ಚಿತ್ರದುರ್ಗ :ಸರ್ಕಾರಿ ಆಸ್ಪತ್ರೆಯಲ್ಲಿ ಫಾರ್ಮ್ ಸಿಸ್ಟ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ವ್ಯಕ್ತಿಯೊಬ್ಬ ನಡೆಸುತಿದ್ದ ಖಾಸಗಿ ಕ್ಲಿನಿಕ್ ಮೇಲೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಹಿರಿಯೂರು ತಾಲೂಕಿನ ಜವನಗೊಂಡನಹಳ್ಳಿ ಗ್ರಾಮದಲ್ಲಿ ಖಾಸಗಿ ಕ್ಲಿನಿಕ್ ನಡೆಸುತ್ತಿದ್ದ ವಿವೇಕಾನಂದನನ್ನು ಬಂಧಿಸಲಾಗಿದೆ. ಖಚಿತ ಮಾಹಿತಿ ಮೇರೆಗೆ ಅಧಿಕಾರಿಗಳ ತಂಡ ಶುಕ್ರವಾರ ತಡರಾತ್ರಿ ದಾಳಿ ನಡೆಸಿದೆ. ದಾಳಿ ವೇಳೆ ಸಾವಿರಾರು ರೂ. ಮೌಲ್ಯದ ಔಷಧಿಗಳು ಹಾಗೂ ನಗದು ವಶಪಡಿಸಿಕೊಂಡಿದ್ದಾರೆ.
ಹಿರಿಯೂರಿನ ಸಾರ್ವಜನಿಕ ಆಸ್ಪತ್ರೆಯಲ್ಲಿ ಫಾರ್ಮಾಸಿಸ್ಟ್ ಆಗಿ ಕರ್ತವ್ಯ ನಿರ್ವಹಿಸುತ್ತಿರುವ ವಿವೇಕಾನಂದ ಸರ್ಕಾರದಿಂದ ಬರುವ ಔಷಧಿ, ಇಂಜೆಕ್ಷನ್, ಮಾತ್ರೆಗಳು, ಸಿರೆಂಜ್ಗಳು, ಹಾಗೂ ಸರ್ಕಾರದ ಔಷಧಿಗಳನ್ನು ದುರುಪಯೋಗ ಪಡಿಸಿಕೊಂಡಿದ್ದ ಎಂದು ತಿಳಿದು ಬಂದಿದೆ.
ಜವನಗೊಂಡನಹಳ್ಳಿಯ ಮನೆಯಲ್ಲಿ ಅನಧಿಕೃತವಾಗಿ ಖಾಸಗಿ ಕ್ಲಿನಿಕ್ ಇಟ್ಟುಕೊಂಡು ರೋಗಿಗಳಿಗೆ ಔಷಧ ಮಾರಾಟ ಮಾಡಿ ಹಣಗಳಿಸುತ್ತಿದ್ದನು ಎಂದು ಪ್ರಾಥಮಿಕ ತನಿಖೆಯಲ್ಲಿ ಬಹಿರಂಗವಾಗಿದೆ. ಸರ್ಕಾರಿ ಆಸ್ಪತ್ರೆಯ ಔಷಧಿಗಳನ್ನು ದುರುಪಯೋಗ ಪಡಿಸಿಕೊಂಡು ಮಾರಾಟ ಮಾಡಿ ಸರ್ಕಾರಕ್ಕೆ ವಂಚನೆ ಮಾಡುತ್ತಿದ್ದ, ಆರೋಪಿ ವಿರುದ್ಧ ಹಿರಿಯೂರು ಗ್ರಾಮಾಂತರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ತಹಸೀಲ್ದಾರ್ ಜಿ.ಎಚ್.ಸತ್ಯನಾರಾಯಣ, ಸಿಪಿಐ ರಾಘವೇಂದ್ರ, ಟಿಎಚ್ಒ ಡಾ.ವೆಂಕಟೇಶ್ ನೇತೃತ್ವದ ಜಂಟಿ ತಂಡ ದಾಳಿ ನಡೆಸಿ, ಆರೋಪಿಯನ್ನು ಬಂಧಿಸಿದ್ದಾರೆ.
Laxmi News 24×7