ಮೈಸೂರು: ಕೋವಿಡ್ ಸೋಂಕಿತರು ಆಸ್ಪತ್ರೆಗಳಲ್ಲಿ ಮೃತಪಟ್ಟರೆ ಕುಟುಂಬದವರಿಗೆ ಮೃತದೇಹವನ್ನು ಹಸ್ತಾಂತರಿಸಲು ಬಾಕಿ ಬಿಲ್ ಪಾವತಿಸುವಂತೆ ಒತ್ತಾಯಿಸಿದರೆ. ಅಂತಹ ಆಸ್ಪತ್ರೆಗಳ ನೋಂದಣಿ ರದ್ದುಗೊಳಿಸಲಾಗುವುದು ಎಂದು ಸರ್ಕಾರ ಆದೇಶಿಸಿದೆ.
ರಾಜ್ಯದ ಅನೇಕ ಖಾಸಗಿ ಆಸ್ಪತ್ರೆಗಳಲ್ಲಿ ಕೋವಿಡ್ ಸೋಂಕಿತರು ಮೃತಪಟ್ಟಲ್ಲಿ ಆಸ್ಪತ್ರೆಯ ಹಾಗೂ ಚಿಕಿತ್ಸೆಯ ಬಾಕಿ ವೆಚ್ಚವನ್ನು ಪಾವತಿಸಿದ ನಂತರವೇ ಶವವನ್ನು ಸಂಬಂಧಿಕರಿಗೆ ನೀಡುವಂತೆ ಷರತ್ತು ವಿಧಿಸುತ್ತಿರುವ ಪ್ರಕರಣಗಳು ವರದಿಯಾಗುತ್ತಿವೆ. ಇದನ್ನು ಗಂಭೀರವಾಗಿ ಪರಿಗಣಿಸಿರುವ ಸರ್ಕಾರ, ಮೃತ ವ್ಯಕ್ತಿಯ ದೇಹವನ್ನು ಹಸ್ತಾಂತರಿಸುವ ವೇಳೆ ಆಸ್ಪತ್ರೆಯ ಬಾಕಿ ಬಿಲ್ ಪಾವತಿಗೆ ಒತ್ತಾಯಿಸುವಂತಲ್ಲ/ಒತ್ತಡ ಹೇರುವಂತಿಲ್ಲ ಹಾಗೂ ಬಿಲ್ ಪಾವತಿ ಮಾಡದೆ ಇದ್ದ ಪಕ್ಷದಲ್ಲಿ ಮೃತದೇಹದ ಹಸ್ತಾಂತರ ಮಾಡಲು ನಿರಾಕರಿಸುವಂತಿಲ್ಲ ಎಂದು ಆದೇಶ ಪತ್ರದಲ್ಲಿ ತಿಳಿಸಿದೆ.
ಇಂತಹ ಪ್ರಕರಣಗಳು ವರದಿಯಾದಲ್ಲಿ ಕರ್ನಾಟಕ ಪ್ರೈವೇಟ್ ಮೆಡಿಕಲ್ ಎಸ್ಟಾಬ್ಲಿಷ್ಮೆಂಟ್ ಆಕ್ಟ್ ಪ್ರಕಾರ ಅಂತಹ ಆಸ್ಪತ್ರೆಗಳ ನೋಂದಣಿ ರದ್ದುಗೊಳಿಸಿ ಸೂಕ್ತ ಕ್ರಮ ಕೈಗೊಳ್ಳುವ ನಿಟ್ಟಿನಲ್ಲಿ ಜಿಲ್ಲಾಧಿಕಾರಿಗಳು (ಅಧ್ಯಕ್ಷರು-ಕೆಪಿಎಂಇ) ಕಾರ್ಯಪ್ರವೃತ್ತರಾಗಲು ಸೂಚಿಸಿದೆ. ಅಲ್ಲದೆ ಈ ರೀತಿ ವರದಿಯಾದ ಪ್ರಕರಣಗಳ ಮಾಹಿತಿ ಹಾಗೂ ಕೈಗೊಂಡ ಕ್ರಮ ಕುರಿತು ವಾರಕ್ಕೆ ಒಂದು ಬಾರಿ ವರದಿ ಸಲ್ಲಿಸಲು ಆದೇಶಿಸಿದೆ.
ಕೆಲವು ದಿನಗಳ ಹಿಂದೆಯಷ್ಟೆ ಇಂತಹ ಪ್ರಕರಣವೊಂದು ನಗರ ಖಾಸಗಿ ಆಸ್ಪತ್ರೆಯಲ್ಲಿ ನಡೆದಿತ್ತು. ಈ ವೇಳೆ ಮುಡಾ ಅಧ್ಯಕ್ಷ ಎಚ್.ವಿ.ರಾಜೀವ್ ಮತ್ತು ಅರಣ್ಯ ವಸತಿ ಹಾಗೂ ವಿಹಾರಧಾಮಗಳ ಸಂಸ್ಥೆ ಅಧ್ಯಕ್ಷ ಎಂ.ಅಪ್ಪಣ್ಣ ಅವರು ಮೃತದೇಹವನ್ನು ಮೃತ ಕುಟುಂಬಕ್ಕೆ ಕೊಡಿಸುವಲ್ಲಿ ಯಶಸ್ವಿಯಾಗಿದ್ದರು.