ಬೆಂಗಳೂರು – ಶಾಸಕ ಮತ್ತು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಅವರ ವಿರುದ್ಧದ ಕ್ರಿಮಿನಲ್ ಪ್ರಕರಣವನ್ನು ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಕಳೆದ ಲೋಕಸಭೆ ಚುನಾವಣೆ ಸಂದರ್ಭದಲ್ಲಿ ನೀತಿ ಸಂಹಿತೆ ಉಲ್ಲಂಘಿನೆ ಮಾಡಿದ್ದ ಆರೋಪ ಸಂಬಂಧ ಶಾಸಕ ಮತ್ತು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಮತ್ತಿತರರ ವಿರುದ್ಧದ ಕ್ರಿಮಿನಲ್ ಪ್ರಕರಣವನ್ನು ಕೋರ್ಟ್ ರದ್ದುಗೊಳಿಸಿದೆ.
ಸಿ.ಟಿ.ರವಿ ಮತ್ತು ಅವರ ಮೂವರು ಬೆಂಬಲಿಗರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸುನಿಲ್ದತ್ ಯಾದವ್ ಅವರಿದ್ದ ಏಕ ಸದಸ್ಯಪೀಠ, ಅರ್ಜಿಗಳನ್ನು ಪುರಸ್ಕರಿಸಿ ಈ ಆದೇಶ ಮಾಡಿದೆ. ಪ್ರಕರಣ ಸಂಬಂಧ ದೂರುದಾರರಾಗಿರುವ ಚುನಾವಣಾಧಿಕಾರಿಯು ಮ್ಯಾಜಿಸ್ಪ್ರೇಟ್ ಕೋರ್ಟ್ನಲ್ಲಿ ದೂರು ದಾಖಲಿಸಬೇಕಿತ್ತು. ಆದರೆ, ನೇರವಾಗಿ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ. ಆದ್ದರಿಂದ ದೂರು ದಾಖಲೆ ಪ್ರಕ್ರಿಯೆಯಲ್ಲಿ ಕಾನೂನು ಉಲ್ಲಂಘನೆ ಆಗಿರುವ ಕಾರಣ ಪ್ರಕರಣವು ವಿಚಾರಣೆಗೆ ಯೋಗ್ಯವಾಗಿಲ್ಲ ಎಂದು ನ್ಯಾಯಪೀಠ ಅಭಿಪ್ರಾಯಪಟ್ಟಿದೆ.
ಅಲ್ಲದೇ, ದೂರುದಾರರು ಹೊಸದಾಗಿ ಕಾನೂನು ಪ್ರಕಾರ ದೂರು ದಾಖಲಿಸಲು ಸ್ವತಂತ್ರರು ಎಂದೂ ನ್ಯಾಯಪೀಠ ಸ್ಪಷ್ಟಪಡಿಸಿದೆ. 2019ರ ಲೋಕಸಭೆ ಚುನಾವಣೆ ಸಂದರ್ಭದಲ್ಲಿ ಸಿ.ಟಿ.ರವಿ ಮತ್ತು ಅವರ ಬೆಂಬಲಿಗರು ಸಕಲೇಶಪುರ ತಾಲೂಕಿನ ಬಾಗೆಹಳ್ಳಿಯಲ್ಲಿ ಸುಮಾರು 50ರಿಂದ 100 ಕಾರ್ಯಕರ್ತರನ್ನು ಸೇರಿಸಿ ಸಭೆ ನಡೆಸಿದ್ದರು. ಆದರೆ, ಸಭೆ ನಡೆಸಲು ಚುನಾವಣಾ ಆಯೋಗದಿಂದ ಯಾವುದೇ ಪೂರ್ವಾನುಮತಿ ಪಡೆದಿರಲಿಲ್ಲ.
Laxmi News 24×7