ಬೆಂಗಳೂರು: ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಅವರನ್ನು ಕೂಡಲ ಸಂಗಮ ಪಂಚಮಸಾಲಿ ಪೀಠದ ಬಸವ ಜಯ ಮೃತ್ಯುಂಜಯ ಸ್ವಾಮೀಜಿ ಗುರುವಾರ ರಾತ್ರಿ ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ.
ಬಿಜೆಪಿ ಸರ್ಕಾರದ ನಾಯಕತ್ವ ವಿಚಾರಕ್ಕೆಸಂಬಂಧಿಸಿ ಅರುಣ್ ಸಿಂಗ್ ಅವರು ಪಕ್ಷದ ಮುಖಂಡರ ಅಭಿಪ್ರಾಯ ಸಂಗ್ರಹಿಸಿದ್ದು, ಸುಮಾರು 53 ಮಂದಿ ಶಾಸಕರೊಂದಿಗೆ ವೈಯಕ್ತಿಕವಾಗಿ ಚರ್ಚೆ ನಡೆಸಿದ್ದಾರೆ. ಆದರೆ ಇದಾದ ಬಳಿಕ ಬಸವ ಜಯ ಮೃತ್ಯುಂಜಯ ಸ್ವಾಮೀಜಿ ಚರ್ಚೆ ನಡೆಸಿದ್ದಾರೆ. ಈ ವೇಳೆ ಸಿಎಂ ಬದಲಾವಣೆ ಮಾಡುವುದಾದರೆ ಆ ಹುದ್ದೆಗೆ ಪಂಚಮಸಾಲಿ ಸಮುದಾಯವನ್ನು ಪರಿಗಣಿಸುವಂತೆ ಸೂಚನೆ ನೀಡಿದ್ದಾರೆ ಎನ್ನಲಾಗಿದೆ.
ಪಂಚಮಸಾಲಿ ಸಮುದಾಯವು ರಾಜ್ಯದಲ್ಲಿ ಪ್ರಮುಖ ಸಮುದಾಯವಾಗಿದೆ. ಹೆಚ್ಚು ಮಂದಿ ಬಿಜೆಪಿ ಶಾಸಕರು ಕೂಡಾ ಇದೇ ಸಮುದಾಯದವರಾಗಿದ್ದಾರೆ. ಆದರೆ, ಮುರುಗೇಶ್ ನಿರಾಣಿ ಮತ್ತು ಸಿ.ಸಿ.ಪಾಟೀಲ್ಗೆ ಮಾತ್ರ ಸಚಿವ ಸ್ಥಾನ ನೀಡಲಾಗಿದೆ. ಹೀಗಾಗಿ, ಮುಂದಿನ ಮುಖ್ಯಮಂತ್ರಿ ಹುದ್ದೆಗೆ ತಮ್ಮ ಸಮುದಾಯದವರನ್ನೇ ಪರಿಗಣಿಸಬೇಕು ಎಂದು ಶ್ರೀಗಳು ಅರುಣ್ ಸಿಂಗ್ ಜೊತೆ ಮಾತುಕತೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.