Breaking News
Home / ರಾಜಕೀಯ / ಲಾಕ್‍ಡೌನ್ ನಿಯಮ ಉಲ್ಲಂಘನೆ: ಸಿಎಂ ಪುತ್ರ ವಿಜಯೇಂದ್ರ ವಿರುದ್ಧ ಕ್ರಮಕ್ಕೆ ಹೈಕೋರ್ಟ್ ಆದೇಶ

ಲಾಕ್‍ಡೌನ್ ನಿಯಮ ಉಲ್ಲಂಘನೆ: ಸಿಎಂ ಪುತ್ರ ವಿಜಯೇಂದ್ರ ವಿರುದ್ಧ ಕ್ರಮಕ್ಕೆ ಹೈಕೋರ್ಟ್ ಆದೇಶ

Spread the love

ಬೆಂಗಳೂರು, ಜೂ.18: ಲಾಕ್‍ಡೌನ್ ನಿಯಮಗಳನ್ನು ಉಲ್ಲಂಘಿಸಿ ಮೈಸೂರು ಜಿಲ್ಲೆಯ ನಂಜನಗೂಡಿನ ಶ್ರೀಕಂಠೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿರುವುದು ಖಚಿತವಾದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಪುತ್ರ ಬಿ.ವೈ. ವಿಜಯೇಂದ್ರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಬೇಕು ಎಂದು ಹೈಕೋರ್ಟ್ ರಾಜ್ಯ ಸರಕಾರಕ್ಕೆ ಆದೇಶಿಸಿದೆ.

ಕೋವಿಡ್ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವಂತೆ ಕೋರಿ ಸಲ್ಲಿಸಿರುವ ಪಿಐಎಲ್ ಅರ್ಜಿಗಳ ವಿಚಾರಣೆ ನಡೆಸಿದ ಹೈಕೋರ್ಟ್ ವಿಭಾಗೀಯ ನ್ಯಾಯಪೀಠ, ಸಾರ್ವಜನಿಕರಿಗೆ ದೇವಾಲಯಕ್ಕೆ ಪ್ರವೇಶವಿಲ್ಲ ಎಂದರೆ ಯಾರಿಗೂ ಇಲ್ಲ ಎಂದೇ ಅರ್ಥ. ಅಂತಹದ್ದರಲ್ಲಿ ರಾಜಕಾರಣಿಗಳು ಹೇಗೆ ಭೇಟಿ ನೀಡಲು ಸಾಧ್ಯ. ರಾಜಕಾರಣಿಗಳಿಗೆ ಇತರರಿಗಿಂತ ಹೆಚ್ಚು ಹೊಣೆಗಾರಿಕೆಯಿರುತ್ತದೆ. ಈ ಪ್ರಕರಣ ಸಂಬಂಧಪಟ್ಟ ಎಲ್ಲರ ಕಣ್ತೆರೆಸಬೇಕು. ಅಧಿಕಾರಿಗಳು, ರಾಜಕಾರಣಿಗಳಿಗೆ ಅರಿವಾಗಬೇಕು .ಹೀಗಾಗಿ ನಿರ್ಬಂಧ ಮೀರಿ ದೇವವಸ್ಥಾನ ಪ್ರವೇಶಿಸಿದವರ ವಿರುದ್ಧ ವಿಪತ್ತು ನಿರ್ವಹಣಾ ಕಾಯ್ದೆಯಡಿ ಕಠಿಣ ಕ್ರಮ ಕೈಗೊಳ್ಳಬೇಕು. ಈ ಕುರಿತಂತೆ ಮುಜರಾಯಿ ಇಲಾಖೆ ಸೂಕ್ತ ನಿರ್ದೇಶನ ನೀಡಬೇಕು ಎಂದು ನಿರ್ದೇಶಿಸಿ, ವಿಚಾರಣೆ ಮುಂದೂಡಿತು.

ಇದಕ್ಕೂ ಮುನ್ನ ಪ್ರಕರಣದ ಕುರಿತು ಜಿಲ್ಲಾಧಿಕಾರಿ ನಡೆಸಿದ್ದ ಪ್ರಾಥಮಿಕ ತನಿಖಾ ವರದಿಯನ್ನು ಪೀಠಕ್ಕೆ ಸಲ್ಲಿಸಲಾಯಿತು. ಈ ವೇಳೆ ಅಡ್ವಕೇಟ್ ಜನರಲ್ ಪ್ರಭುಲಿಂಗ ನಾವದಗಿ ಸಮರ್ಥನೆ ಕೊಡಲು ಯತ್ನಿಸಿದರು.

ನಂಜನಗೂಡು ದೇವಸ್ಥಾನವನ್ನು ವಿಜಯೇಂದ್ರ ಪ್ರವೇಶಿಸಿದ್ದರು ನಿಜ. ವಿಶೇಷ ದರ್ಶನಕ್ಕೆ ಅವಕಾಶ ನೀಡಿರಲಿಲ್ಲ. ವಿಜಯೇಂದ್ರ ಉದ್ದೇಶಪೂರ್ವಕವಾಗಿ ಭೇಟಿ ನೀಡಿರಲಿಲ್ಲ. ಪೂಜೆ ವೇಳೆ ಅರ್ಚಕರು ಕರೆದರೆಂದು ಹೋಗಿದ್ದಾರೆ. ಕೇವಲ ಐದು ಹತ್ತು ನಿಮಿಷವಷ್ಟೇ ದೇವಾಸ್ಥಾನದೊಳಗೆ ಇದ್ದರು ಎಂದರು. ಇದಕ್ಕೆ ಪ್ರತಿಕ್ರಿಯಿಸಿದ ಪೀಠ, ನಿರ್ಬಂಧ ಇದ್ದರೂ ಜನ ದೇವಾಲಯಕ್ಕೆ ಹೋಗಬಹುದೇ? ಅರ್ಚಕರದಷ್ಟೇ ಹೊಣೆಯೇ? ಹೋದವರದ್ದು ಇಲ್ಲವೇ? ಹಾಗಿದ್ದರೆ ಜನಸಾಮಾನ್ಯರಿಗೂ ಆ ಅವಕಾಶ ನೀಡಬೇಕಿತ್ತಲ್ಲವೇ ಎಂದು ಪ್ರಶ್ನಿಸಿತು.

ಕಳೆದ ಎಪ್ರಿಲ್‍ನಲ್ಲಿ ಕೋವಿಡ್ ಎರಡನೇ ಅಲೆ ತೀವ್ರವಾಗಿದ್ದ ಹಿನ್ನೆಲೆಯಲ್ಲಿ ರಾಜ್ಯ ಸರಕಾರ ಲಾಕ್‍ಡೌನ್ ಜಾರಿ ಮಾಡಿತ್ತು. ಅಗತ್ಯ ವಸ್ತುಗಳ ಖರೀದಿ ಹಾಗೂ ತುರ್ತು ಸೇವೆ ಹೊರತುಪಡಿಸಿ ಬೇರೆಲ್ಲದಕ್ಕೂ ನಿರ್ಬಂಧ ವಿಧಿಸಿತ್ತು. ಈ ಮಧ್ಯೆ ಸಿಎಂ ಪುತ್ರ ವಿಜಯೇಂದ್ರ ತಮ್ಮ ಪತ್ನಿ ಹಾಗೂ ಕುಟುಂಬದೊಂದಿಗೆ ನಂಜನಗೂಡಿನ ಶ್ರೀಕಂಠೇಶ್ವರಸ್ವಾಮಿ ದೇವಸ್ಥಾನಕ್ಕೆ ತೆರಳಿ ವಿಶೇಷ ಪೂಜೆ ನೆರವೇರಿಸಿದ್ದರು, ವಿಜಯೇಂದ್ರ ಅವರ ಈ ನಡವಳಿಕೆಗೆ ಸಾರ್ವಜನಿಕ ವಲಯದಲ್ಲಿ ಅಸಮಾಧಾನ ವ್ಯಕ್ತವಾಗಿತ್ತು.


Spread the love

About Laxminews 24x7

Check Also

ಮಾಜಿ ಪ್ರಧಾನಿಗಳ ಮೊಮ್ಮಗ, ಸಂಸದ ದೇಶ ಬಿಟ್ಟು ಪರಾರಿಯಾಗಿರುವುದು ನಾಚಿಕೆಗೇಡು : ಡಿಕೆಶಿ

Spread the loveಬೆಂಗಳೂರು,ಏ.28- ತಲೆ ತಗ್ಗಿಸುವ ಕೆಲಸ ಮಾಡಿ ಮಾಜಿ ಪ್ರಧಾನಿಗಳ ಮೊಮ್ಮಗ ಹಾಗೂ ಸಂಸದ ದೇಶ ಬಿಟ್ಟು ಪರಾರಿಯಾಗಿರುವುದು ನಾಚಿಕೆಗೇಡಿನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ