ಬೆಂಗಳೂರು: ಕೊರೋನಾ 3ನೇ ಅಲೆ ಮಕ್ಕಳ ಮೇಲೆ ಪರಿಣಾಮ ಬೀರುವ ಆತಂಕ ಇರುವುದರಿಂದ ಬೆಂಗಳೂರಿನಲ್ಲಿ ಮಕ್ಕಳಿಗಾಗಿಯೇ ಪ್ರತ್ಯೇಕ ಕೋವಿಡ್ ಆಸ್ಪತ್ರೆ ನಿರ್ಮಿಸುವಂತೆ ಸಲಹೆ ಬಂದಿದೆ. ಈ ಬಗ್ಗೆ ಸರ್ಕಾರ ಚಿಂತನೆ ನಡೆಸುತ್ತಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಶಶಿಕಲಾ ಜೊಲ್ಲೆ ಹೇಳಿದ್ದಾರೆ.
‘ಈ ಕುರಿತು ಮುಖ್ಯಮಂತ್ರಿಯನ್ನು ಶೀಘ್ರದಲ್ಲೇ ಭೇಟಿ ಮಾಡಿ ಮಾತುಕತೆ ನಡೆಸಲಿದ್ದು, ಅವರ ಅಂತಿಮ ಆದೇಶದಂತೆ ನಿರ್ಧಾರ ಕೈಗೊಳ್ಳಲಾಗುತ್ತದೆ. ಸಮುದಾಯ ಕೇಂದ್ರಗಳು ಹಾಗೂ ಗ್ರಾಮೀಣ ಪ್ರದೇಶಗಳಲ್ಲಿನ ಸ್ಥಳೀಯ ಶಾಲೆಗಳನ್ನು ಕೋವಿಡ್ ಕೇರ್ ಕೇಂದ್ರಗಳಿಗೆ ಬಳಕೆ ಮಾಡಿಕೊಳ್ಳಲು ನಿರ್ಧರಿಸಲಾಗಿದೆ ಎಂದು ಸುದ್ದಿಗಾರರಿಗೆ ತಿಳಿಸಿದರು.
ರಾಜ್ಯದ ವಿವಿಧೆಡೆ ಮಕ್ಕಳಿಗಾಗಿಯೇ 1419 ಹಾಸಿಗೆಗಳನ್ನು ಕಾಯ್ದಿರಿಸಲಾಗಿದೆ. ಇದರಲ್ಲಿ 141 ವೆಂಟಿಲೇಟರ್ ಹಾಸಿಗೆ, 116 ವೆಂಟಿಲೇಟರ್ ರಹಿತ ಐಸಿಯು ಹಾಸಿಗೆ, 430 ಎಚ್ಡಿಯು ಹಾಸಿಗೆ ಹಾಗೂ 712 ಸಾಮಾನ್ಯ ಹಾಸಿಗೆಗಳಾಗಿವೆ ಎಂದು ಹೇಳಿದರು.
1 ಮತ್ತು 2ನೇ ಅಲೆಯ ವೇಳೆ ಕೋವಿಡ್ ಸೋಂಕಿನಿಂದ 51 ಮಕ್ಕಳು ಮೃತಪಟ್ಟಿದ್ದಾರೆ. ಒಟ್ಟು 2,38,257 ಮಕ್ಕಳಿಗೆ ಸೋಂಕು ತಗುಲಿತ್ತು. ಒಂದು ಮತ್ತು 2ನೇ ಅಲೆಯಲ್ಲಿ 50 ಮಕ್ಕಳು ತಮ್ಮ ಪೋಷಕರನ್ನು ಕಳೆದುಕೊಂಡಿದ್ದಾರೆ. ಅನಾಥ ಮಕ್ಕಳಿಗೆ ಮುಖ್ಯಮಂತ್ರಿ ಬಾಲ ಸೇವಾ ಯೋಜನೆ ಮೂಲಕ ಸಹಾಯಧನ ನೀಡಲಾಗುವುದು. ಈ ಯೋಜನೆಯಲ್ಲಿ ಪ್ರತೀ ತಿಂಗಳು ತಲಾ ₹ 3,500 ನೀಡಲಾಗುವುದು. ಜೊತೆಗೆ ಉಚಿತ ಶಿಕ್ಷಣ ನೀಡಲಾಗುವುದು. 21 ವರ್ಷ ತುಂಬಿದ ಹೆಣ್ಣು ಮಕ್ಕಳಿಗೆ ರೂ.1 ಲಕ್ಷ ನೀಡಲು ತೀರ್ಮಾನಿಸಲಾಗಿದೆ ಎಂದರು.