ಪಣಜಿ: ಸಿಎಂ ಯಡಿಯೂರಪ್ಪ ಬದಲಾವಣೆ ಮಾಡಬಾರದು ಎಂದು ಹಲವು ಮಠಾಧೀಶರು ಒತ್ತಾಯಿಸುತ್ತಿರುವ ಬೆನ್ನಲ್ಲೇ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ನೀಡಿರುವ ಹೇಳಿಕೆ ಅಚ್ಚರಿಗೆ ಕಾರಣವಾಗಿದ್ದು, ಹೈಕಮಾಂಡ್ ಸೂಚನೆಯನ್ನು ಎಲ್ಲರೂ ಪಾಲಿಸಬೇಕು ಎಂದು ಹೇಳುವ ಮೂಲಕ ಪರೋಕ್ಷವಾಗಿ ಬಿ.ಎಸ್.ವೈ.ಗೆ ರಾಜೀನಾಮೆ ಕುರಿತು ಸಲಹೆ ನೀಡಿದ್ದಾರೆ.
ಗೋವಾದಲ್ಲಿ ಮಾತನಾಡಿದ ಸಿ.ಟಿ. ರವಿ, ಸಿಎಂ ಯಡಿಯೂರಪ್ಪ ಜನಪ್ರಿಯ ನಾಯಕ ಎಂಬುದರಲ್ಲಿ ಯಾವುದೇ ಅನುಮಾನವಿಲ್ಲ. ಬಿ.ಎಸ್.ವೈ.ಗೆ ಪಕ್ಷ ಎಲ್ಲವನ್ನೂ ನೀಡಿದೆ. ವಿಪಕ್ಷ ನಾಯಕನಾಗಿ, ಉಪಮುಖ್ಯಮಂತ್ರಿಯಾಗಿಯೂ ಕಾರ್ಯ ನೀರ್ವಹಿಸಿದ್ದಾರೆ. 4 ಬಾರಿ ಮುಖ್ಯಮಂತ್ರಿಯಾಗಿ ಜನಸೇವೆ ಮಾಡುವ ಅವಕಾಶ ನೀಡಲಾಗಿದೆ. ಇಷ್ಟೊಂದು ಅವಕಾಶವನ್ನು ಬೇರೆ ಯಾವುದೇ ಪಕ್ಷದಲ್ಲಿ ಕೂಡ ನೀಡಲ್ಲ. ಪಕ್ಷದಲ್ಲಿ ಹೈಕಮಾಂಡ್ ಆದೇಶವನ್ನು ಎಲ್ಲರೂ ಪಾಲಿಸಲೇಬೇಕು. ವರಿಷ್ಠರು ತೆಗೆದುಕೊಳ್ಳುವ ನಿರ್ಧಾರಕ್ಕೆ ಬದ್ಧರಾಗಬೇಕು ಎಂದು ಹೇಳುವ ಮೂಲಕ ಟಾಂಗ್ ನೀಡಿದ್ದಾರೆ.
ಯಡಿಯೂರಪ್ಪನವರ ವಿರುದ್ಧ ಸ್ವಪಕ್ಷೀಯ ಶಾಸಕರೇ ಆರೋಪ ಮಾಡುತ್ತಿರುವ ಬಗ್ಗೆ ಪ್ರತಿಕ್ರಿಯಿಸಿದ ಸಿ.ಟಿ. ರವಿ ಈ ಬಗ್ಗೆ ನಾನೇನೂ ಮಾತನಾಡಲ್ಲ, ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಪಕ್ಷದ ಬೆಳವಣಿಗೆ ಬಗ್ಗೆ ಗಮನಿಸುತ್ತಿದ್ದಾರೆ ಎಂದು ಹೇಳಿದರು.