ಬೆಂಗಳೂರು: ಕೋವಿಡ್ ಮಾರ್ಗಸೂಚಿ ಉಲ್ಲಂಘನೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹಾಗೂ ಇನ್ನಿತರ ಸಚಿವರ ವಿರುದ್ಧವೂ ಕ್ರಮ ಕೈಗೊಳ್ಳಲಾಗುವುದು ಎಂದು ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡಿದೆ.
ರಾಜ್ಯದಲ್ಲಿ ಕೊರೊನಾ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಜಾರಿಗೆ ತರಲು ಸರ್ಕಾರಕ್ಕೆ ನಿರ್ದೇಶಿಸುವಂತೆ ಕೋರಿ ಸಲ್ಲಿಕೆಯಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕ್ ನೇತೃತ್ವದ ವಿಭಾಗೀಯ ಪೀಠವು ಶುಕ್ರವಾರ ವಿಚಾರಣೆ ನಡೆಸಿತು. ಈ ವೇಳೆ ಕೋರ್ಟ್, “ಕೋವಿಡ್ ಮಾರ್ಗಸೂಚಿ ಉಲ್ಲಂಘನೆಗೆ ಸಂಬಂಧಿಸಿದಂತೆ ಸಲ್ಲಿಕೆಯಾಗುವ ದೂರುಗಳನ್ನು ಸರ್ಕಾರ ಆರಂಭಿಸಿರುವ ‘ಕುಂದು ಕೊರತೆ ಪರಿಹಾರ ಘಟಕ’ ಪರಿಗಣಿಸಿ ಕ್ರಮ ಕೈಗೊಳ್ಳದಿದ್ದರೆ, ಅದನ್ನು ಗಂಭೀರವಾಗಿ ಪರಿಗಣಿಸಿ ಕಟ್ಟುನಿಟ್ಟಿನ ಆದೇಶ ಹೊರಡಿಸಲಾಗುವುದು” ಎಂದು ಎಚ್ಚರಿಸಿದೆ.
“ಕೋವಿಡ್ ಮಾರ್ಗಸೂಚಿ ಉಲ್ಲಂಘನೆಗೆ ಸಂಬಂಧಿಸಿದಂತೆ ಸಾರ್ವಜನಿಕರು ದೂರು ಸಲ್ಲಿಸಲು ಕುಂದುಕೊರತೆ ಪರಿಹಾರ ಘಟಕ ಸ್ಥಾಪಿಸಲಾಗಿದೆ ಎಂದು ಸರ್ಕಾರದ ಪರ ವಕೀಲರು, ನ್ಯಾಯಪೀಠಕ್ಕೆ ಮಾಹಿತಿ ನೀಡಿದರು. ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಅರ್ಜಿದಾರರ ಪರ ವಕೀಲರು, ಎರಡನೇ ಹಂತದ ಮೆಟ್ರೋ ಮಾರ್ಗದ ಪರಿಶೀಲನೆ ವೇಳೆ ಸಿಎಂ ಯಡಿಯೂರಪ್ಪ, ಸಚಿವರಾದ ಆರ್. ಅಶೋಕ್, ಸೋಮಣ್ಣ, ಬೆಳಗಾವಿಯಲ್ಲಿ ಹೋಮ ನಡೆಸಿದ್ದ ಶಾಸಕ ಅಭಯ್ ಪಾಟೀಲ್ ಹಾಗೂ ಹೊಸಕೋಟೆಯಲ್ಲಿ ಆಟೋ ಚಾಲಕರಿಗೆ ಆಹಾರ ಕಿಟ್ ವಿತರಿಸಿದ್ದ ಸಚಿವ ಎಂಟಿಬಿ ನಾಗರಾಜ್ ನಿಯಮಗಳನ್ನು ಉಲ್ಲಂಘಿಸಿದ್ದಾರೆ ಎಂದು ಫೋಟೋ ಸಹಿತ ಮೆಮೋ ಸಲ್ಲಿಸಿದರು.