ಬೆಂಗಳೂರು: ರಾಜ್ಯದಲ್ಲಿ ”ಕೆಎಸ್ಆರ್ಟಿಸಿ” ಟ್ರೇಡ್ಮಾರ್ಕ್ ಬಳಕೆ ಮಾಡುವ ವಿರುದ್ಧವಾಗಿ ಯಾವುದೇ ಆದೇಶ ಮತ್ತು ನಿಷೇಧ ಬಂದಿಲ್ಲ ಅಂತಾ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರು ಶಿವಯೋಗಿ ಸಿ.ಕಳಸದ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಮಾಧ್ಯಮ ಪ್ರಕಟಣೆ ಹೊರಡಿಸಿ ಕೆಎಸ್ಆರ್ಟಿಸಿ ಸ್ಪಷ್ಟನೆ ನೀಡಿದೆ.
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ಇನ್ನು ಮುಂದೆ ”ಕೆಎಸ್ಆರ್ಟಿಸಿ” ಎಂದು ಬಳಸುವಂತಿಲ್ಲವೆಂದು, ಕೇಂದ್ರದ ಟ್ರೇಡ್ ಮಾರ್ಕ್ಸ್ ರಿಜಿಸ್ಟರಿ ಅವರು ಬುಧವಾರ ತನ್ನ ಅಂತಿಮ ತೀರ್ಪನ್ನು ಪ್ರಕಟಿಸಿದ್ದು, ಎರಡು ರಾಜ್ಯಗಳ ನಡುವಿನ ಒಂದು ದಶಕದ ಕಾನೂನಾತ್ಮಕ ಹೋರಾಟವು ಅಂತ್ಯಗೊಂಡಂತಿದೆ’ ಎಂಬ ಮಾಧ್ಯಮಗಳ ವರದಿಯನ್ನು ನೋಡಿ ಆಶ್ಚರ್ಯವಾಗಿದೆ. ಇದು ಸತ್ಯಕ್ಕೆ ದೂರವಾದ ವರದಿಯಾಗಿದೆ. ಯಾಕೆಂದರೆ ಸಂಸ್ಥೆಯು ಕೇಂದ್ರ ಟ್ರೇಡ್ ಮಾರ್ಕ್ಸ್ ರಿಜಿಸ್ಟರಿ ರವರಿಂದ ಇಂತಹ ಯಾವುದೇ ಸೂಚನೆ ಅಥವಾ ಆದೇಶವನ್ನು ಇಂದಿನವರೆಗೂ ಸ್ವೀಕರಿಸಿರುವುದಿಲ್ಲ.
ಕೇರಳ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯು ಕೆಎಸ್ಆರ್ಟಿಸಿಗೆ ನೀಡಲಾದ ಟ್ರೇಡ್ ಮಾರ್ಕ್ ಪ್ರಮಾಣಪತ್ರದ ವಿರುದ್ಧ ಬೌದ್ಧಿಕ ಆಸ್ತಿ ಮೇಲ್ಮನವಿ ಮಂಡಳಿ (ಐಪಿಎಬಿ)ಯ ಮುಂದೆ ಸಲ್ಲಿಸಿದ ಮೇಲ್ಮನವಿಗಳಲ್ಲಿ ಯಾವುದೇ ಅಂತಿಮ ಆದೇಶಗಳನ್ನು ಸಹ ಹೊರಡಿಸಲಾಗಿಲ್ಲ. ಏತನ್ಮಧ್ಯೆ, ಸದರಿ ಮಂಡಳಿಯನ್ನು ದಿ.4.04.2021 ರ ಕೇಂದ್ರ ಸರ್ಕಾರದ ಸುಗ್ರೀವಾಜ್ಞೆಯ ಮೂಲಕ ರದ್ದುಪಡಿಸಲಾಗಿದೆ ಮತ್ತು ಇಲ್ಲಿ ಬಾಕಿ ಇರುವ ಅರ್ಜಿಗಳನ್ನು ಹೈಕೋರ್ಟ್ಗೆ ವರ್ಗಾಯಿಸಲಾಗುತ್ತದೆ. ಆದ್ದರಿಂದ, ಕೆಎಸ್ಆರ್ಟಿಸಿಯ ಟ್ರೇಡ್ ಮಾರ್ಕ್ ನೋಂದಣಿಯು ಪ್ರಸ್ತುತ ಜಾರಿಯಲ್ಲಿದೆ ಮತ್ತು ಕೆಎಸ್ಆರ್ಟಿಸಿಯು ತನಗೆ ನೀಡಲಾಗಿರುವ ಟ್ರೇಡ್ಮಾರ್ಕ್ಗಳನ್ನು ಬಳಸಲಾಗುವುದಿಲ್ಲ ಎಂಬ ಸುದ್ದಿ-ವರದಿಗಳು ಸತ್ಯಕ್ಕೆ ದೂರವಾಗಿದೆ ಮತ್ತು ಇದನ್ನು ಕಾನೂನಾತ್ಮಕವಾಗಿ ಒಪ್ಪಲಾಗದು.
ಆದ್ದರಿಂದ, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ‘ಕೆಎಸ್ಆರ್ಟಿಸಿ’ ಟ್ರೇಡ್ಮಾರ್ಕ್ ಬಳಕೆ ಮಾಡುವ ವಿರುದ್ಧವಾಗಿ ಯಾವುದೇ ಆದೇಶ ಮತ್ತು ನಿಷೇಧವಿರುವುದಿಲ್ಲ. ಕೇರಳ ಎಸ್ಆರ್ಟಿಸಿಯು, ಕೆಎಸ್ಆರ್ಟಿಸಿ / ಕರ್ನಾಟಕ ಸರ್ಕಾರಕ್ಕೆ ನೋಟಿಸ್ ನೀಡಲು ಉದ್ದೇಶಿಸಿದೆ ಎಂದು ಮಾಧ್ಯಮಗಳಲ್ಲಿನ ಸುದ್ದಿ ಪ್ರಕಟವಾಗಿದೆ. ಒಂದು ವೇಳೆ ಅಂತಹ ನೋಟಿಸ್ ನೀಡಿದರೆ, ಸಂಸ್ಥೆಯಿಂದ ಸೂಕ್ತವಾದ ಉತ್ತರವನ್ನು ನೀಡಲಾಗುತ್ತದೆ. ನಮ್ಮ ಹಕ್ಕುಗಳನ್ನು ರಕ್ಷಿಸಲು ಕಾನೂನು ಕ್ರಮಗಳನ್ನು ತೆಗೆದುಕೊಳ್ಳಲು ನಾವು ಪ್ರಸ್ತುತ ನಮ್ಮ ವಕೀಲರನ್ನು ಸಂಪರ್ಕಿಸುತ್ತಿದ್ದೇವೆ. ಏತನ್ಮಧ್ಯೆ, ಪತ್ರಿಕೆಗಳಲ್ಲಿ ಈ ರೀತಿ ಕೇರಳ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಹೇಳಿದೆಯೆನ್ನಲಾದ ಸತ್ಯಕ್ಕೆ ದೂರವಾದ ಹಾಗೂ ಕಾನೂನಾತ್ಮಕವಲ್ಲದ ವರದಿಗಳನ್ನು ಪ್ರಕಟಿಸದಂತೆ ವಿನಂತಿಸಲಾಗಿದೆ.
ಶಿವಯೋಗಿ ಸಿ.ಕಳಸದ,
ವ್ಯವಸ್ಥಾಪಕ ನಿರ್ದೇಶಕರು,
ಕೆ ಎಸ್ ಆರ್ ಟಿ ಸಿ