ಬೆಳಗಾವಿ: ಯಾರೋ ದೆಹಲಿಗೆ ಹೋಗಿ ಬಂದ ತಕ್ಷಣ ಮುಖ್ಯಮಂತ್ರಿ ಬದಲಾವಣೆ ಆಗುವುದಿಲ್ಲ. ಮುಖ್ಯಮಂತ್ರಿ ಬದಲಾವಣೆ ಅಷ್ಟು ಸುಲಭದ ಕೆಲಸವಲ್ಲ ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ್ ಖಾರವಾಗಿ ಹೇಳಿದರು.
ಬೆಳಗಾವಿಯಲ್ಲಿ ಸೋಮವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು ಸಿಎಂ ಬದಲಾವಣೆ ಇಲ್ಲ. ಇನ್ನೂ ಎರಡು ವರ್ಷ ಯಡಿಯೂರಪ್ಪ ಅವರೇ ಮುಖ್ಯಮಂತ್ರಿಯಾಗಿ ಮುಂದುವರೆಯುತ್ತಾರೆ. ಮುಂದಿನ ಚುನಾವಣೆಯನ್ನು ಯಡಿಯೂರಪ್ಪ ನೇತೃತ್ವದಲ್ಲಿ ಎದುರಿಸುತ್ತೇವೆ ಎಂದು ಸ್ಪಷ್ಟಪಡಿಸಿದರು.
ಪಕ್ಷದ ವರಿಷ್ಠರು ಕೇಳಿದರೆ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುವೆ ಎಂಬ ಬಿಎಸ್ವೈ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು ನಾಯಕತ್ವ ಬದಲಾವಣೆ ಕುರಿತು ಹಾದಿ ಬೀದಿಯಲ್ಲಿ ಮಾತನಾಡುವುದನ್ನು ಕೇಳಿ ಮನಸ್ಸಿಗೆ ಬೇಜಾರಗಿ ಯಡಿಯೂರಪ್ಪ ಹಾಗೆ ಹೇಳಿರಬಹುದು. ಪಕ್ಷದ ಶಿಸ್ತಿನ ಸಿಪಾಯಿಯಾಗಿ ಹೈಕಮಾಂಡ್ ನಿರ್ಧಾರಕ್ಕೆ ಬದ್ದ ಅಂದಿದ್ದಾರೆ. ಅವರೇನೂ ಮುಖ್ಯಮಂತ್ರಿ ಹುದ್ದೆಗೆ ರಾಜೀನಾಮೆ ಕೊಟ್ಟು ಹೋಗುತ್ತೇನೆ ಎಂದು ಹೇಳಿಲ್ಲ. ಪ್ರತಿ ದಿನ ಈ ರೀತಿ ಹೇಳಿಕೆ ನೀಡಿದರೆ ಆಡಳಿತ ಕುಸಿದು ಹೋಗುತ್ತದೆ ಎಂದರು .
ಒಬ್ಬೊಬ್ಬರು ಒಂದೊಂದು ರೀತಿ ಹೇಳಿದರೆ ಆಡಳಿತ ನಡೆಸಿಕೊಂಡು ಹೋಗುವವರಿಗೆ ಕಷ್ಟ ಆಗುತ್ತದೆ. ಹೀಗಾಗಿ ಮುಖ್ಯಮಂತ್ರಿಗಳು ಮನಸ್ಸಿಗೆ ನೋವಾಗಿ ಈ ರೀತಿ ಹೇಳಿಕೆ ನೀಡಿರಬಹುದು. ಆದರೆ ಹೈಕಮಾಂಡ್ ನಿಂದ ಇದುವರೆಗೂ ಮುಖ್ಯಮಂತ್ರಿ ಬದಲಾವಣೆ ಮಾಡುತ್ತೇವೆ ಎಂದು ಹೇಳಿಲ್ಲ. ಈಗ ಎಲ್ಲವೂ ಊಹಾಪೋಹದ ಮೇಲೆ ನಡೆದಿವೆ ಎಂದು ಬಿ.ಸಿ. ಪಾಟೀಲ್ ಹೇಳಿದರು.
ಕೋವಿಡ್ ಪರಿಸ್ಥಿತಿಯಲ್ಲಿ ಯಡಿಯೂರಪ್ಪ ಉತ್ತಮವಾದ ಕೆಲಸ ಮಾಡುತ್ತಿದ್ದಾರೆ. ಶಾಸಕರಿಂದ ಸಹಿ ಸಂಗ್ರಹ ವಿಚಾರ ನನಗೆ ಗೊತ್ತಿಲ್ಲ. ಇದರ ಬಗ್ಗೆ ಹಾದಿ ಬೀದಿಯಲ್ಲಿ ಮಾತನಾಡಿ ಗೊಂದಲ ಮಾಡುವುದು ಸರಿಯಲ್ಲ. ಎಲ್ಲದಕ್ಕೂ ಒಂದು ಚೌಕಟ್ಟಿರುತ್ತೆ ಅಲ್ಲಿ ಮಾತಾಡಬೇಕು. ಸಮಸ್ಯೆಗಳ ಬಗ್ಗೆ ಪಕ್ಷದ ವೇದಿಕೆಯಲ್ಲಿ ಚರ್ಚಿಸಬೇಕು. ಹಾದಿ ಬೀದಿಯಲ್ಲಿ ಮಾತಾಡುವವರ ವಿರುದ್ಧ ವರಿಷ್ಠರು ಕ್ರಮ ತೆಗೆದುಕೊಳ್ಳುತ್ತಾರೆ ಎಂದು ಬಿ.ಸಿ. ಪಾಟೀಲ ಹೇಳಿದರು.
ಕಾಂಗ್ರೆಸ್ ಪಕ್ಷದ ಬಗ್ಗೆ ಪ್ರಸ್ತಾಪಿಸಿ ಅಲ್ಲೇನೂ ಎಲ್ಲವೂ ಸರಿಯಾಗಿಲ್ಲ. ಸಿದ್ದರಾಮಯ್ಯ ಹಾಗೂ ಡಿ ಕೆ ಶಿವಕುಮಾರ್ ಮಧ್ಯೆ ಈಗಲೂ ಮನಸ್ತಾಪ ಇದೆ. ಒಬ್ಬರ ಮುಖ ಒಬ್ಬರು ನೋಡುವದಿಲ್ಲ. ಅಂಥವರು ನಮ್ಮ ಪಕ್ಷದ ಬಗ್ಗೆ ಮಾತನಾಡಬೇಕಿಲ್ಲ ಎಂದು ತಿರುಗೇಟು ನೀಡಿದರು.