Breaking News
Home / Uncategorized / ಬೀಜ, ಗೊಬ್ಬರ ಉಚಿತವಾಗಿ ವಿತರಿಸಿ: ಸಿಎಂ ಬಿಎಸ್‌ವೈಗೆ ಸಿದ್ದರಾಮಯ್ಯ ಪತ್ರ

ಬೀಜ, ಗೊಬ್ಬರ ಉಚಿತವಾಗಿ ವಿತರಿಸಿ: ಸಿಎಂ ಬಿಎಸ್‌ವೈಗೆ ಸಿದ್ದರಾಮಯ್ಯ ಪತ್ರ

Spread the love

ಬೆಂಗಳೂರು: ‘ಸರ್ಕಾರದ ನೀತಿಗಳು ಮತ್ತು ಕೋವಿಡ್ ಮತ್ತಿತರ ಕಾರಣಗಳಿಂದ ರೈತರ ಬಳಿ ಬಿತ್ತನೆ ಚಟುವಟಿಕೆಗೆ ಹಣ ಇಲ್ಲದಂತಾಗಿದೆ. ಹೀಗಾಗಿ ರೈತರಿಗೆ ಬೀಜ, ಗೊಬ್ಬರ ಉಚಿತವಾಗಿ ನೀಡಬೇಕು’ ಎಂದು ಆಗ್ರಹಿಸಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಪತ್ರ ಬರೆದಿದ್ದಾರೆ.

‘ಸಾಲ ವಿತರಣೆ ತಕ್ಷಣ ಆರಂಭಿಸಬೇಕು. ಹೆಸರು, ಉದ್ದು, ಅಲಸಂಡೆ, ತೊಗರಿ ಮುಂತಾದ ದ್ವಿದಳ ಧಾನ್ಯಗಳು ಹಾಗೂ ಸೋಯಾ, ಶೇಂಗಾ ಮುಂತಾದ ಎಣ್ಣೆ ಬೀಜಗಳನ್ನು ಸಂಗ್ರಹಿಸಿ, ಬೇಡಿಕೆ ಇದ್ದಷ್ಟು ನೀಡಲು ತಕ್ಷಣ ಕ್ರಮ ತೆಗೆದುಕೊಳ್ಳಬೇಕು’ ಎಂದು ಅವರು ಆಗ್ರಹಿಸಿದ್ದಾರೆ.

ಪತ್ರದಲ್ಲಿ ಏನಿದೆ?

‘ಈ ವರ್ಷ ಕೇವಲ ಶೇ 19, ಅಂದರೆ 410 ಕ್ವಿಂಟಲ್ ಹೆಸರು ಕಾಳು ಬಿತ್ತನೆ ಬೀಜವನ್ನು ರೈತ ಸಂಪರ್ಕ ಕೇಂದ್ರಗಳಿಗೆ ವಿತರಣೆ ಮಾಡಲಾಗಿದೆ. ಕಳೆದ ವರ್ಷ ತುಮಕೂರಿಗೆ 851 ಕ್ವಿಂಟಲ್ ವಿತರಿಸಿದ್ದರೆ ಈ ವರ್ಷ ಕೇವಲ 90 ಕ್ವಿಂಟಲ್ ವಿತರಿಸಲಾಗಿದೆ. ಹಾಸನಕ್ಕೆ 618 ಕ್ವಿಂಟಲ್ ಬದಲು 87.5 ಕ್ವಿಂಟಲ್, ಮೈಸೂರಿಗೆ 418 ಕ್ವಿಂಟಲ್ ಬೇಡಿಕೆಗೆ ಬದಲಾಗಿ 165.50, ಚಾಮರಾಜನಗರಕ್ಕೆ 222 ಕ್ವಿಂಟಲಿನ ಬದಲು 67.5 ಕ್ವಿಂಟಲ್ ನೀಡಲಾಗಿದೆ. ಇದನ್ನು ದ್ರೋಹವೆನ್ನದೆ ಇನ್ನು ಯಾವ ಭಾಷೆಯಲ್ಲಿ ಹೇಳಬೇಕು?’ ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

 

‘ಈ ವರ್ಷದ ಪೂರ್ವ ಮುಂಗಾರಿನಲ್ಲಿ ಮಳೆಯ ಪ್ರಮಾಣವೂ ಕಡಿಮೆಯಾಗಿಲ್ಲ. ಕಳೆದ ಬಾರಿಗೆ ಹೋಲಿಸಿದರೆ ಸರಾಸರಿಗಿಂತ ಶೇ 15ರಿಂದ 20ರಷ್ಟು ಹೆಚ್ಚು ಮಳೆಯಾಗಿದೆ. ಆದರೆ, ಸರ್ಕಾರ ಬಿತ್ತನೆ ಬೀಜ ಸರಬರಾಜು ಮಾಡಿಲ್ಲ. ನನಗಿರುವ ಮಾಹಿತಿ ಪ್ರಕಾರ ಈ ವರ್ಷ ಬೇಡಿಕೆಯನ್ನು ಅಂದಾಜು ಮಾಡದೆ, ಸಾಕಷ್ಟು ಪ್ರಮಾಣದಲ್ಲಿ ಬಿತ್ತನೆ ಬೀಜ ಸಂಗ್ರಹಣೆ ಮಾಡಿಕೊಳ್ಳದೆ ಮೈಮರೆಯಲಾಗಿದೆ. ತಮ್ಮ ತಪ್ಪು ಮುಚ್ಚಿಕೊಳ್ಳಲು ಕಳೆದ ವರ್ಷ ಬಿತ್ತನೆ ಬೀಜ ಪಡೆದ ರೈತರಿಗೆ ಈ ವರ್ಷ ನೀಡಲಾಗದು ಎಂದು ರೈತ ಸಂಪರ್ಕ ಕೇಂದ್ರಗಳಲ್ಲಿ ಹೇಳಿ ಕಳಿಸಿದ್ದಾರೆ. ಕೃಷಿ ಇಲಾಖೆಯೂ ಸಹ ಸುತ್ತೋಲೆಗಳನ್ನು ಹೊರಡಿಸಿದೆ’ ಎಂದೂ ಉಲ್ಲೇಖಿಸಿದ್ದಾರೆ.

‘ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಬಿತ್ತನೆ ಕೆಲಸಗಳು ಆರಂಭವಾಗುತ್ತವೆ. ಅಲ್ಲಿಗೂ ಸಾಕಷ್ಟು ಪ್ರಮಾಣದ ಬಿತ್ತನೆ ಕಾಳು ಒದಗಿಸಲು ಸಾಧ್ಯವಾಗುತ್ತಿಲ್ಲ ಎಂಬ ಆರೋಪಗಳು ಬರುತ್ತಿವೆ. ನನಗೆ ಇರುವ ಮಾಹಿತಿ ಪ್ರಕಾರ ಕೃಷಿ ಇಲಾಖೆ 8,391 ಕ್ವಿಂಟಲ್ ಬದಲು ಕೇವಲ 5000ದಿಂದ 5500 ಕ್ವಿಂಟಲ್ ಹೆಸರು ಕಾಳನ್ನು ವಿತರಿಸಲು ಈಗ ಹೊರಟಿದೆ. ಇದು ಸರಿಯಾದ ಕ್ರಮವಲ್ಲ. ರೈತರಿಗೆ ಸಮರ್ಪಕ ಬಿತ್ತನೆ ಬೀಜ ಸಿಗದೆ ಬಿತ್ತನೆ ಮಾಡದಿದ್ದರೆ ಅಥವಾ ರೈತರು ತಮ್ಮ ಬಳಿ ಇದ್ದ ಗುಣಮಟ್ಟವಿಲ್ಲದ ಬೀಜಗಳನ್ನು ಬಿತ್ತನೆ ಮಾಡಿದರೆ ಉತ್ಪಾದನೆ ಕುಂಠಿತಗೊಳ್ಳುತ್ತದೆ. ಇದರಿಂದ ರೈತರಿಗೆ ಆದಾಯ ಖೋತಾ ಆಗುತ್ತದೆ. ವಿದೇಶಗಳಿಂದ ಆಮದು ಮಾಡಿಕೊಳ್ಳುವ ಪರಿಸ್ಥಿತಿ ಬರುತ್ತದೆ. ಕಾಳುಗಳನ್ನು ಬಳಸುವ ಗ್ರಾಹಕರಿಗೆ ಸುಲಭದ ದರದಲ್ಲಿ ಕೈಗೆಟುಕದೆ ದ್ವಿದಳ ಧಾನ್ಯಗಳ ಬಳಕೆಯನ್ನು ಕಡಿಮೆ ಮಾಡಲಾರಂಭಿಸುತ್ತಾರೆ’.

 

‘ಕೇವಲ ಬಾಯಿ ಮಾತಿನಲ್ಲಿ ರಾಷ್ಟ್ರಪ್ರೇಮದ ಮಾತನಾಡಿ ಅದಾನಿ, ಧಮಾನಿ, ಅಂಬಾನಿಗಳ ಕೈಗೆ ಆಹಾರ ಧಾನ್ಯಗಳ ಸಂಗ್ರಹಣೆ ಮತ್ತು ವಿತರಣೆಕೊಟ್ಟು, ಅವರಿಗೆ ಜನರನ್ನು ಹುರಿದು ಮುಕ್ಕಲು ಬಿಟ್ಟು ಜನರ ಬಳಿ ಇರುವ ಬಿಡಿಗಾಸುಗಳನ್ನು ಲೂಟಿ ಹೊಡೆಯಲು ಅವಕಾಶ ಮಾಡಿಕೊಟ್ಟು ಹಸಿರು ಶಾಲನ್ನು ಹೆಗಲ ಮೇಲೆ ಹಾಕಿಕೊಂಡರೆ ಅದು ರೈತ ಪ್ರೇಮವಾಗುತ್ತದೆಯೇ. ವೇಷಗಳನ್ನು ಧರಿಸಿ ಘೋಷಣೆಗಳನ್ನು ಕೂಗಿದರೆ ಅದು ರಾಷ್ಟ್ರಪ್ರೇಮವಾಗುತ್ತದೆಯೇ.? ಸುಳ್ಳು ಘೋಷಣೆಗಳ ಕೆಸರಿನಲ್ಲಿ ಮುಳುಗಿಸಿ ಜನರನ್ನು ಭೀಕರ ಶೋಷಣೆ ಮಾಡುವುದರಿಂದ ದೇಶ ಪ್ರಗತಿ ಹೊಂದಲು ಸಾಧ್ಯವೇ’ ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.


Spread the love

About Laxminews 24x7

Check Also

ಮತದಾನ ಮೊದಲು ನಂತರ ಮದುವೆ: ಓಡಿ ಬಂದು ಮತ ಹಾಕಿದ ವರ-ವಧು

Spread the love ಚಾಮರಾಜನಗರ ಏಪ್ರಿಲ್ 26: ದಾಂಪತ್ಯ ಜೀವನಕ್ಕೆ ಕಾಲಿಡುವ ಮುನ್ನ ವರನೊಬ್ಬ ಓಡಿ ಬಂದು ಮತ ಚಲಾಯಿಸಿದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ