ಮಡಿಕೇರಿ: ವಿರಾಜಪೇಟೆಯಲ್ಲಿ ನಡೆದಿದ್ದ ರಾಯ್ ಡಿಸೋಜ ಅವರ ಸಾವಿನ ಪ್ರಕರಣ ಸಂಬಂಧ ದಕ್ಷಿಣ ವಲಯ ಐಜಿಪಿ ಪ್ರವೀಣ್ ಪವಾರ್ ಭೇಟಿ ನೀಡಿ, ಸ್ಥಳ ಪರಿಶೀಲಿಸಿದ್ದು, ಮೇಲ್ನೋಟಕ್ಕೆ ತಪ್ಪಿತಸ್ಥ ಹೆಡ್ ಕಾನ್ಸ್ಟೇಬಲ್ ಸೇರಿ ಎಂಟು ಪೊಲೀಸರನ್ನು ಸ್ಥಳದಲ್ಲೇ ಅಮಾನತುಗೊಳಿಸಿದ್ದಾರೆ. ಪ್ರಕರಣವನ್ನು ಸಿಐಡಿಗೆ ವಹಿಸಲಾಗುವುದು ಎಂದು ಪ್ರವೀಣ್ ಪವಾರ್ ತಿಳಿಸಿದ್ದಾರೆ.
ಶನಿವಾರ ಪೊಲೀಸ್ ಠಾಣೆಗೆ ಭೇಟಿ ನೀಡಿದ ಸಂದರ್ಭ ಘಟನೆ ನಡೆದ ಸ್ಥಳಕ್ಕೂ ಭೇಟಿ ನೀಡಿ ಪರಿಶೀಲಿಸಿದರು. ಬಳಿಕ ಮಾಧ್ಯಮದವರಿಗೆ ಮಾಹಿತಿ ನೀಡಿದ ಪ್ರವೀಣ್ ಪವಾರ್, ಪೊಲೀಸರ ಹಲ್ಲೆಯಿಂದ ರಾಯ್ ಡಿಸೋಜಾ ಮೃತ ಪಟ್ಟಿದ್ದಾರೆ ಎಂದು ಕುಟುಂಬಸ್ಥರು ಆರೋಪಿಸಿದ್ದು, ಅವರ ಸಹೋದರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ದೂರು ಸಲ್ಲಿಸಿದ್ದಾರೆ. ದೂರು ಸ್ವೀಕರಿಸಿ, ಠಾಣೆಯ ಸಿಬ್ಬಂದಿ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಪ್ರಾಥಮಿಕ ತನಿಖೆ ನಡೆಸಿದ ವಿರಾಜಪೇಟೆ ಡಿವೈಎಸ್ಪಿ ಜಯ ಕುಮಾರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ನೀಡಿದ ವರದಿಯ ಆಧಾರದ ಮೇಲೆ 8 ಮಂದಿ ಪೊಲೀಸ್ ಸಿಬ್ಬಂದಿಯನ್ನು ಅಮಾನತು ಮಾಡಲಾಗಿದೆ. ಪ್ರಕರಣವನ್ನು ಸಿಐಡಿಗೆ ಹಸ್ತಾಂತರಿಸಲಾಗುವುದು ಎಂದರು.