ಬೆಂಗಳೂರು,- ಜನ ಅಗತ್ಯ ಸಹಕಾರ ನೀಡಿದರೆ ಜೂನ್ 7ರ ನಂತರ ಲಾಕ್ಡೌನ್ ಮುಂದುವರೆಸುವ ಪ್ರಶ್ನೆಯೇ ಉದ್ಭವಿಸುವುದಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಇಂದಿಲ್ಲಿ ತಿಳಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜೂನ್ 7ರವರೆಗೂ ಎಂದಿನಂತೆ ಲಾಕ್ಡೌನ್ ಮುಂದುವರೆಯಲಿದೆ. 7ರ ನಂತರ ಪರಿಸ್ಥಿತಿ ಅವಲೋಕಿಸಿ ಲಾಕ್ಡೌನ್ ವಿಸ್ತರಣೆ ಬಗ್ಗೆ ತೀರ್ಮಾನಿಸಲಾಗುವುದು ಎಂದರು.
ಜನ ಕೊರೊನಾ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಿದರೆ ಜೂನ್ 7ರ ನಂತರ ಲಾಕ್ಡೌನ್ ವಿಸ್ತರಣೆಯ ಅವಶ್ಯಕತೆ ಇರುವುದಿಲ್ಲ. ಹೀಗಾಗಿ ಜನರು ಲಾಕ್ಡೌನ್ ಸಂದರ್ಭದಲ್ಲಿ ನಿಯಮಗಳನ್ನು ಪಾಲಿಸುವ ಮೂಲಕ ಅಗತ್ಯ ಸಹಕಾರ ನೀಡಬೇಕೆಂದು ಯಡಿಯೂರಪ್ಪ ಮನವಿ ಮಾಡಿಕೊಂಡರು.
ಜೂನ್ 7ರವರೆಗೂ ಕಟ್ಟುನಿಟ್ಟಿನ ಲಾಕ್ಡೌನ್ ನಿಯಮ ಮುಂದುವರೆಯಲಿದೆ. ಈ ಸಂದರ್ಭದಲ್ಲಿ ಜನ ಮನೆಯಲ್ಲಿಯೇ ಇದ್ದು ಕೊರೊನಾ ಸೋಂಕು ಹಾವಳಿ ತಪ್ಪಿಸಲು ಸಹಕರಿಸಬೇಕು ಎಂದು ಅವರು ಕೋರಿದರು.