮಾಡಿದ ಆರೋಪದ ಮೇಲೆ ಸಂಜಯನಗರ ಪೊಲೀಸ್ ಠಾಣೆ ಇನ್ಸ್ಪೆಕ್ಟರ್ ಕ್ಯಾತ್ಯಾಯಿನಿ ಸೇರಿ ಮೂರು ಜನ ಕ್ರೈಂ ಸಿಬ್ಬಂದಿಯನ್ನು ಕರ್ತವ್ಯದಿಂದ ಅಮಾನತು ಮಾಡಿ ನಗರ ಪೊಲೀಸ್ ಆಯುಕ್ತ ಕಮಲ್ ಪಂಥ್ ಆದೇಶ ಹೊರಡಿಸಿದ್ದಾರೆ.
ಸಂಜಯನಗರ ಪೊಲೀಸರ ವಿರುದ್ಧ ಅಕ್ರಮ ರೆಮ್ಡಿಸಿವರ್ ಮಾರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ವೈದ್ಯ ನಾಗರಾಜ್ ಅವರನ್ನು ಠಾಣೆಗೆ ಕರೆಸಿ ಹಲ್ಲೆ ಮಾಡಿದ್ದಲ್ಲದೇ ಐದೂವರೆ ಲಕ್ಷ ಹಣ ಸುಲಿಗೆ ಮಾಡಿದ್ದಾರೆ ಎನ್ನುವ ಆರೋಪ ಕೇಳಿ ಬಂದಿತ್ತು.
ವೈದ್ಯರ ಮೇಲೆ ಹಲ್ಲೆ ಪ್ರಕರಣದ ಬಗ್ಗೆ ವರದಿ ನೀಡುವಂತೆ ಡಿಸಿಪಿ ಧರ್ಮೇಂದರ್ ಕುಮಾರ್ ಮೀನಾ ಎಸಿಪಿ ರೀನಾ ಸುವರ್ಣಗೆ ಜವಾಬ್ದಾರಿ ನೀಡಿದ್ದರು. ತನಿಖೆ ಬಳಿಕ ಇಲಾಖಾ ಮಟ್ಟದಲ್ಲಿ ವೈದ್ಯರ ಮೇಲೆ ಪೊಲೀಸ್ ಠಾಣೆಯಲ್ಲಿ ಹಲ್ಲೆ ನಡೆಸಿದ ಆರೋಪ ಸಾಬಿತಾದ ಹಿನ್ನಲೆಯಲ್ಲಿ ಇನ್ಸ್ಪೆಕ್ಟರ್ ಸೇರಿದಂತೆ ಮೂರು ಜನರನ್ನು ಕರ್ತವ್ಯದಿಂದ ಅಮಾನತು ಮಾಡಲಾಗಿದೆ.