ಬೆಳಗಾವಿ: ಆಟೋ ರಿಕ್ಷಾದಲ್ಲಿ ಕುಳಿತು ಹರಟೆ ಹೊಡೆಯುತ್ತಿದ್ದ ಯುವಕರಿಗೆ ಮನೆಗೆ ಹೋಗುವಂತೆ ಹೇಳಿದ ಪೊಲೀಸರ ಮೇಲೆ ಹಲ್ಲೆ ನಡೆಸಿದ ಘಟನೆ ಇಲ್ಲಿಯ ದರ್ಬಾರ್ ಗಲ್ಲಿಯಲ್ಲಿ ಸೋಮವಾರ ರಾತ್ರಿ ನಡೆದಿದೆ.
ಲಾಕ್ಡೌನ್ ವೇಳೆ ನಗರದೆಲ್ಲೆಡೆ ಗಸ್ತು ತಿರುಗುತ್ತಿದ್ದ ಮಾರ್ಕೆಟ್ ಠಾಣೆ ಸಿಬ್ಬಂದಿಗಳಾದ ಮಹಾಂತೇಶ ಅಂಗಳಗಿ, ಸೋಮು ದುರ್ಗಿ ಹಾಗೂ ಸಂಜೀವ ಪಾತ್ರೋಟ ಎಂಬುವರ ಮೇಲೆ ಹಲ್ಲೆ ನಡೆದಿದೆ. ಹಲ್ಲೆ ನಡೆಸಿದ ಗುಂಪು ಪರಾರಿಯಾಗಿದ್ದಾರೆ.
ದರ್ಬಾರ್ ಗಲ್ಲಿಯಲ್ಲಿದ್ದ ಸಿಸಿ ಕ್ಯಾಮರಾಗಳಲ್ಲಿ ಸೆರೆಯಾದ ದೃಶ್ಯಗಳ ಆಧಾರದ ಮೇಲೆ ಪೊಲೀಸರು ಹಲ್ಲೆಕೋರರ ಬಂಧನಕ್ಕೆ ಜಾಲ ಬೀಸಿದ್ದಾರೆ. ಲಾಕ್ ಡೌನ್ ಹಿನ್ನೆಲೆಯಲ್ಲಿ ಸೋಮವಾರ ರಾತ್ರಿ ಮಾರ್ಕೆಟ್ ಠಾಣೆ ವ್ಯಾಪ್ತಿಯಲ್ಲಿ ಪೊಲೀಸರು ಗಸ್ತು ತಿರುಗುತ್ತಿದ್ದರು. ಲಾಕ್ಡೌನ್ ನಿಯಮ ಉಲ್ಲಂಘಿಸಿ ಕೆಲ ಯುವಕರು ಆಟೋ ರಿಕ್ಷಾದಲ್ಲಿ ಕುಳಿತು ಹರಟೆ ಹೊಡೆಯುತ್ತಿದ್ದರು. ಈ ವೇಳೆ ಮನೆಗೆ ಹೋಗುವಂತೆ ಪೊಲೀಸರು ತಾಕೀತು ಮಾಡಿದ್ದಾರೆ. ಆಗ ಯುವಕರು ಪೊಲೀಸರೊಂದಿಗೆ ವಾಗ್ವಾದ ನಡೆಸಿದ್ದಾರೆ.
ಬಳಿಕ ಅಲ್ಲಿದ್ದ ಸುಮಾರು 20-25 ಜನರ ಗುಂಪು ಸೇರಿ ಪೊಲೀಸರ ಮೇಲೆ ಹಲ್ಲೆ ನಡೆಸಿ ಪರಾರಿಯಾಗಿದೆ. ನಂತರ ಪೊಲೀಸರು ಠಾಣೆಗೆ ಮಾಹಿತಿ ನೀಡುತ್ತಿದ್ದಂತೆ ಸ್ಥಳಕ್ಕೆ ಧಾವಿಸುತ್ತಿದ್ದಂತೆ ಗುಂಪು ಚದುರಿ ಹೋಗಿದೆ. ಸ್ಥಳದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ನಿಯೋಜಿಸಲಾಗಿದೆ. ಹಲ್ಲೆ ನಡೆಸಿದವರ ಶೋಧ ನಡೆದಿದೆ. ಮಾರ್ಕೆಟ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.